Advertisement

ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಲಿ

12:09 PM Jul 24, 2019 | Suhan S |

ಹಾವೇರಿ: 73ನೇ ಸ್ವಾತಂತ್ರ್ಯೋತ್ಸವನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಸ್ವಾತಂತ್ರ್ಯೋತ್ಸವ ಆಚರಣೆ ಪೂರ್ವ ಸಿದ್ಧತೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಯಾವುದೇ ನ್ಯೂನತೆಗಳು ಕಂಡುಬರಬಾರದು. ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ದೇಶದ ಸ್ವಾತಂತ್ರ್ಯ ಸಂಭ್ರಮದ ಸ್ಮರಣೆಯ ಸಮಾರಂಭ ಯುವ ಪೀಳಿಗೆಗೆ ಸ್ಪೂರ್ತಿ ನೀಡುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಿದ್ಧತೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ಸಂಘಟಿಸಲು ಸೂಚಿಸಿದರು.

ಆಗಸ್ಟ್‌ 15ರಂದು ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಬೆಳಗ್ಗೆ 9 ಗಂಟೆಗೆ ಸರಿಯಾಗಿ ನಡೆಯಲಿದೆ. 7.45ರ ಒಳಗಾಗಿ ಶಾಲಾ-ಕಾಲೇಜು, ವಿವಿಧ ಇಲಾಖೆಗಳಲ್ಲಿ ಧ್ವಜಾರೋಹಣ ನೆರವೇರಿಸಿ 7.45ಕ್ಕೆ ಮೈಲಾರ ಮಹದೇವಪ್ಪ ವೃತ್ತಕ್ಕೆ ಆಗಮಿಸಬೇಕು. ಮೈಲಾರ ಮಹಾದೇವಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾರತಾಂಬೆಯ ಭಾವಚಿತ್ರದ ಮೆರವಣಿಗೆಯೊಂದಿಗೆ ವಿವಿಧ ಮಾರ್ಗದ ಮೂಲಕ 8.30ರೊಳಗಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಸಮಾವೇಶಗೊಳ್ಳುವುದು. ಇದಕ್ಕೂ ಮುನ್ನ ಹುತಾತ್ಮ ಮೈಲಾರ ವೀರ ಸೌಧ ಸ್ಮಾರಕಕ್ಕೆ ಗೌರವನಮನ, ಪುಷ್ಪಾರ್ಚನೆ ಕಾರ್ಯಕ್ರಮ ನಡೆಸುವಂತೆ ಜಿಲ್ಲಾಧಿಕಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ರಾಷ್ಟ್ರಧ್ವಜ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ನಿರ್ವಹಿಸಬೇಕು. ಧ್ವಜಕಟ್ಟೆಯ ಅಲಂಕಾರ, ಕ್ರೀಡಾಂಗಣದಲ್ಲಿ ನಡೆಯುವ ಸಚಿವರ ಗೌರವ ವಂದನೆ ಸ್ವೀಕಾರ ನಂತರ ಸ್ಕೌಟ್ ಆಂಡ್‌ ಗೈಡ್ಸ್‌, ಗೃಹರಕ್ಷಕದಳ, ಎನ್‌.ಸಿ.ಸಿ., ಅಬಕಾರಿ, ಅರಣ್ಯ ಇಲಾಖೆ, ಸೇವಾದಳ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ನಡೆಯುವ ಪಥಸಂಚಲನವನ್ನು ಅತ್ಯಂತ ಶಿಸ್ತುಬದ್ಧವಾಗಿ ಸಂಯೋಜಿಸಬೇಕು. ದೇಶಭಕ್ತಿ ಪ್ರತಿಬಿಂಬಿಸುವ ಸ್ವಾತಂತ್ರ್ಯೋತ್ಸವ ನೃತ್ಯ ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ಹಾಗೂ ದೇಶಭಕ್ತಿ ಬಿಂಬಿಸುವಂತೆ ವಿಶೇಷವಾಗಿ ಸಂಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಪೊಲೀಸ್‌ ಇಲಾಖಾ ಅಧಿಕಾರಿಗಳಿಗೆ ಹಾಗೂ ಇತರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸಮಾರಂಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಯಿತು. ಕ್ರೀಡಾಂಗಣದಲ್ಲಿ ಆಸನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿಕೆ, ಪ್ರವೇಶ ಮಾರ್ಗದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ, ಕ್ರೀಡಾಂಗಣದ ಹೊಸ ಆವರಣದಲ್ಲಿ ವಾಹನ ನಿಲುಗಡೆ ಸೌಕರ್ಯ, ಮಳೆ ಬಂದಾಗ ಪರ್ಯಾಯ ವ್ಯವಸ್ಥೆ ಕುರಿತಂತೆ ಸಭೆಯಲ್ಲಿ ಸುದೀರ್ಘ‌ವಾಗಿ ಚರ್ಚಿಸಲಾಯಿತು.

Advertisement

ಸ್ವಾತಂತ್ರ್ಯೋತ್ಸವದ ಮುನ್ನಾದಿನ ನಗರದ ಸ್ವಚ್ಛತೆ, ಕ್ರೀಡಾಂಗಣದ ಸ್ವಚ್ಛತೆ, ಸಾಧಕರ ಪುತ್ಥಳಿಗಳಿಗೆ ದೀಪಾಲಂಕಾರ, ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಕುಡಿಯುವ ನೀರಿನ ವ್ಯವಸ್ಥೆಗೆ ಪೌರಾಯುಕ್ತರಿಗೆ ಸೂಚನೆ ನೀಡಲಾಯಿತು.

ಸಮಾರಂಭದ ಸಂದರ್ಭದಲ್ಲಿ ಅಗ್ನಿಶ್ಯಾಮಕದಳ ವಾಹನ ಹಾಗೂ ಅಂಬ್ಯುಲೆನ್ಸ್‌ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಂಜೆ ಗುರುಭವನದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ಕಾರ್ಯಕ್ರಮ ಸಂಯೋಜನೆ, ಪಥಸಂಚಲನ, ಧ್ವಜಾರೋಹಣ, ಸನ್ಮಾನ, ಗಣ್ಯರ ಆಮಂತ್ರಣ, ಸ್ವಾತಂತ್ರ್ಯೋತ್ಸವ ಸಂದೇಶ ರೂಪಿಸುವುದು, ವೇದಿಕೆ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥ ಸಂಚಲನ, ಮಕ್ಕಳಿಗೆ ಸಿಹಿ ವಿತರಣೆ ಸೇರಿದಂತೆ ವ್ಯವಸ್ಥಿತವಾಗಿ ನಿರ್ವಹಿಸಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಹಲವು ಸಮಿತಿ ರಚಿಸಲಾಯಿತು.

ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲೀಲಾವತಿ, ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌. ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದ ಹೆಗ್ಗಳಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆರ್‌.ವಾಸಣ್ಣ, ವಾರ್ತಾಧಿಕಾರಿ ಬಿ.ಆರ್‌. ರಂಗನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರಕಾಶ, ಪೌರಾಯುಕ್ತ ಬಸವರಾಜ ಜಿದ್ದಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶಾಕೀರ್‌ ಅಹ್ಮದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಸ್‌. ಪಾಟೀಲ, ಅಬಕಾರಿ, ಅಗ್ನಿಶ್ಯಾಮ ದಳ ಹಾಗೂ ಇತರ ಇಲಾಖಾ ಅಧಿಕಾರಿಗಳು, ಶಾಲಾ-ಕಾಲೇಜು ಮುಖ್ಯಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next