Advertisement

Madhu Bangarappa: 2-3 ಗ್ರಾ.ಪಂ.ಗೊಂದು ಕೆಪಿಎಸ್‌ ಆರಂಭಿಸಲು ಯೋಜನೆ: ಮಧು ಬಂಗಾರಪ್ಪ

11:55 AM Aug 30, 2023 | Team Udayavani |

ಉಡುಪಿ: ಎರಡು ಅಥವಾ ಮೂರು ಗ್ರಾ.ಪಂ.ಗಳನ್ನು ಸೇರಿಸಿ ಖಾಸಗಿ ಕಂಪೆನಿಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಆರಂಭಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಿದ್ದೇವೆ. ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಗೆ ಸಾಕಷ್ಟು ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಎರಡು ಮೂರು ಗ್ರಾ.ಪಂ.ಗಳನ್ನು ಒಟ್ಟಿಗೆ ಸೇರಿಸಿ ಕೆಪಿಎಸ್‌ ಆರಂಭಿಸಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ತೆರೆಯುವ ಯೋಚನೆಯಿದೆ ಎಂದರು.

ಸುಮಾರು 13,500 ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶೀಘ್ರವೇ ತೀರ್ಪು ಬರುವ ಸಾಧ್ಯತೆಯಿದೆ. ಒಂದೇ ವರ್ಷದಲ್ಲಿ 32 ಸಾವಿರ ಶಿಕ್ಷಕರು ವರ್ಗಾವಣೆ ಪಡೆದಿದ್ದಾರೆ. ಹೀಗಾಗಿ ಖಾಲಿಯಾಲಿರುವ ಹುದ್ದೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಿದ್ದೇವೆ ಎಂದರು.

ಎನ್‌ಇಪಿ ರದ್ದು ಮಾಡಿದ್ದು, ಎಸ್‌ಇಪಿ ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಶೀಘ್ರವೇ ಹೊಸ ಸಮಿತಿಯ ರಚನೆಯೂ ಆಗಲಿದೆ. ಪಠ್ಯ ಪರಿಷ್ಕರಣೆ ಕಾರ್ಯ ಆರಂಭಿಸಿದ್ದೇವೆ. ಶಿಕ್ಷಣ ಇಲಾಖೆ ಯಲ್ಲೂ ಕೆಲವೊಂದು ಬದಲಾವಣೆ ತರಲಿದ್ದೇವೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಪ್ರಮುಖರಾದ ಪ್ರಸಾದ್‌ ರಾಜ್‌ ಕಾಂಚನ್‌, ಉದಯ ಕುಮಾರ್‌ ಶೆಟ್ಟಿ ಮುನಿಯಾಲು, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಅಣ್ಣಯ್ಯ ಸೇರಿಗಾರ್‌, ಡಿ.ಆರ್‌.ರಾಜು ಉಪಸ್ಥಿತರಿದ್ದರು.

Advertisement

ತುಳು ಬೋಧಕರ ಗೌರವಧನ: ಶೀಘ್ರ ಪರಿಶೀಲನೆ
ದ.ಕ. ಮತ್ತು ಉಡುಪಿ ಜಿಲ್ಲೆಗಳ ಶಾಲೆಗಳಲ್ಲಿ ತುಳು ಭಾಷೆಯನ್ನು ಬೋಧಿಸುತ್ತಿರುವ ಶಿಕ್ಷರಿಗೆ ಮೂರು ವರ್ಷಗಳಿಂದ ಗೌರವಧನ
ನೀಡದೇ ಇರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಅಧಿಕಾರಿಗಳಿಂದ ತತ್‌ಕ್ಷಣವೇ ಮಾಹಿತಿ ಪಡೆದು, ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದೇವೆ. ಅತಿಥಿ ಶಿಕ್ಷಕರಿಗೆ ತಾಂತ್ರಿಕ ಸಮಸ್ಯೆಯಿಂದ ಮೂರು ತಿಂಗಳಿಂದ ಗೌರವಧನ ಹೋಗಿಲ್ಲ. ಅದು ಕೂಡ ಶೀಘ್ರ ಸರಿಯಾಗಲಿದೆ. ಪಿಯುಸಿಗೆ ತುಳು ಪಠ್ಯ ಸೇರಿಸುವ ಬಗ್ಗೆ ರಾಜ್ಯ ಶಿಕ್ಷಣ ನೀತಿಯಲ್ಲಿ ಚಿಂತನೆ ನಡೆಸಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಕಾಮಗಾರಿ ಆದೇಶ
ಶಾಲಾ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿರುವ ಬಗ್ಗೆ ಮಾಹಿತಿ ಬಂದಿದೆ. ಸರಕಾರ ರಚನೆಯಾದ ಸಂದರ್ಭದಲ್ಲಿ ಕೆಲವೊಂದು ಕಾಮಗಾರಿಗಳಿಗೆ ತಡೆ ಹಿಡಿಯಲಾಗಿತ್ತು. ತಾಂತ್ರಿಕ ಕಾರಣದಿಂದ ಕೆಲವು ಕಾಮಗಾರಿ ಅರ್ಧಕ್ಕೆ ನಿಂತಿದೆ. ಶಾಲಾ ಕಟ್ಟಡದ ಕಾಮಗಾರಿಗೆ ತಡೆ ಹಿಡಿದಿರುವುದನ್ನು ಶೀಘ್ರದಲ್ಲೇ ತೆರವುಗೊಳಿಸಿ ಆದೇಶಿಸಲಾಗುವುದು. ಹೊಸ ಕೊಠಡಿಗಳ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸಿ
ಮಣಿಪಾಲ: ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಸೌಕರ್ಯ ಸೇರಿದಂತೆ ಉತ್ತಮ ಶಿಕ್ಷಣ ಹೊಂದಲು ಪೂರಕ ವಾತಾವರಣ ಸೃಷ್ಟಿಸಿ, ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಶಿಕ್ಷಣ ಸಚಿವ ಎಸ್‌. ಮಧು ಬಂಗಾರಪ್ಪ ಹೇಳಿದರು.

