Advertisement
ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದರೂ, ಜೆಡಿಎಸ್ಗೆ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಡಾ. ಜಿ.ಪರಮೇಶ್ವರ್ ಹಾಗೂ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಜೆಡಿಎಸ್ಗೆ ಕ್ಷೇತ್ರಗಳನ್ನು ಬಿಟ್ಟುಕೊಡುವ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟು ಕೊಡಬಾರದು ಎಂದು ರಾಜ್ಯ ನಾಯಕರು ಮತ್ತೆ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಆದರೂ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಬಿಟ್ಟುಕೊಡುವ ಪ್ರಸಂಗ ಎದುರಾಗಬಹುದು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
Related Articles
Advertisement
ಜೆಡಿಎಸ್ ನಾಯಕರ ಜೊತೆ ಮತ್ತೂಂದು ಸಭೆ: ಸೀಟು ಹಂಚಿಕೆ ಕುರಿತು ಈಗಾಗಲೇ ಜೆಡಿಎಸ್ ನಾಯಕರ ಜೊತೆ ಮೂರು ಬಾರಿ ಸಭೆಗಳನ್ನು ನಡೆಸಿರುವ ಕಾಂಗ್ರೆಸ್ ನಾಯಕರು, ಮಾ.16 ರೊಳಗೆ ಮತ್ತೆ ಜೆಡಿಎಸ್ ನಾಯಕರ ಜೊತೆ ಅಂತಿಮ ಸುತ್ತಿನ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಹಿರಿಯರ ಅಭಿಪ್ರಾಯ ಪಡೆದ ಕೆಸಿ: ಸ್ಕ್ರೀನಿಂಗ್ ಕಮಿಟಿ ಸಭೆಗೂ ಮುನ್ನ ಕೆ.ಸಿ.ವೇಣುಗೋಪಾಲ್ ಅವರು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಎಂ.ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದಾರೆ.
ಕಾಂಗ್ರೆಸ್ ಹಾಲಿ ಸಂಸದರಿರುವ ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ನಿರ್ಧಾರವಾಗಿಲ್ಲ. ಜೆಡಿಎಸ್ಗೆ ಎಷ್ಟು ಸ್ಥಾನ ಬಿಟ್ಟು ಕೊಡಲಾಗುವುದು ಎಂದು ನಾನು ಹೇಗೆ ಹೇಳಲಿ, ಮೈಸೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡುವ ಬಗ್ಗೆ ಪಕ್ಷದ ಸಭೆಯಲ್ಲಿ ನನ್ನ ನಿರ್ಧಾರ ತಿಳಿಸಿದ್ದೇನೆ– ಸಿದ್ದರಾಮಯ್ಯ, ಶಾಸಕಾಂಗ ಪಕ್ಷದ ನಾಯಕ