Advertisement

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಬಿಸಿಯೂಟ ಇಲ್ಲ

11:21 PM Apr 04, 2020 | Sriram |

ಬೆಂಗಳೂರು: ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಸಿಯೂಟದ ಬದಲಿಗೆ ಆಹಾರ ಸಾಮಗ್ರಿ ವಿತರಣೆ ಆರಂಭವಾಗಿದೆ.

Advertisement

ಅಂಗನವಾಡಿ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿ ವಿತರಣೆಗೆ ಮುಂದಾಗಿದೆ. ಆದರೆ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಓದುತ್ತಿರುವ ಮಕ್ಕಳಿಗೆ ಬಿಸಿಯೂಟವೂ ಇಲ್ಲ, ಆಹಾರ ಸಾಮಗ್ರಿಯೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭವಾಗಿ ಎರಡು ವರ್ಷಗಳು ಕಳೆದಿವೆ. ಸಾವಿರಾರು ಮಕ್ಕಳು ಸರಕಾರದ ಪೂರ್ವ ಪ್ರಾಥಮಿಕ ವ್ಯವಸ್ಥೆಯಲ್ಲಿ ಓದುತ್ತಿದ್ದಾರೆ. ಆದರೆ ಈ ಮಕ್ಕಳಿಗೆ ರಜೆ ಅವಧಿಯಲ್ಲಿ ಯಾವುದೇ ರೀತಿಯ ಆಹಾರ ಪದಾರ್ಥ ಸಿಗುತ್ತಿಲ್ಲ.

ಸರಕಾರಿ ಶಾಲೆಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಕಲಿಯುತ್ತಿರುವ ಮಕ್ಕಳಿಗೆ ಕೋವಿಡ್ 19 ಭೀತಿಯಿಂದಾಗಿ ಎಲ್ಲ ಮಕ್ಕಳಂತೆ ರಜೆ ಘೋಷಣೆ ಮಾಡಿದ್ದಾರೆ. ಆದರೆ ಬಿಸಿಯೂಟದ ಸಾಮಗ್ರಿ ಮಾತ್ರ ವಿತರಣೆ ಮಾಡುತ್ತಿಲ್ಲ ಎಂದು ಮಕ್ಕಳ ಹೆತ್ತವರು ಆರೋಪಿಸಿದ್ದಾರೆ.

ಈ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಹಾರ ಸಾಮಗ್ರಿ ನೀಡಬೇಕೋ ಅಥವಾ ಅಂಗನವಾಡಿ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಬೇಕೋ ಎಂಬ ಗೊಂದಲ ಅಧಿಕಾರಿಗಳನ್ನು ಕಾಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next