Advertisement

ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ: ಭಾವುಕರಾಗಿ ನುಡಿದ ಸಚಿವೆ ಶಶಿಕಲಾ ಜೊಲ್ಲೆ

08:56 PM Aug 06, 2021 | Team Udayavani |

ನಿಪ್ಪಾಣಿ : ತಾವು ಮಾಡದ ತಪ್ಪಿಗೆ ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಭಾವುಕರಾಗಿ ನುಡಿದರು.

Advertisement

ನಿಪ್ಪಾಣಿ ಕ್ಷೇತ್ರಕ್ಕೆ ಸಚಿವರಾಗಿ ಮೊದಲಬಾರಿಗೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ಮಾಡಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನಗೆ ಅದ್ದೂರಿ ಸತ್ಕಾರ ಮಾಡಿದ್ದೀರಿ ನಾನು ಇದನ್ನು ಯಾವತ್ತೂ ಮರೆಯುವುದಿಲ್ಲ. ನಮ್ಮೆಲ್ಲರ ಮೇಲೆ ದೊಡ್ಡ ಜವಾಬ್ದಾರಿ ಇದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಅವರು, ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಹಾಗೂ ಇಂದಿನ ಮುಖ್ಯಮಂತ್ರಿಗಳಾಗಿರುವ ಬಸವರಾಜ ಬೊಮ್ಮಾಾಯಿ ಅವರು ಕೋವಿಡ್ ಮೂರನೇ ಅಲೆ ಎದುರಾಗುವ ಸಂಭವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ನಾವೆಲ್ಲರೂ ಸಚಿವರು ಕೋವಿಡ್ ತಡೆಯಲು ಸಿದ್ದತೆ ಮಾಡಿಕೊಂಡಿದ್ದೇವೆ.

ಕಿತ್ತೂರು ಚೆನ್ನಮ್ಮ ಒಬ್ಬ ಮಹಿಳೆಯಾಗಿ ಬ್ರಿಟಿಷರ ಕಾಲದಲ್ಲಿ ಜರತಾರಿ ಸೀರೆಯುಟ್ಟು ಕೈಯಲ್ಲಿ ಚಿನ್ನದ ಬಳಿ ತೊಟ್ಟು ಅರಮನೆಯಲ್ಲಿ ಇರಬೇಕಾದ ಮಹಿಳೆ ತನ್ನ ರಾಜ್ಯದ ಪ್ರಜೆಗಳಿಗಾಗಿ ಹೋರಾಟ ಮಾಡಿದ್ದಳು. ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹಾರಾಜರು, ಬಸವಣ್ಣನವರು ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಾವೆಲ್ಲ ನೆನೆಸಬೇಕಾಗುತ್ತದೆ ಎಂದು ಹೇಳಿದರು.

ನಾನು ಒಬ್ಬ ಹೆಣ್ಣು ಮಗಳಾಗಿ ಇಷ್ಟು ದೊಡ್ಡ ಸ್ಥಾನಕ್ಕೇರಲು ಕ್ಷೇತ್ರದ ಜನರ ಸಹಕಾರ, ಪಕ್ಷದ ನಾಯಕರ ಬೆಂಬಲ ಹಾಗೂ ನನ್ನ ಶ್ರಮ ಇಲ್ಲಿಗೆ ತಂದು ನಿಲ್ಲಿಸಿದೆ. ಸರ್ಕಾರ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಎಲ್ಲ ಕೆಲಸವನ್ನು ನಾನೊಬ್ಬಳೇ ಮಾಡಲು ಸಾಧ್ಯವಿಲ್ಲ. ಎಲ್ಲ ಕಾರ್ಯಕರ್ತರ ಸಹಕಾರವೂ ಬೇಕಾಗುತ್ತದೆ. ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಮತ್ತೆ ಮಂತ್ರಿ ಸ್ಥಾನ  ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ನನ್ನ ಕ್ಷೇತ್ರದಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ನಾಳೆಯಿಂದ ವಿಜಯಪುರಕ್ಕೆ ಭೇಟಿ ನೀಡಿ ಮುದ್ದೇಬಿಹಾಳ್ ಮತ್ತು ನಿಡಗುಂದಿ ತಾಲೂಕಿನಲ್ಲಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

