Advertisement

ಕೊಮುಲ್ ವಿಭಜನೆಗೆ ಸಂಪುಟದ ಅಸ್ತು: ಮನವೊಲಿಸಲು ಸಚಿವ ಡಾ.ಕೆ.ಸುಧಾಕರ್ ಯಶಸ್ವಿ

07:31 PM Nov 08, 2021 | Team Udayavani |

ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವನ್ನು ಬೇರ್ಪಡಿಸಿ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಒಕ್ಕೂಟ ದೊರಕಿಸಿಕೊಡುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊಮುಲ್ ಅನ್ನು ಪ್ರತ್ಯೇಕಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಸಹಕಾರಿ ಹಾಲು ಒಕ್ಕೂಟ ಮಂಜೂರು ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಸಚಿವ ಡಾ.ಕೆ.ಸುಧಾಕರ್ ಅವರು ಸಂಪುಟದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಹೈನುಗಾರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯ ಸರ್ಕಾರವು ಜಿಲ್ಲೆಯ ರೈತರ ಹಲವು ವರ್ಷಗಳ ಬೇಡಿಕೆಗೆ ಮನ್ನಣೆ ನೀಡಿದೆ.

ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 14 ವರ್ಷಗಳು ಕಳೆದರೂ ಕೊಚಿಮುಲ್ ಪ್ರತ್ಯೇಕವಾಗಿರಲಿಲ್ಲ. ರೈತರು ಹಾಗೂ ಹಾಲು ಉತ್ಪಾದಕರು ಯಾವುದೇ ಸಮಸ್ಯೆಗಳಿದ್ದರೂ ಕೋಲಾರಕ್ಕೆ ಪ್ರಯಾಣಿಸಬೇಕಿತ್ತು. ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿರುವುದರಿಂದ ಪ್ರತ್ಯೇಕವಾದ ಒಕ್ಕೂಟ, ಆಡಳಿತ ಮಂಡಳಿಯ ಅಗತ್ಯವಿತ್ತು. ಇದಕ್ಕಾಗಿ ಕೊಮುಲ್ ವಿಭಜಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು.

ಈ ಕುರಿತು ಸಂತಸ ವ್ಯಕ್ತಪಡಿಸಿದ ಸಚಿವ ಡಾ.ಕೆ.ಸುಧಾಕರ್, ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ ಇಂದು ಈಡೇರಿದ್ದು, ಜಿಲ್ಲೆಯ ಹೈನುಗಾರರಿಗೆ ತಮ್ಮದೇ ಆದ ಸ್ವಂತ ಸಹಕಾರ ಹಾಲು ಒಕ್ಕೂಟ ಪಡೆಯುವ ಕನಸು ನನಸಾಗಿದೆ. ಇದರಿಂದ ಜಿಲ್ಲೆಯ ಆರ್ಥಿಕವಾಗಿ, ಸಾಮಾಜಿಕವಾಗಿ, ಆಡಳಿತಾತ್ಮಕವಾಗಿ ಬಹಳಷ್ಟು ನೆರವಾಗಲಿದೆ. ಜಿಲ್ಲೆಯ ಜನರ ಕೋರಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೊಮುಲ್ ಷೇರುಗಳಲ್ಲಿ 35 ಕೋಟಿ ರೂ. ನಷ್ಟು ಮೊತ್ತ ಚಿಕ್ಕಬಳ್ಳಾಪುರಕ್ಕೆ ಸೇರುತ್ತದೆ. 15 ಕೋಟಿ ರೂ. ಗೂ ಅಧಿಕ ಮೊತ್ತ ಅಭಿವೃದ್ಧಿ ನಿಧಿ ಇದೆ. ಮೀಸಲು ನಿಧಿಯಲ್ಲೂ ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಪಾಲು ಇದೆ. ಎರಡು ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50 ಸಾವಿರ ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಪ್ರತ್ಯೇಕ ಹಾಲು ಒಕ್ಕೂಟಗಳಿವೆ. ಇದನ್ನು ಉದಾಹರಣೆಯಾಗಿ ಪರಿಗಣಿಸಿದರೆ ಚಿಕ್ಕಬಳ್ಳಾಪುರ ಕೂಡ ಪ್ರತ್ಯೇಕ ಒಕ್ಕೂಟ ಹೊಂದುವುದು ಅತ್ಯಂತ ನ್ಯಾಯಯುತ ಬೇಡಿಕೆಯಾಗಿತ್ತು ಮತ್ತು ಆಡಳಿತದ, ರೈತರ ಹಿತದೃಷ್ಟಿಯಿಂದ ಸೂಕ್ತವೂ ಆಗಿತ್ತು. ಬೇಸಿಗೆಯಲ್ಲೂ ಜಿಲ್ಲೆಯಲ್ಲಿ 3.50 ಲಕ್ಷ ಹಾಲು ಉತ್ಪಾದನೆಯಾಗುತ್ತದೆ. ಆದ್ದರಿಂದ ಪ್ರತ್ಯೇಕ ಒಕ್ಕೂಟ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next