Advertisement

ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕ ಕುಮಾರಸ್ವಾಮಿ ಮಾತ್ರ: ನಿಖಿಲ್

05:31 PM Apr 29, 2022 | Team Udayavani |

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕರು ಯಾರಾದರೂ ಇದ್ದರೆ ಅದು ಕುಮಾರಸ್ವಾಮಿ ಅವರು ಮಾತ್ರ. ಅವರು ಯಾವಾಗಲೂ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಮಾಡಿದ ವಿಚಾರವೇ ಇದಕ್ಕೆ ಸಾಕ್ಷಿ. ರೈತರ ಸಾಲದ ಹೊರೆ ಇಳಿಸುತ್ತೇನೆ ಅಂತ ಹೇಳಿದ್ದರು, ಅದೇ ರೀತಿ ಮಾಡಿದರು. ಹಾಗಾಗಿ ಮುಂದೆ ಎಲ್ಲರೂ ಸೇರಿ ಕುಮಾರಸ್ವಾಮಿಯವರಿಗೆ ಬೆಂಬಲ ಕೊಡಬೇಕು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಶುಕ್ರವಾರ ನಡೆದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತಿದೆ. ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ರಾಜ್ಯದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಉಂಟು ಮಾಡಲಾಗುತ್ತಿದೆ. ಇದಕ್ಕೆ ಯಾರು ಕಾರಣ? ಈ ವಿಚಾರದಲ್ಲಿ ಕಾಂಗ್ರೆಸ್ ನವರು ಯಾರು ಮಾತನಾಡಲಿಲ್ಲ. ಆದರೆ ಕುಮಾರಸ್ವಾಮಿ ಅವರು ಸುಮ್ಮನೆ ಇರಲಿಲ್ಲ ಎಂದು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಆಕ್ರೋಶಗೊಂಡರು. ರಾಜ್ಯದಲ್ಲಿ ಶಾಂತಿ ಇರಬೇಕು ಅಂತ ಮಾತನಾಡಿದ್ದು ಕುಮಾರಸ್ವಾಮಿಯವರು. ಹಾಗಾಗಿ ನೀವೆಲ್ಲರೂ ಜೆಡಿಎಸ್‌ಗೆ ಬೆಂಬಲ ನೀಡಬೇಕು ಎಂದರು.

ಜನತಾ ಜಲಧಾರೆ ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ. ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದಕ್ಕೆ ಬಹಳ ಸಂತೋಷ ಇದೆ. ಬಿ.ಮುನೇಗೌಡ ಅವರು ಈ ಭಾಗದ ಮುಂದಿನ ಚುನಾವಣೆಯ ಜೆಡಿಎಸ್ ಅಭ್ಯರ್ಥಿ. ಅವರು ಗೆದ್ದೇ ಗೆಲ್ತಾರೆ ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next