Advertisement

ಪಚ್ಚನಾಡಿ ಘನತ್ಯಾಜ್ಯ ತೆರವು: ಸಚಿವ ಸಂಪುಟದ ಅನುಮೋದನೆ ಪಡೆದುಕೊಳ್ಳಲು ಸೂಚನೆ

08:43 PM Feb 23, 2022 | Team Udayavani |

ಬೆಂಗಳೂರು: ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಈ ಗುರುವಾರವೇ ಸಚಿವ ಸಂಪುಟದ ಅನುಮೋದನೆ ಪಡೆಯಲು ಎಲ್ಲ ರೀತಿಯ ಪ್ರಯತ್ನ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

Advertisement

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶಗಳಲ್ಲಿನ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾದ ಅನಾಹುತಗಳಿಗೆ ಸಂಬಂಧಿಸಿದಂತೆ ಕನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಹಾಜರಾಗಿ, ನ್ಯಾಯಾಲಯ ಕಳೆದ ವಿಚಾರಣೆ ವೇಳೆ ನೀಡಿದ್ದ ನಿರ್ದೇಶನದಂತೆ ಭೂಭರ್ತಿ ಘಟಕದಲ್ಲಿ ಬಹಳ ವರ್ಷಗಳಿಂದ ಶೇಖರಣೆಯಾಗಿರುವ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ವಿಚಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮುಂದೆ ಮಂಡಿಸಲಾಗಿತ್ತು. ತ್ಯಾಜ್ಯ ಸ್ಥಳಾಂತರ ಕಾಮಗಾರಿಗೆ ಸಚಿವ ಸಂಪುಟದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿಗಳೇ ಕ್ರಮ ಕೈಗೊಳ್ಳುತ್ತಿದ್ದಾರೆ. ಪ್ರತಿ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ (ಫೆ.24) ಅಥವಾ ಮುಂದಿನ ಗುರುವಾರದೊಳಗೆ ಸಂಪುಟದ ಅನುಮೋದನೆ ಪಡೆಯಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅದನ್ನು ಪರಿಗಣಿಸಿದ ಪೀಠ, ಸಾಧ್ಯವಾದಷ್ಟೂ ಇದೇ ಗುರುವಾರವೇ ಸಚಿವ ಸಂಪುಟದ ಅನುಮೋದನೆ ಪಡೆಯಲು ಎಲ್ಲ ಪ್ರಯತ್ನಗಳನ್ನೂ ಸರ್ಕಾರ ಮಾಡಬೇಕು ಎಂದು ತಿಳಿಸಿ, ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿತು.

ಖುದ್ದು ಹಾಜರಿಗೆ ವಿನಾಯಿತಿ ಇಲ್ಲ:
ಬುಧವಾರದ ವಿಚಾರಣೆಗೆ ಮಂಗಳೂರು ಪಾಲಿಕೆ ಆಯುಕ್ತರು ಖುದ್ದು ಹಾಜರಾಗಿದ್ದರು. ಅರ್ಜಿಯ ಮುಂದಿನ ವಿಚಾರಣೆಗೆ ಪಾಲಿಕೆ ಆಯುಕ್ತರಿಗೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡುವಂತೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಮಾಡಿದ ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿಗಳು, ಮೊದಲು ಸಚಿವ ಸಂಪುಟದ ಅನುಮೋದನೆ ಸಿಗಲಿ. ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದನ್ನು ಕಳೆದ 5 ತಿಂಗಳಿಂದ ನೋಡುತ್ತಿದ್ದೇನೆ. ಆಯುಕ್ತರೇ ಸರ್ಕಾರದ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸಲಿ, ಇಲ್ಲವಾದರೆ ಕೆಲಸಗಳು ಬೇಗ ಆಗುವುದಿಲ್ಲ. ಸಚಿವ ಸಂಪುಟದ ಅನುಮೋದನೆ ಸಿಗುವವರೆಗೆ ಆಯುಕ್ತರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದರು.

Advertisement

ಸಾವು ಸಂಭವಿಸಿಲ್ಲ:
ಭೂಭರ್ತಿ ಘಟಕದಲ್ಲಿ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯದ ಪರಿಣಾಮದಿಂದ 19 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕಳೆದ ವಿಚಾರಣೆ ವೇಳೆ ನ್ಯಾಯಾಲಯದ ಆದೇಶದಲ್ಲಿ ದಾಖಲಿಸಲಾಗಿದೆ. ಆದರೆ, ಅಂತಹ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಎಎಜಿ ಧ್ಯಾನ್‌ ಚಿನ್ನಪ್ಪ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಸಮ್ಮತಿಸಿದ ಅರ್ಜಿದಾರರ ಪರ ವಕೀಲ ಶ್ರೀಧರ್‌ ಪ್ರಭು, ತ್ಯಾಜ್ಯದ ಕಾರಣದಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ, 19 ಜನರನ್ನು ಸ್ಥ‚ಳಾಂತರಿಸಿರಬಹುದು ಎಂದು ತಿಳಿಸಿದರು.

ಸ್ಥಳಾಂತರಗೊಂಡಿರುವ ಎಲ್ಲರಿಗೂ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಎಎಜಿ ತಿಳಿಸಿದರು. ಅದನ್ನು ನ್ಯಾಯಪೀಠ ದಾಖಲಿಸಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next