Advertisement

ಜನರಲ್ಲಿ ಅರಿವು ಮೂಡಿಸಿ ಸ್ವಸ್ಥ ಸಮಾಜ ಸೃಷ್ಟಿಸಿ

10:03 AM May 06, 2022 | Team Udayavani |

ಧಾರವಾಡ: ಕಾನೂನು ಕುರಿತು ಹೆಚ್ಚಿನ ಜಾಗೃತಿ ಆದಾಗಲೇ ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಲು ಸಾಧ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ ಎಂ. ಅಡಿಗ ಹೇಳಿದರು.

Advertisement

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೋರ್ಟ್‌ ಹಾಲ್‌ನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ್ವೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೊಗದೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪರಿಸರ ದಿನಾಚರಣೆ, ಬಾಲ ಕಾರ್ಮಿಕರ ದಿನ ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಜೂ. 25ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಾಗುತ್ತಿದ್ದು, ಇದಕ್ಕೆ ವ್ಯಾಪಕ ಪ್ರಚಾರ ನೀಡಬೇಕು. ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವುದರಿಂದ ಸಮಯ ಮತ್ತು ಹಣದ ಉಳಿತಾಯವಾಗುತ್ತದೆ. ಜಿಲ್ಲಾಡಳಿತ ಭೂಸ್ವಾಧೀನ ಪರಿಹಾರದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸುವತ್ತ ಗಮನ ನೀಡಬೇಕು. ಇದರಿಂದ ಸರ್ಕಾರ ಬಡ್ಡಿ ಕಟ್ಟುವುದು ತಪ್ಪುವುದಲ್ಲದೇ ಭೂಮಿ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಪಡೆಯಲು ಅನೂಕೂಲವಾಗಲಿದೆ ಎಂದು ಹೇಳಿದರು.

ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳಡಿ ಅನುದಾನ ಸೌಲಭ್ಯಗಳಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರೆಯುವಂತಾಗಬೇಕು. ಇದಕ್ಕಾಗಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರ ಪಟ್ಟಿ ಪರಿಶೀಲಿಸುವ ಕಾರ್ಯವಾಗಬೇಕು ಎಂದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಂ ಮಾತನಾಡಿ, ಮಹಿಳಾ ದೌರ್ಜನ್ಯ ವಿಷಯವನ್ನು ಮಾರ್ಚ್‌ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ಪ್ರತಿ ವಾರವು ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಒತ್ತುಕೊಟ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಡಿಸಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳ ಮೂರನೇ ಶನಿವಾರ ನಡೆಯುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಲ್ಲಿ ವಿವಿಧ ಯೋಜನೆ ಮತ್ತು ಕಾನೂನು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಹು-ಧಾ ಪೊಲೀಸ್‌ ಆಯುಕ್ತ ಲಾಬೂರಾಮ್‌, ಜಿಪಂ ಸಿಇಒ ಡಾ|ಸುರೇಶ ಇಟ್ನಾಳ, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಗೋಪಾಲಕೃಷ್ಣ ಡಿಸಿಎಫ್‌ ಸೋನಲ್‌ ವೃಷ್ಣಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next