ಅವರು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿಯಲ್ಲಿ ಆಯೋಜಿಸಲಾದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ವರ್ಷ ಪ್ರಾರಂಭದಿಂದಲೇ ವಿದ್ಯಾರ್ಥಿಗಳು ವಿದ್ಯಭ್ಯಾಸದ ಚಟುವಟಿಕೆ ಕೈಗೊಳ್ಳುವ ರೀತಿಯಲ್ಲಿ, ಶಿಕ್ಷಕರು ಅವರನ್ನು ಉತ್ತೇಜಿಸಬೇಕು. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತೀರ್ಣರಾದರೆ ಶೇ. 50ರಷ್ಟು
ಅವರ ಅನುತ್ತೀರ್ಣಕ್ಕೆ ಶಿಕ್ಷಕರು ಸೇರಿದಂತೆ ಇಲಾಖೆ ಕಾರಣವಾಗು ತ್ತದೆ. ಇದಕ್ಕೆ ಆಸ್ಪದ ನೀಡದೇ ಉತ್ತಮ ಶಿಕ್ಷಣವನ್ನು ನೀಡಲು ಶಿಕ್ಷಕರು ಮುಂದಾಗಬೇಕು ಎಂದು ಸೂಚನೆ ನೀಡಿದ ಅವರು ಪಠ್ಯ ಪುಸ್ತಕ, ಸಮವಸ್ತಗಳನ್ನು ವಿಳಂಬವಿಲ್ಲದೆ ವಿತರಣೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯು ಉತ್ತಮ ಶೈಕ್ಷಣಿಕ ಕೇಂದ್ರವಾಗಿದ್ದು, ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸ್ಥಾನದಲ್ಲಿ ಕೆಳಮಟ್ಟದಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸ್ಥಾನವ ಹೊಂದುವ ರೀತಿಯಲ್ಲಿ ಕಾರ್ಯ ಪ್ರವೃತ್ತರಾಗಿ ಎಂದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆಗೆ ಶಿಕ್ಷಕರು ಮುಂದಾಗಬೇಕು. ಗ್ರಾಮೀಣ ಭಾಗಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಒಂದುಗೂಡಿಸಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರರೊಂದಿಗೆ ಚರ್ಚಿಸಿ ಶಾಲೆಗಳನ್ನು ಒಗ್ಗೂಡಿಸಬೇಕು. ಇಲ್ಲಿನ ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆಯನ್ನು ಎಸ್‌ಡಿಎಂಸಿ ಮಟ್ಟದಲ್ಲಿ ತೀರ್ಮಾನಿಸಿ ಕಲ್ಪಿಸಬೇಕು ಎಂದರು.

ಶಾಲೆಗಳ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಕಾಂಪೌಂಡ್‌ ಸೇರಿದಂತೆ ಮತ್ತಿತರ ಮೂಲ ಸೌಕರ್ಯಗಳ ಅಭಿವೃದ್ಧಿ ಕಾರ್ಯಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಬೇಕು. ಅನುದಾನದ ಕೊರತೆಯಿದ್ದಲ್ಲಿ ಸರಕಾರದ ಗಮನಕ್ಕೆ ತಂದಲ್ಲಿ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಮಂಗಳೂರಿನ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿಪ್ರಿಯಾನ್‌ ಮೊಂಥೆರೋ, ಡಿಡಿಪಿಐ ಗಣಪತಿ ಕೆ., ಡಿಡಿಪಿಯು ಮಾರುತಿ, ಡಯಟ್‌ ಪ್ರಾಂಶುಪಾಲ ಗೋವಿಂದ ಮಡಿವಾಳ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Haveri: ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: ನಾಲ್ವರ ವಿರುದ್ಧ ಪ್ರಕರಣ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next