Advertisement

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಇದ್ದಾಗ ಅನೇಕ ರೀತಿಯ ಶತ್ರುಗಳು ಇರುತ್ತಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯ ತನಿಖೆ ನಡೆಸಲಿ ನಾನು ಅದನ್ನು ಎದುರಿಸಲು ಸಿದ್ದಳಿದ್ದೇನೆ. ಆ ರೀತಿ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ. ನನ್ನ ಮೇಲೆ ಬಂದಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾವ ಇಲಾಖೆ ಮತ್ತು ಜಿಲ್ಲೆ ಉಸ್ತುವಾರಿ ಕೊಡುತ್ತಾರೋ ಆ ಜಿಲ್ಲೆಯ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಈ ಹಿಂದೆಯೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಮರ್ಥ ಮತ್ತು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆಯಾಗಿಯೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ವಿಶ್ವಾಸ ಗಳಿಸಿಕೊಂಡು ಒಳ್ಳೆಯ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಾಧನೆ

ನಾನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಉಂಟಾದ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ  ಇಲಾಖೆ ವತಿಯಿಂದ ಅಗತ್ಯ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಿದ್ದೇನೆ.

ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲು ಕ್ರಮ ವಹಿಸಲಾಗಿದೆ ಎಂದರು.

ನಾನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವ ಸಂದರ್ಭದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣ ಮಾಸಾಚರಣೆಯಲ್ಲಿ  ದೇಶದಲ್ಲಿ ಕರ್ನಾಟಕ ರಾಜ್ಯವು 15 ನೇ ಸ್ಥಾನದಲ್ಲಿತ್ತು. ಆದರೆ, ಕಳೆದ ಎರಡು ವರ್ಷದಲ್ಲಿ ನನ್ನ ನಿರಂತರ ಪರಿಶ್ರಮ ಹಾಗೂ ಅಧಿಕಾರಿಗಳ ಸಹಕಾರದೊದಿಗೆ 2 ನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದೇನೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಅಡಿಯಲ್ಲಿ ದೇಶದಲ್ಲಿ ರಾಜ್ಯವು 26 ನೇ ಸ್ಥಾನದಲ್ಲಿತ್ತು. ಈಗ ಐದನೇ ಸ್ಥಾನಕ್ಕೆ ತರಲಾಗಿದೆ. ರಾಜ್ಯದಲ್ಲಿ ಅಪೌಷ್ಟಿಕತೆ ಪ್ರಮಾಣವು  ಶೇ 0.3% ರಷ್ಟಿತ್ತು. ನಾನು ಅಧಿಕಾರ ಸ್ವೀಕರಿಸಿದ ಮೇಲೆ ಎರಡು ವರ್ಷಗಳಲ್ಲಿ ಶೇ 0.1% ಕ್ಕೆ ಇಳಿಸಲಾಗಿದೆ ಎಂದು ವಿವರಿಸಿದರು.

ಅಲ್ಲದೇ ಕೊರೊನಾ ಸೋಂಕಿನಿಂದ ತಂದೆ ತಾಯಿಯನ್ನು ಕಳೆದು ಕೊಂಡ ಮಕ್ಕಳ ರಕ್ಷಣೆಗೆ ಇಲಾಖೆ ವತಿಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ.  ಮುಖ್ಯಮಂತ್ರಿಗಳ ಬಾಲ ಸೇವಾ ಯೋಜನೆ ಅಡಿಯಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂ. ಸಹಾಯಧನ ನೀಡಲು ತೀರ್ಮಾನಿಸಲಾಗಿದೆ. 10 ವರ್ಷದ ಒಳಗಿನ ಮಕ್ಕಳನ್ನು ಸರ್ಕಾರಿ ವಸತಿ ಶಾಲೆಗಳಿಗೆ ಸೇರಿಸಿ ಅವರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳಲಿದೆ. ಅಲ್ಲದೇ 21 ವರ್ಷ ಪೂರೈಸಿರುವ ಹೆಣ್ಣು ಮಕ್ಕಳ ಮದುವೆ, ವಿದ್ಯಾಭ್ಯಾಸಕ್ಕಾಗಿ 1 ಲಕ್ಷ ರೂ. ಗಳನ್ನು ನೀಡಲು ನಾನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next