ರಾಯಚೂರು: ಸ್ವತಂತ್ರ ಧರ್ಮವಾಗುವ ಎಲ್ಲ ಅರ್ಹತೆ ಲಿಂಗಾಯತ ಸಮಾಜಕ್ಕಿದೆ. ಇದಕ್ಕೆ ನಮ್ಮ ಸರ್ಕಾರದ ಸಹಮತವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಉತ್ತರ ಕರ್ನಾಟಕದ ಉಸ್ತುವಾರಿ ಎಸ್.ಆರ್. ಪಾಟೀಲ ತಿಳಿಸಿದರು.
ಇಲ್ಲಿನ ಕೃಷಿ ವಿವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾನತೆ ತತ್ವ ಅಳವಡಿಸಿಕೊಂಡಿರುವ ಲಿಂಗಾಯತ ಸಮಾಜ, ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟಿದೆ. ಆ ಮೂಲಕ ಅನ್ಯ ಧರ್ಮಗಳಿಗಿಂತ ಭಿನ್ನ ಎನಿಸಿಕೊಂಡಿದೆ ಎಂದರು.
ಬೇರೆ ಪಕ್ಷಗಳು ಧರ್ಮಗಳ, ಜಾತಿಗಳ ಮಧ್ಯದ ಸಾಮರಸ್ಯ ಒಡೆಯುವ ಕೆಲಸ ಮಾಡುತ್ತಿವೆ. ಆದರೆ, ಕಾಂಗ್ರೆಸ್ ಇಂಥ ಕಂದಕಗಳನ್ನು ಕಡಿಮೆ ಮಾಡಲು ಶ್ರಮಿಸುತ್ತಿದೆ. ಎಲ್ಲ ಧರ್ಮ, ಜಾತಿ ಜತೆಗೆ ಎಲ್ಲ ಭಾಷಿಕರನ್ನು ಒಗ್ಗೂಡಿಸುವ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ನಾವು ಎಂದಿಗೂ ಧರ್ಮ ಒಡೆಯುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.
ಪಕ್ಷದ ಸಿದ್ಧಾಂತ ಮುಂದಿಟ್ಟುಕೊಂಡು ಎಲ್ಲೆಡೆ ಸಮಾವೇಶ ನಡೆಸುತ್ತಿದ್ದೇವೆ ವಿನಃ ಬಿಜೆಪಿಯಿಂದ ಪ್ರೇರಿತಗೊಂಡು ಅಲ್ಲ. ಆ. 4ರಂದು ನಗರದಲ್ಲೂ ಬೃಹತ್ ಸಮಾವೇಶ ಆಯೋಜಿಸಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸುವರು. ಸಮಾವೇಶಕ್ಕೆ ಸ್ಥಳ ಪರಿಶೀಲನೆ ನಡೆದಿದ್ದು, ಇತರೆ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸಂಸದ ಬಿ.ವಿ.ನಾಯಕ, ಎಂಎಲ್ಸಿ ಎನ್.ಎಸ್ .ಬೋಸರಾಜು, ಶಾಸಕರಾದ ಪ್ರತಾಪಗೌಡ ಪಾಟೀಲ, ಹಂಪಯ್ಯ ನಾಯಕ, ಡಿ.ಎಸ್. ಹುಲಿಗೇರಿ ಇದ್ದರು.
ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ -ಜೆಡಿಎಸ್ ಚುನಾವಣೆ ಪೂರ್ವ ಹೊಂದಾಣಿಕೆ ಮಾಡಿಕೊಂಡಿವೆ ಎಂಬುದು ಊಹಾಪೋಹ. ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಅತಿ ಹೆಚ್ಚು ಸ್ಥಾನ ಪಡೆಯುವ ವಿಶ್ವಾಸವಿದೆ. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ನಿಶ್ಚಿತವೋ, ಅದೇ ರೀತಿ ಕಾಂಗ್ರೆಸ್ ಅ ಧಿಕಾರಕ್ಕೆ ಬಂದು ಸಿದ್ದರಾಮಯ್ಯ ಪುನಃ ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ.
ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರು