Advertisement

ಮಕ್ಕಳ ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

05:23 PM Jun 23, 2021 | Team Udayavani |

ಬೆಳಗಾವಿ: ಸಂಭವನೀಯ ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ವರದಿಗಳಿವೆ. ಈ ಹಿನ್ನಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

Advertisement

ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮೂರನೇ ಅಲೆ ಮಕ್ಕಳಿಗೆ ಬರುವ ಸಂಭವನೀಯತೆ ಇದೆ ಎಂಬ ಅಭಿಪ್ರಾಯವಿದ್ದರೂ ಇದರ ಬಗ್ಗೆ ಖಚಿತತೆ ಇಲ್ಲ. ಆದರೂ ಮಕ್ಕಳ ಚಿಕಿತ್ಸೆಗೆ ಬೇಕಾಗಿರುವ ಔಷಧಿ, ವೈದ್ಯಕೀಯ ಉಪಕರಣಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸಹ ಮಕ್ಕಳ ವೈದ್ಯರು ಲಭ್ಯವಿರಬೇಕು ಎಂದರು.

ತುರ್ತು ಸಂದರ್ಭದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಔಷಧಿಗಳ ಕೊರತೆ ಉಂಟಾಗಬಾರದು. ಏನೇ ಕೊರತೆ ಇದ್ದರೆ ಮುಂಚಿತವಾಗಿಯೇ ತಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು.

ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಶೇ.3 ರಷ್ಟಿರುವುದು ಕಳವಳಕಾರಿಯಾಗಿದೆ. ಆದ್ದರಿಂದ ಈ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉತ್ತಮ ಕೆಲಸ ಮಾಡಿರುವ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ತಂಡದವರಿಗೆ ಕೃತಜ್ಞತೆ ಸಲ್ಲಿಸಿದರು.

ಬಿಮ್ಸ್‌ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆಗೆ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್‌ ಆಡಳಿತ ಉಸ್ತುವಾರಿಯಾಗಿರುವ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದರಿಂದ ಜನರಲ್ಲಿ ಸರಕಾರಿ ಆಸ್ಪತ್ರೆಯ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಮ್ಸ್‌ ಆಡಳಿತ ಉಸ್ತುವಾರಿ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರು, ಬಿಮ್ಸ್‌ ಆಸ್ಪತ್ರೆಯಲ್ಲಿ ಸ್ವತ್ಛತೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳಿದ್ದ ಹಿನ್ನಲೆಯಲ್ಲಿ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಅಗತ್ಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಅದೇ ರೀತಿ ಊಟೋಪಹಾರ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ಮಾಡಬೇಕಿದೆ. ಬಿಮ್ಸ್‌ ಆವರಣದಲ್ಲಿ ಸಿಲಿಂಡರ್‌ ಗಳಿಗೆ ಆಕ್ಸಿಜನ್‌ ಮರುಪೂರಣ ಘಟಕ ಸ್ಥಾಪಿಸುವ ಅಗತ್ಯವಿದ್ದು ಇದರಿಂದ ತುರ್ತು ಚಿಕಿತ್ಸಾ ಘಟಕದ ಸಾಮಾನ್ಯ ವಾರ್ಡುಗಳಲ್ಲಿ ಇರುವ ರೋಗಿಗಳಿಗೆ ಕೂಡ ಸಿಲಿಂಡರ್‌ ಮೂಲಕ ಆಕ್ಸಿಜನ್‌ ಪೂರೈಸಬಹುದು ಎಂದು ವಿವರಿಸಿದರು.

Advertisement

ಒಂದು ಲಕ್ಷ ಲಸಿಕೆ ದಾಖಲೆ: ಸಾಕಷ್ಟು ಪೂರ್ವ ಸಿದ್ಧತೆಯ ಪರಿಣಾಮವಾಗಿ ಒಂದೇ ದಿನ ಒಂದು ಲಕ್ಷಕ್ಕೂ ಅಧಿಕ ಲಸಿಕೆ ನೀಡುವ ಮೂಲಕ ದಾಖಲೆ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಐದಕ್ಕಿಂತ ಹೆಚ್ಚು ಸೋಂಕುಗಳು ಕಂಡುಬಂದ ಜಿಲ್ಲೆಯ 150 ಹಳ್ಳಿಗಳನ್ನು ಸಂಪೂರ್ಣ ಸೀಲ್‌ ಡೌನ್‌ ಮಾಡಿದ ಪರಿಣಾಮ ಸೋಂಕು ನಿಯಂತ್ರಣ ಸಾಧ್ಯವಾಯಿತು. ಮುಂಬರುವ ದಿನಗಳಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಈಗ 2658 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.3.77 ಇದ್ದು ಸರಕಾರಿ ಆಸ್ಪತ್ರೆಗಳಲ್ಲಿ ಒಟ್ಟಾರೆ 567 ಆಕ್ಸಿಜನ್‌ ಬೆಡ್‌ ಗಳಿವೆ ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ವಿ.ಮುನ್ಯಾಳ ಸಭೆಯ ಗಮನಕ್ಕೆ ತಂದರು. ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ 268 ಮಕ್ಕಳ ಚಿಕಿತ್ಸೆಗೆ ಹಾಸಿಗೆಗಳು ಲಭ್ಯವಿವೆ. ಇದಲ್ಲದೇ ಬಿಮ್ಸ್‌ ನಲ್ಲಿ ಮಕ್ಕಳ ತುರ್ತು ನಿಗಾ ಘಟಕ ಕೂಡ ಆರಂಭಿಸಲಾಗಿದೆ ಎಂದು ಆರ್‌ ಸಿ ಎಚ್‌. ಡಾ.ಐ.ಪಿ.ಗಡಾದ ತಿಳಿಸಿದರು.

ಸಭೆಯಲ್ಲಿ ಶಾಸಕ ಅನಿಲ ಬೆನಕೆ, ನಗರ ಪೊಲೀಸ್‌ ಆಯುಕ್ತ ಡಾ.ಕೆ. ತ್ಯಾಗರಾಜನ್‌, ಜಿಪಂ ಸಿಇಒ ದರ್ಶನ್‌, ಎಸ್‌ಪಿ ಲಕ್ಷ್ಮಣ ನಿಂಬರಗಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next