ಕೊಪ್ಪಳ: ಬಾಲ್ಯ ವಿವಾಹ ಹಾಗೂ ಲೈಂಗಿಕ ಅಪರಾಧಕ್ಕೊಳಗಾಗಿ ನೊಂದ ಬಾಲಕಿಯರಿಗೆ ರಕ್ಷಣೆ, ಪರಿಹಾರ ಸೇರಿದಂತೆ ಇತ್ಯಾದಿ ಕಾನೂನು ಪರಿಹಾರಗಳನ್ನು ಶೀಘ್ರವಾಗಿ ಒದಗಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಂಜೀವ ಕುಲಕರ್ಣಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ರವಿವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಆಶ್ರಯದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ-2016, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆ-2012ರ ಕುರಿತು ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆಗಳಡಿ ಎಲ್ಲ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಪೊಲೀಸ್ ಅಧಿಕಾರಿಗಳು ತನಿಖಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತನಿಖಾ ಕಾರ್ಯವು ಇನ್ನೂ ತ್ವರಿತವಾಗಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ತನಿಖಾಧಿಕಾರಿಗಳು 164 ಸ್ಟೇಟ್ಸ್ ಮೆಂಟ್ಸ್ಗಳನ್ನು ಮಾಡಬೇಕು. ನೊಂದ ಬಾಲಕಿಯರಿಗೆ ಯಾವ ರೀತಿಯ ಕಾನೂನು ಸೇವೆ ಒದಗಿಸಬೇಕು ಎಂಬ ಬಗ್ಗೆ ಹೆಚ್ಚು ಅರಿವು ಮೂಡಿಸುವಲ್ಲಿ ಕಾರ್ಯಾಗಾರ ಪೂರಕವಾಗಿದೆ ಎಂದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಾಧಿಕಾರದಿಂದ ಜಿಲ್ಲೆಯ ವಿವಿಧ ಗ್ರಾಮಗಳ ಶಾಲೆಗಳಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಆದರೂ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಬಾಲ್ಯ ವಿವಾಹಗಳು ಜರುಗುತ್ತಿವೆ. ಬಾಲ್ಯ ವಿವಾಹ ಪಿಡುಗಿಗೆ ಹೆಣ್ಣುಮಕ್ಕಳ ಹೊಂಗನಸು ಕಮರಿ ಹೋಗುತ್ತಿದೆ. ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಮತ್ತು ತಾಯಿ, ಮಕ್ಕಳ ಅಪೌಷ್ಟಿಕತೆ ನಿವಾರಣೆ, ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಹಾಗೂ ಮಕ್ಕಳ ಮೇಲಾಗುವ ದೌರ್ಜನ್ಯ ತಡೆಯಲು ಭಾರತ ಸರ್ಕಾರವು 2006ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು, ರಾಜ್ಯ ಸರ್ಕಾರವು ತಿದ್ದುಪಡಿ ಮಾಡಿದೆ. ಬಾಲ್ಯ ವಿವಾಹ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಸಹಿತ ನಿರ್ದೇಶನ ನೀಡಿದೆ. ಬಾಲ್ಯ ವಿವಾಹ ಮಾಡಿಕೊಂಡ, ಮಾಡಿದ ಹಾಗೂ ಪ್ರೋತ್ಸಾಹಿಸಿದ, ಭಾಗವಹಿಸಿದವರಿಗೂ ಕನಿಷ್ಟ 1-2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಬಹುದಾಗಿದೆ. ಪೊಲೀಸ್ ಅಧಿಕಾರಿಗಳು ಸೂ-ಮೂಟೋ ಪ್ರಕರಣದಡಿ ದೂರು ದಾಖಲಿಸಬಹುದು ಎಂದರು.
ಎಸ್ಪಿ ರೇಣುಕಾ ಸುಕುಮಾರ್ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾಯ್ದೆಗಳಡಿ ಪ್ರಕರಣಗಳನ್ನು ದಾಖಲಿಸಿ ಚಾರ್ಜ್ ಶೀಟ್ಗಳನ್ನು 60 ದಿನಗಳೊಳಗೆ ಸಲ್ಲಿಸಬೇಕಾಗಿದೆ. ನ್ಯಾಯಾ ಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಪೊಲೀಸ್ ಅಧಿಕಾರಿಗಳು ತಮಗೆ ಈ ಕುರಿತು ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ಕೇಳಿ ಸಂಪೂರ್ಣ ಮಾಹಿತಿ ಪಡೆಯಿರಿ ಎಂದರು.
ನಿವೃತ್ತ ಜಿಲ್ಲಾ ನ್ಯಾಯಾಧಿಧೀಶರಾದ ಎಸ್.ಎಚ್. ಮಿಟ್ಟಲ್ ಕೋಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ, ಕಲ್ಲಪ್ಪ ತಳವಾರ, ರವಿ ಬಸರಿಹಳ್ಳಿ ಸೇರಿದಂತೆ ಇತರರು ಇದ್ದರು.