Advertisement

ನಿಷ್ಪಕ್ಷಪಾತ ತನಿಖೆ ನಡೆಯಲಿ

01:11 AM Aug 20, 2019 | mahesh |

ಹಿಂದೆ ರಾಮಕೃಷ್ಣ ಹೆಗಡೆ ಮತ್ತು ಎಚ್ ಡಿ ದೇವೇಗೌಡರ ನಡುವಿನ ರಾಜಕೀಯ ಗುದ್ದಾಟಕ್ಕೆ ಫೋನ್‌ ಕದ್ದಾಲಿಕೆ ಕಾರಣವಾಗಿತ್ತು. ಈಗ ದೇವೇಗೌಡರ ಪುತ್ರ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ನಡುವೆ ಸಮರಕ್ಕೆ ಕಾರಣವಾಗಿದೆ.

Advertisement

ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ಪ್ರಕರಣ ದೊಡ್ಡದಾಗಿಯೇ ಸದ್ದು ಮಾಡುತ್ತಿದೆ. ಹಿಂದೆ ರಾಜ್ಯದಲ್ಲಿ ಮೊದಲ ಬಾರಿಗೆ 1988ರಲ್ಲಿ ಜನತಾ ಪಕ್ಷದ ಸರ್ಕಾರ ಇದ್ದಾಗ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂಥದ್ದೊಂದು ಆರೋಪ ಕೇಳಿಬಂದಿತ್ತು. ಇಡೀ ರಾಷ್ಟ್ರದಲ್ಲಿ ಇದು ಸಂಚಲನ ಮೂಡಿಸಿತ್ತು. ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು. ಆಗ ರಾಮಕೃಷ್ಣ ಹೆಗಡೆ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದವರಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಎಚ್.ಡಿ.ದೇವೇಗೌಡರು ಸೇರಿದ್ದರು.

ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾಪಕ್ಷದ ಒಂದು ಗುಂಪು ವಿ.ಪಿ.ಸಿಂಗ್‌ ಆವರ ಜನತಾ ಮೋರ್ಚಾದಲ್ಲಿ ವಿಲೀನವಾಗಿತ್ತು. ಆದರೆ, ಎಚ್.ಡಿ.ದೇವೇಗೌಡರು ಜನತಾಪಕ್ಷದಲ್ಲೇ ಅಜಿತ್‌ ಸಿಂಗ್‌ ಅವರ ಜತೆಯೇ ಉಳಿದುಕೊಂಡಿದ್ದರು. ಆಗ, ದೇವೇಗೌಡರು ಹಾಗೂ ಅಜಿತ್‌ಸಿಂಗ್‌ ನಡುವೆ ಲ್ಯಾಂಡ್‌ಲೈನ್‌ (ಸ್ಥಿರ) ದೂರವಾಣಿ ಮೂಲಕ ನಡೆದ ಮಾತುಕತೆ ಟ್ಯಾಪಿಂಗ್‌ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ಆ ವಿಚಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿ ಆಗಿನ ದೂರಸಂಪರ್ಕ ಸಚಿವರು, ಕೆಲವೊಂದು ಸಮಾಜಘಾತುಕ ಶಕ್ತಿಗಳ ಚಲನವಲನಗಳ ಮೇಲೆ ನಿಗಾ ಇರಿಸಲು ಕರ್ನಾಟಕ ಗುಪ್ತದಳ (ಡಿಐಜಿ)ಗೆ ಅನುಮತಿ ನೀಡಲಾಗಿತ್ತು. 50 ಮಂದಿ ರಾಜಕಾರಣಿಗಳ ದೂರವಾಣಿ ಸಂಭಾಷಣೆ ಸಹ ಟ್ಯಾಪಿಂಗ್‌ ಮಾಡಲಾಗಿದೆ ಎಂದು ಸಂಸತ್‌ನಲ್ಲಿ ಹೇಳಿಕೆ ನೀಡಿದ್ದರು. ಇದು ತೀವ್ರ ಸಂಚಲನ ಮೂಡಿಸಿ ರಾಮಕೃಷ್ಣ ಹೆಗಡೆ ಅವರು ದೆಹಲಿಗೆ ಹೋಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಆ ನಂತರ ಆ ಪ್ರಕರಣದ ಬಗ್ಗೆ ಯಾವುದೇ ತನಿಖೆ ನಡೆದಿರಲಿಲ್ಲ.

ಇದೀಗ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂಬ ಆರೋಪ ಎದುರಾಗಿದೆ. ಆರೋಪ ಮಾಡಿರುವವರಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಸೇರಿದ್ದಾರೆ. ಜೆಡಿಎಸ್‌ ಜತೆ ಸೇರಿ ಸರ್ಕಾರ ರಚನೆ ಮಾಡಿದಾಗಲೇ ಇಂತದ್ದೊಂದು ಆರೋಪ ಕೇಳಿಬಂದಿದೆ. ಇದೀಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

Advertisement

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಈ ಹಂತದಲ್ಲಿ ಸಿಬಿಐ ತನಿಖೆಯಿಂದ ಮುಂದೇನಾಗಬಹುದು ಎಂಬ ಪ್ರಶ್ನೆ ಮೂಡಿದೆ. ರಾಜಕೀಯವಾಗಿ ಕುಮಾರಸ್ವಾಮಿಯವರನ್ನು ಹಣಿಯಲು ಈ ಪ್ರಕರಣ ಬಳಕೆ ಮಾಡಬಹುದೇ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ರಾಜಕಾರಣಿಗಳಿಗಿಂತ ಕೆಲವು ಪೊಲೀಸ್‌ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಲಿದೆ. ಯಾಕೆಂದರೆ ದೂರವಾಣಿ ಕದ್ದಾಲಿಕೆ ಮಾಡಿರುವುದು ಬಹಿರಂಗಗೊಂಡಿರುವುದು ಅಧಿಕಾರಿಗಳ ನಡುವಿನ ಆಂತರಿಕ ಸಂಘರ್ಷದಿಂದ. ಹೀಗಾಗಿ, ಮೊದಲಿಗೆ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗಳ ನೆತ್ತಿ ಮೇಲೆಯೇ ತೂಗುಕತ್ತಿಯಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆ ನಂತರದ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ನಡೆದಿರುವ ಕದ್ದಾಲಿಕೆಗಳೂ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಪರೇಷನ್‌ ಕಮಲ ಕಾರ್ಯಾಚರಣೆ ಬಗ್ಗೆಯೂ ಸಿಬಿಐ ತನಿಖೆಯಾಗಲಿ ಎಂದು ಆಗ್ರಹವನ್ನೂ ಮಾಡಿದ್ದಾರೆ.

ಆದರೆ, ಈಗ ರಾಜ್ಯ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ನಡೆದ ದೂರವಾಣಿ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಬರಲಿ ಎನ್ನುವುದು ಎಲ್ಲರ ಆಶಯ.

Advertisement

Udayavani is now on Telegram. Click here to join our channel and stay updated with the latest news.

Next