Advertisement

ಫಲಾನುಭವಿಗಳಿಗೆ ಸವಲತ್ತು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ: ಸಚಿವ ಹಾಲಪ್ಪ ಆಚಾರ್

04:49 PM Oct 29, 2022 | Team Udayavani |

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಮಕ್ಕಳ ಹಾಗೂ ಮಹಿಳೆಯರ ಅಭ್ಯುದಯಕ್ಕಾಗಿ ಸರಕಾರದಿಂದ ನೀಡಲಾಗುತ್ತಿರುವ ಸವಲತ್ತುಗಳನ್ನು ಅವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಕರೆ ನೀಡಿದರು.

Advertisement

ಇಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ 4 ನೇ ಜಿಲ್ಲಾ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಕಳೆದ ಐದಾರು ತಿಂಗಳಲ್ಲಿ ಯಾವುದೇ ಪ್ರತಿಭಟನೆ ನಡೆಯದೆ ಇರುವುದು ಇದಕ್ಕೆ ಕಾರಣ. ಇಲಾಖೆಯ ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಹಾಗೂ ಮಹಿಳೆಯರ ಅಭ್ಯುದಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ತಂದೆ ತಾಯಿಗೆ ತಮ್ಮ ಮಕ್ಕಳ ಮೇಲೆ ಇರುವಷ್ಟು ಹೊಣೆಗಾರಿಕೆ ಅಂಗನವಾಡಿ ಕಾರ್ಯಕರ್ತೆಯರಿಗಿದೆ. ವಿದ್ಯೆ ಅಷ್ಟೇ ಅಲ್ಲದೆ ಪೌಷ್ಟಿಕ ಆಹಾರ ನೀಡುವ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದರು.

ಇದನ್ನೂ ಓದಿ:ಗೋವಾದಲ್ಲಿ ಪೋಗೋ ಕಾಯ್ದೆ ಜಾರಿಯಾದರೆ ಕನ್ನಡಿಗರಿಗೆ ತೊಂದರೆ : ಮಂಜುನಾಥ್ ನಾಟಿಕರ್

ಅಂಗನವಾಡಿ ಕಾರ್ಯಕರ್ತೆಯರ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಹಲವಾರು ಬೇಡಿಕೆಗಳನ್ನು ನಮ್ಮ ಮುಂದೆ ಇಡಲಾಗಿದೆ. ಸರಕಾರದ ವತಿಯಿಂದ ಇವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಆದರೆ, ಕೇವಲ ಸಮಸ್ಯೆಗಳ ಪರಿಹಾರಕ್ಕೆ ಮಾತ್ರ ನಿಮ್ಮ ಹೋರಾಟ ಸೀಮಿತ ಆಗಬಾರದು. ಇಲಾಖೆಯಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯನ್ನು ಹೆಚ್ಚಿಸುವಲ್ಲಿಯೂ ನಿಮ್ಮ ಪಾತ್ರ ಇರಬೇಕು. ಹಲವಾರು ಅಂಗನವಾಡಿಗಳಲ್ಲಿ ನೋಂದಣಿ ಆಗಿರುವ ಮಕ್ಕಳು ಮತ್ತು ಮಹಿಳೆಯರಿಗಿಂತ ಕಡಿಮೆ ಜನರು ಇರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳು ನಮ್ಮ ಇಲಾಖೆ ಹಾಗೂ ನಿಮ್ಮ ಮೇಲೆ ಅನುಮಾನಗಳನ್ನು ಹುಟ್ಟಿಸುತ್ತವೆ. ಆದ್ದರಿಂದ ಇಂತಹ ಸಣ್ಣ ಸಣ್ಣ ಗೊಂದಲಗಳನ್ನು ಪರಿಹರಿಸಿಕೊಳ್ಳುವತ್ತ ಹೆಚ್ಚಿನ ಗಮನ ನೀಡಬೇಕು. ಹಾಗೆಯೇ, ನೋಂದಣಿ ಆಗಿರುವ ಎಲ್ಲಾ ಮಕ್ಕಳು ಮತ್ತು ಮಹಿಳೆಯರಿಗೂ ಸರಕಾರದ ಸವಲತ್ತುಗಳು ದೊರಕುವಂತಹ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಚಿವರು ಕರೆ ನೀಡಿದರು.

Advertisement

ಆಹಾರ ಪೂರೈಕೆಯಲ್ಲಿ ಇರಬಹುದಾದ ಲೋಪದೋಷಗಳನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಇದರಿಂದ ಇಲಾಖೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ. ಇನ್ನು ಯಾವುದೇ ಅಧಿಕಾರಿಗಳು ನಿಮಗೆ ಕಿರುಕುಳ ಅಥವಾ ತೊಂದರೆ ನೀಡಿದರೆ ನಮ್ಮ ಗಮನಕ್ಕೆ ತನ್ನಿ. ಅವರುಗಳ ಮೇಲೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಒಟ್ಟಾರೆಯಾಗಿ ಸರಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಸಮಾಜದ ಸುಧಾರಣೆಗೆ ನಿಮ್ಮ ಕೊಡುಗೆಯನ್ನು ನೀಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ, ಎಂ. ಜಯಮ್ಮ, ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಕಾಂ. ಬಿ. ಅಮ್ಹದ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next