Advertisement

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಹೆಸರು?

07:26 AM Aug 24, 2020 | Hari Prasad |

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದ್ದು, ಗಾಂಧಿ ಕುಟುಂಬದ ಹೊರತಾಗಿ ಬೇರೆಯವರನ್ನು ಮಾಡಬೇಕೆಂಬ ಚರ್ಚೆಗಳ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರೂ ಚರ್ಚೆಯಲ್ಲಿದೆ.

Advertisement

ಎರಡು ಬಾರಿ ಸಂಸತ್‌ ಸದಸ್ಯರಾಗಿ ಹಾಗೂ ಒಂದು ಅವಧಿಗೆ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕರಾಗಿದ್ದ ಅವರು ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಸಂಸತ್ತಿನಲ್ಲಿ ದನಿ ಎಬ್ಬಿಸಿದ್ದರು.

ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಎಐಸಿಸಿ ಉನ್ನತ ಹುದ್ದೆಗೆ ತಮ್ಮ ಕುಟುಂಬದ ಹೊರತಾಗಿ ಬೇರೆಯವರನ್ನು ನೇಮಿಸಬೇಕೆಂದು ಹೇಳಿರುವ ಹಾಗೂ ಪಕ್ಷದ ಕೆಲವು ನಾಯಕರು ಪರ್ಯಾಯ ನಾಯಕತ್ವದ ಬಗ್ಗೆ ಧ್ವನಿ ಎತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆಯುವ ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆಯಾಗುವ ಸಾಧ್ಯತೆ ಇದ್ದು, ಅದರಲ್ಲಿ ಪಕ್ಷದ ಹಿರಿಯ ನಾಯಕರಾದ ಸುಶೀಲ್‌ ಕುಮಾರ್‌ ಶಿಂಧೆ, ಮುಕುಲ್‌ ವಾಸ್ನಿಕ್‌, ಶಶಿ ತರೂರ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೆಸರುಗಳು ಕೇಳಿ ಬರುತ್ತಿವೆ.
ಆದರೆ, ಪಕ್ಷ ಹಾಗೂ ಗಾಂಧಿ ಕುಟುಂಬ ನಿಷ್ಠೆ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಸೋನಿಯಾ ಗಾಂಧಿ ಕೂಡ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಐದು ವರ್ಷ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕರಾಗಿ ಸಂಸತ್‌ನಲ್ಲಿ ಹೋರಾಟ ಮಾಡಿ ಖರ್ಗೆ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಹೀಗಾಗಿ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಅವರ ಹೆಸರೂ ಮುಂಚೂಣಿಯಲ್ಲಿದೆ.  ಈ ಹಿಂದೆಯೂ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿಬಂದಿತ್ತು. ಆದರೆ ವಯೋಮಾನದ ಕಾರಣಕ್ಕೆ ಪ್ರವಾಸ ನಡೆಸುವುದು ಕಷ್ಟ ಆಗಬಹುದು ಎಂದು ಖರ್ಗೆ ಅವರು ವರಿಷ್ಠರಿಗೆ ತಿಳಿಸಿದ್ದರು. ಈಗ ವರಿಷ್ಠರು ಖರ್ಗೆಗೆ ನಾಯಕತ್ವ ವಹಿಸಲು ನಿರ್ಧರಿಸಿದರೆ ಒಪ್ಪಿಕೊಳ್ಳುವುದು ಅನಿವಾರ್ಯ ಆಗಬಹುದು ಎನ್ನಲಾಗುತ್ತಿದೆ.

ಸಿದ್ದರಾಮಯ್ಯ, ಡಿಕೆಶಿ ಗಾಂಧಿ ಕುಟುಂಬ ಪರ
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಸಹಿತ ಕೆಲವರು ನಾಯಕತ್ವ ಬದಲಾವಣೆಯ ಮಾತಿಗೆ ಬೇಸರಗೊಂಡಿದ್ದು, ಗಾಂಧಿ ಕುಟುಂಬವೇ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next