Advertisement

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮೂವರು ಗಣ್ಯರ ಆಯ್ಕೆ: ಗೋವಿಂದ ಎಂ ಕಾರಜೋಳ

10:22 AM Oct 12, 2019 | Sriram |

ಬೆಂಗಳೂರು: ಪರಿಶಿಷ್ಟ ಜನಾಂಗದ ಶ್ರೋಯೋಭಿವೃದ್ಧಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಪ್ರಕಟಿಸಿದರು.

Advertisement

ವಿಧಾನಸೌಧದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಗುರುತರವಾಗಿ ಸೇವೆಸಲ್ಲಿಸುತ್ತಿರುವ ಶ್ರೀ ಓಬಳಪ್ಪ ಹಾಗು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ. ರಂಗಯ್ಯ ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ರಾಂತ ಕುಲಪತಿಗಳು ಹಾಗು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಿರಂಜನ್ ಎಸ್. ಆರ್. ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಈ ಮೂವರು ಗಣ್ಯರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿ ವರದಿ ನೀಡಲಾಗಿದ್ದು, ಸರ್ಕಾರವು ಈ ವರದಿಯನ್ನು ಅಂಗೀಕರಿಸಿದೆ.

ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು,ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.

ಈ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರತಿ ಪ್ರಶಸ್ತಿಯು ತಲಾ 20 ಗ್ರಾಂ ಚಿನ್ನದ ಪದಕ ಹಾಗು 5 ಲಕ್ಷ ನಗದು ಅನ್ನ ಒಳಗೊಂಡಿರುತ್ತದೆ ಎಂದು ಅವರು ಪ್ರಕಟಿಸಿದರು.

ಡಾ. ಕಮಲಾ ಹಂಪನ ಅವರು ಕರ್ನಾಟಕದ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದಾರೆ. ನಿರಂತರ ಪರಿಶ್ರಮ, ನಾಡುನುಡಿಯ ಬಗೆಗಿನ ಅನುಪಮ ಪ್ರೀತಿ, ಅವರ ಸಾಹಿತ್ಯಿಕ ಸಾಧನೆಯಿಂದಲೇ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯವರೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

Advertisement

ಶ್ರೀ ಓಬಳಪ್ಪ ಅವರು ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಯಾಗಿ ಹಾಗು ಹರಿಹರದ ವಾಲ್ಮೀಕಿ ಹಾಸ್ಟಲ್ ಸಮಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ.ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.

ಡಾ. ಜಿ. ರಂಗಯ್ಯ ಅವರು ನರರೋಗ ತಜ್ಞರಾಗಿದ್ದಾರೆ. ಅವರು ವಿದೇಶದಲ್ಲಿ ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೇರಿಕ ದೇಶದಲ್ಲಿರುವ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್‍ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ್ ನಾಯಕ್, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next