ನವದೆಹಲಿ: ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಪರಿಣಾಮ ಪ್ರಸಿದ್ಧ ಕ್ಷೇತ್ರ ಬದರಿನಾಥಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಭಾಗ ಕೊಚ್ಚಿಕೊಂಡು ಹೋಗಿರುವ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ಗುರುವಾರ (ಜೂ.29) ಸಂಭವಿಸಿದ್ದು, ಇದರಿಂದಾಗಿ ಪ್ರವಾಸಿಗರು ಮಾರ್ಗಮಧ್ಯದಲ್ಲೇ ಕಾಲಕಳೆಯುವಂತಾಗಿದೆ ಎಂದು ವರದಿ ತಿಳಿಸಿದೆ.
ಬದರಿನಾಥಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ 7ರ ಒಂದು ಭಾಗ ಕೊಚ್ಚಿಕೊಂಡು ಹೋಗಿದ್ದು, ಭಾರೀ ಪ್ರಮಾಣದ ಮಣ್ಣು ಹಾಗೂ ಕಲ್ಲುಬಂಡೆಗಳು ಬಿದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪಿಟಿಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಧಾರಾಕಾರ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ 19 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಮೂವರು ನಾಪತ್ತೆಯಾಗಿದ್ದರು.
ದೆಹಲಿಯಲ್ಲಿಯೂ ಭಾರೀ ಮಳೆ ಬಂದಿದ್ದು, ಗರಿಷ್ಠ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕೆಲವು ಭಾಗಗಳು ಜಲಾವೃತಗೊಂಡಿರುವುದಾಗಿ ವರದಿ ತಿಳಿಸಿದೆ.