Advertisement

ರಾಜ್ಯ ಸರ್ಕಾರವೇ ರಾಷ್ಟ್ರೀಕೃತ ಬ್ಯಾಂಕ್‌ಸಾಲ ಮನ್ನಾ ಮಾಡಲಿ

11:01 AM Aug 15, 2017 | Team Udayavani |

ಬೆಂಗಳೂರು: “ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಬೇಕು’ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.  

Advertisement

ಜಲ ವಿವಾದಗಳ ಕುರಿತು ನಡೆದ ಸರ್ವ ಪಕ್ಷ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನೂ ಮನ್ನಾ ಮಾಡಿವೆ. ಅದೇ ರೀತಿ ರಾಜ್ಯ ಸರ್ಕಾರವೂ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುವುದನ್ನು ರಾಜ್ಯ ಸರ್ಕಾರ ಕೈ ಬಿಡಬೇಕು’ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ದೊರೆಯುತ್ತಿದ್ದ ಅನುದಾನದಲ್ಲಿ ಶೇ.10 ರಷ್ಟು ಹೆಚ್ಚಳ ಮಾಡಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ
ಮೊದಲು ಶೇ.32ರಷ್ಟು ಕೇಂದ್ರದ ಅನುದಾನ ಬರುತ್ತಿತ್ತು. ಈಗ ಶೇ.42ಕ್ಕೆ ಹೆಚ್ಚಳವಾಗಿದೆ ಎಂದು ಹೇಳಿದರು.

ಸಿಎಂ ತಿರುಗೇಟು: ಸದಾನಂದಗೌಡರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಹಿಂದೆ ಮನಮೋಹನ್‌ ಸಿಂಗ್‌ ಸರ್ಕಾರ 72 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದಾಗ ಇದೇ ರೀತಿ ಮಾತನಾಡಬೇಕಿತ್ತು. ವಿ.ಪಿ. ಸಿಂಗ್‌ ಸರ್ಕಾರವೂ ರೈತರ ಸಾಲಮನ್ನಾ ಮಾಡಿತ್ತು. ಆಗ
ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಯವರು ಈಗ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲು ಬರುವುದಿಲ್ಲ ಎನ್ನುತ್ತಾರೆ. ನಾವು ನಮ್ಮ ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡಲೇಬೇಕು ಎಂದು ಆಗ್ರಹಿಸಿದರು.

ಅಮಿತ್‌ ಶಾಗೆ ನೈತಿಕತೆ ಇಲ್ಲ 
“ರಾಜ್ಯ ಸರ್ಕಾರದ ಬಗ್ಗೆ ಆರೋಪ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಗೆ ನೈತಿಕತೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೇ ಜನಪರ ಆಡಳಿತ ನಡೆಸಿಕೊಂಡು ಬಂದಿದೆ. ಅವರು ಭ್ರಷ್ಟಾಚಾರಿಗಳ ಜತೆ ಕುಳಿತು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next