ಬೆಂಗಳೂರು: ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಧಿಸೂಚಿತ 80 ಉದ್ಯೋಗಗಳ ಪೈಕಿ 60 ಉದ್ಯೋಗಳ ಕನಿಷ್ಠ ವೇತನ ಪರಿಷ್ಕರಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದಿಂದ ಶನಿವಾರ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾನೂನು ಹಾಗೂ ಬೇಡಿಕೆಗೆ ತಕ್ಕಂತೆ ವೇತನ ಪರಿಷ್ಕರಣೆ ಮಾಡಬೇಕು ಎಂದು ಕಾರ್ಖಾನೆ ಹಾಗೂ ಉದ್ಯಮಗಳಿಗೆ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಾರ್ಖಾನೆಗಳು ಈಗಾಗಲೇ ಅಧಿಸೂಚನೆ ಹೊರಡಿಸಿವೆ ಎಂದು ತಿಳಿಸಿದರು. ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 163 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಬೀದಿ ಬದಿಯ 15 ಲಕ್ಷ ವ್ಯಾಪಾರಿಗಳಿಗೆ ಪಿಂಚಣಿ ನೀಡುವ ಹಾಗೂ ಸ್ಮಾರ್ಟ್ಕಾರ್ಡ್ ವಿತರಿಸುವ ಸೌಲಭ್ಯವನ್ನು ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದರು.