ಬೆಂಗಳೂರು: ಆಪರೇಷನ್ ಕಮಲದ ಆತಂಕದ ಹಿನ್ನೆಲೆಯಲ್ಲಿ ರೆಸಾರ್ಟ್ ಸೇರಿದ್ದ ಕಾಂಗ್ರೆಸ್ ಶಾಸಕರು ಗಲಾಟೆ ಮಾಡಿಕೊಂಡ
ಹಿನ್ನೆಲೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಲ್ಲದೇ ಶತಾಯುಷಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರೆಸಾರ್ಟ್ ರಾಜಕೀಯಕ್ಕೆ ವಿದಾಯ ಹೇಳಿ ಕೈ ನಾಯಕರು ತಮ್ಮ ಶಾಸಕರನ್ನು ಆತಂಕದಲ್ಲಿಯೇ ಕ್ಷೇತ್ರಗಳಿಗೆ ಕಳುಹಿಸಿ ಕೊಟ್ಟಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ, ಶಾಸಕ ಗಣೇಶ್ ಅವರ ಅಮಾನತು ಆದೇಶ ಹೊರಡಿಸಿದ್ದಾರೆ. ಘಟನೆಯ ಬಗ್ಗೆ ಆನಂದ್ ಸಿಂಗ್ ಗಂಭೀರ ಆರೋಪ ಮಾಡಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್. ಗಣೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಲ್ಲದೇ ಪ್ರಕರಣದ ವಿಚಾರಣೆ ನಡೆಸಲು ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ಸಚಿವ ರಾದ ಕೆ.ಜೆ. ಜಾರ್ಜ್ ಹಾಗೂ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ವಿಶೇಷ ತನಿಖಾ ಸಮಿತಿ ರಚಿಸಲಾಗಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಿಂಗ್ಗೆ ಚಿಕಿತ್ಸೆ ಮುಂದುವರಿಕೆ
ಭಾನುವಾರ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ವಿಜಯನಗರ ಶಾಸಕ ಆನಂದ್ ಸಿಂಗ್ ಅವರಿಗೆ ಕಣ್ಣಿಗೆ ಆಗಿರುವ ಗಾಯ ಇನ್ನೂ ಊದಿಕೊಂಡಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಇದರ ಬೆನ್ನಲ್ಲೇಕಂಪ್ಲಿ ಶಾಸಕ ಗಣೇಶ್ ಐಪಿಸಿ ಸೆಕ್ಸನ್ 323, 324, 307 ,504, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.