Advertisement

ಮಹದಾಯಿ ತೀರ್ಪು: ರಾಜ್ಯ ಸುಮ್ಮನಿರಲು ಸಾಧ್ಯವಿಲ್ಲ

06:00 AM Aug 16, 2018 | Team Udayavani |

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪಿಗೆ ಸಂಬಂಧಿಸಿದಂತೆ ಗೋವಾ ರಾಜ್ಯ ಸುಪ್ರೀಂ ಕೋರ್ಟ್‌ ಮೊರೆ ಹೋದರೆ ಕರ್ನಾಟಕ ಸುಮ್ಮನಿರಲು ಸಾಧ್ಯವಿಲ್ಲ. ರಾಜ್ಯದ ಹಿತ ಕಾಪಾಡಲು ಮುಂದಾಗಲೇ ಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಧಿಕರಣದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗುವುದಾಗಿ ಗೋವಾ ಸರ್ಕಾರ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರವೂ ಯೋಚಿಸಬೇಕಾಗುತ್ತದೆ. ತೀರ್ಪಿನ ಅಧ್ಯಯನ ನಡೆಸಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು.

ನ್ಯಾಯಾಧಿಕರಣದ ತೀರ್ಪಿನಿಂದ ಅನುಕೂಲವಾಗಿದೆ ಎಂದು ಹೋರಾಟಗಾರರು ಸಂಭ್ರಮಾಚರಣೆ ಮಾಡಿದ್ದನ್ನೂ ಗಮನಿಸಿದ್ದೇನೆ. ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದನ್ನೂ ಕೇಳಿದ್ದೇನೆ. ಆದರೆ, ತೀರ್ಪಿನ ಕುರಿತು ನಾನಿನ್ನೂ ಅಧ್ಯಯನ ನಡೆಸಿಲ್ಲ. ತೀರ್ಪಿನ ಎಲ್ಲಾ ಸಂಪುಟಗಳನ್ನು ಒದಗಿಸುವಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿದ್ದೇನೆ. ಬೆಂಗಳೂರಿಗೆ ಹೋದ ಬಳಿಕ ತೀರ್ಪು ಅಧ್ಯಯನ ನಡೆಸಿ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡುತ್ತೇನೆ ಎಂದು ಹೇಳಿದರು.

ಈ ಹಿಂದೆ ಕಾವೇರಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಸಂದರ್ಭದಲ್ಲೂ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕಾನೂನು ತಜ್ಞರಿಗೆ ಸಲಹೆಗಳನ್ನು ನೀಡಿದ್ದೇನೆ. ಅದೇ ರೀತಿ ಮಹದಾಯಿ ವಿಚಾರದಲ್ಲೂ ನಡೆದುಕೊಳ್ಳುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next