Advertisement

ಮಳಲಿ ಮಸೀದಿ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

07:57 PM Jun 24, 2022 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್‌ ನ್ಯಾಯಾಲಯವು ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.

Advertisement

ಈ ವಿಚಾರವಾಗಿ ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿ ಗ್ರಾಮದ ಮನೋಜ್‌ ಕುಮಾರ್‌ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರು ಹಾಗೂ ಪ್ರತಿವಾದಿಗಳ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ತೀರ್ಪನ್ನು ಕಾಯ್ದರಿಸುವುದಾಗಿ ಹೇಳಿತು.

ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅಸಲು ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯಕ್ಕೆ ನೀಡಿರುವ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ನ್ಯಾಯಪೀಠ ಹೇಳಿದೆ. ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ ವಕ್ಫ್ ಮಂಡಳಿ ಪರ ಹಿರಿಯ ನ್ಯಾಯವಾದಿ ಜಯಕುಮಾರ್‌ ಎಸ್‌. ಪಾಟೀಲ್‌ ವಾದ ಮಂಡಿಸಿ, ಅಸಲು ದಾವೆಯನ್ನು ಆಲಿಸಲು ವಿಚಾರಣಾ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಕಮಿಷನರ್‌ ವರದಿ ಅಗತ್ಯವಿಲ್ಲ. ಒಂದೊಮ್ಮೆ ಮೊದಲು ಕಮಿಷನರ್‌ ನೇಮಕ ಆಗಿ ವರದಿ ಬಂದ ಮೇಲೆ ಪ್ರಕರಣದ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್‌ ನೇಮಕ ಮತ್ತು ಅದರ ವರದಿ ಎರಡೂ ಮಾನ್ಯತೆ ಪಡೆದುಕೊಳ್ಳುವುದಿಲ್ಲ. ಹಾಗಾಗಿ, ಅಸಲು ದಾವೆಯ ಸಿಂಧುತ್ವದ ಬಗ್ಗೆ ಮೊದಲು ನಿರ್ಧಾರವಾಗಲಿ ಎಂದರು.

Advertisement

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಟಾರೆಡ್ಡಿ, ಸ್ಥಳ ಪರಿಶೀಲನೆ ನಡೆದು ಮಾಹಿತಿಗಳನ್ನು ವೈಜ್ಞಾನಿಕವಾಗಿ ಪಡೆದುಕೊಂಡರೆ ಮಾತ್ರ ಕಟ್ಟಡದ ಇತಿಹಾಸ ಮತ್ತು ಪುರಾತನತೆ ಗೊತ್ತಾಗುತ್ತದೆ. ಅಸಲು ದಾವೆ ಮತ್ತು ಸ್ಥಳ ಪರಿಶೀಲನೆ ವಿಚಾರ ಬಂದಾಗ ಮೊದಲು ಅಸಲು ದಾವೆ ಅರ್ಜಿಗೆ ಮನ್ನಣೆ ಕೊಡಬೇಕೋ ಅಥವಾ ಸ್ಥಳ ಪರಿಶೀಲನೆಗೆ ಮಾನ್ಯತೆ ನೀಡಬೇಕೋ ಎಂದು ಕಾನೂನಿನಲ್ಲಿ ನಿರ್ದಿಷ್ಠವಾಗಿ ಹೇಳಲಾಗಿಲ್ಲ. ಜ್ಞಾನವಾಪಿ ಮಸೀದಿ ಪ್ರಕರಣ ಇಲ್ಲಿ ಅನ್ವಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣವೇನು?
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುಮಾರ್‌ ಸಿವಿಲ್‌ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೂಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್‌ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್‌ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಇದರಿಂದ, ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next