ಬೆಳಗಾವಿ: ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿಹೆಬ್ಟಾಳಕರ್ ಶುಕ್ರವಾರ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಲವಾರು ಹಳ್ಳಿಗಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಕಣೀ¡ರು ಒರೆಸುವ ಪ್ರಯತ್ನ ಮಾಡಿದರು.
ನಂದಿಹಳ್ಳಿ, ರಾಜಹಂಸಗಡ, ಹಿರೇಬಾಗೇವಾಡಿ ಮೊದಲಾದ ಪ್ರದೇಶಕ್ಕೆ ಭೇಟಿ ನೀಡಿದ ಅವರು, ನಿರಂತರ ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡವರಿಗೆ ಸಾಂತ್ವನ ಹೇಳಿ ಪರಿಹಾರ ನೀಡುವ ಭರವಸೆ ನೀಡಿದರು.
ಸಂಪೂರ್ಣ ಗ್ರಾಮೀಣ ಕ್ಷೇತ್ರದ ನಷ್ಟದ ಅಂದಾಜು ತಯಾರಿಸಲಾಗುತ್ತಿದ್ದು, ಪರಿಹಾರಕ್ಕಾಗಿ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೆಬ್ಟಾಳಕರ ಹೇಳಿದರು.ರಾತ್ರಿ ಸಭೆ: ಪ್ರವಾಹದಿಂದ ತೊಂದರೆ ಅನುಭವಿಸುತ್ತಿರುವ ಗ್ರಾಮೀಣ ಕ್ಷೇತ್ರದ ಜನರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರು ಶುಕ್ರವಾರ ರಾತ್ರಿ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ಸಭೆ ನಡೆಸಿ ಚುರುಕು ಮುಟ್ಟಿಸಿ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಕ್ಷೇತ್ರದಲ್ಲಿ ಮಳೆಯಿಂದ ಆದ ಅನಾಹುತ, ಮನೆಗಳ ಹಾನಿ, ಕೃಷಿ ಭೂಮಿಗಳ ಹಾನಿ ಕುರಿತು ವರದಿ ಪಡೆದುಕೊಂಡ ಶಾಸಕಿ ಹೆಬ್ಟಾಳಕರ, ಹಾನಿಗೊಳಗಾದವರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಗತ್ಯ ಇರುವ ಎಲ್ಲ ಕಡೆಗೆ ಗಂಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಶ್ರಯ ಒದಗಿಸಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ತಹಶೀಲ್ದಾರ ಮಂಜುಳಾ ನಾಯಕ, ತಾಪಂ ಇಒ ಮಲ್ಲಿಕಾರ್ಜುನ ಕಲಾದಗಿ, ಎಲ್ಲ ಇಲಾಖೆ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.