Advertisement

ಫ‌ಲಿತಾಂಶ ಬಳಿಕ ಶಾಸಕರ ರಾಜೀನಾಮೆ ಪರ್ವ?

11:21 PM May 13, 2019 | Team Udayavani |

ಬೆಂಗಳೂರು: ಅವಕಾಶ ಸಿಕ್ಕರೆ ರಾಜ್ಯದಲ್ಲಿ ಸರ್ಕಾರ ರಚಿಸಿಯೇ ತೀರುವ ಹುಮ್ಮಸ್ಸಿನಲ್ಲಿರುವ ರಾಜ್ಯ ಬಿಜೆಪಿ ನಾಯಕರಿಗೆ ಕುಂದಗೋಳ, ಚಿಂಚೋಳಿ ವಿಧಾನಸಭಾ ಉಪಚುನಾವಣೆ ಗೆಲ್ಲುವುದು ಮುಖ್ಯವಾಗಿದ್ದು, ಅಭ್ಯರ್ಥಿಗಳ ಗೆಲುವಿಗಾಗಿ ಬೆವರು ಹರಿಸುತ್ತಿದ್ದಾರೆ. ಹಾಗಾಗಿ ಉಪಚುನಾವಣೆ ಫ‌ಲಿತಾಂಶ ಪ್ರಕಟವಾಗುತ್ತಿದ್ದಂತೆ ಆಡಳಿತ ಪಕ್ಷಗಳ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಶುರುವಾಗುವುದೇ ಎಂಬ ಕುತೂಹಲ ಮೂಡಿದೆ.

Advertisement

ವಿಧಾನಸಭೆಯಲ್ಲಿ ಸಂಖ್ಯಾಬಲ ವೃದ್ಧಿ ದೃಷ್ಟಿಯಿಂದ ಎರಡು ವಿಧಾನಸಭಾ ಉಪಚುನಾವಣೆ ಗೆಲ್ಲುವುದು ಬಿಜೆಪಿಗೆ ಮುಖ್ಯವಾಗಿದೆ. ಆ ಕಾರಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ಹಿರಿಯ ನಾಯಕರು, ಮುಖಂಡರು ಎರಡೂ ಕ್ಷೇತ್ರಗಳಲ್ಲಿ ಬೀಡುಬಿಟ್ಟು ಮತದಾರರನ್ನು ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಫ‌ಲಿತಾಂಶ ಆಧರಿಸಿ ಮುಂದೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇರಿ ಇತರೆ ಕೆಲ ಅತೃಪ್ತರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತು ದಟ್ಟವಾಗಿ ಕೇಳಿಬರಲಾರಂಭಿಸಿದೆ.

ವಿಧಾನಸಭೆಯಲ್ಲಿ 104 ಶಾಸಕ ಬಲ ಹೊಂದಿರುವ ಬಿಜೆಪಿಯು ಕಳೆದ ಫೆಬ್ರವರಿಯಲ್ಲಿ ನಡೆದ ವಿಧಾನಮಂಡಲದಲ್ಲಿ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣ ಸಂದರ್ಭದಲ್ಲೇ ಮೈತ್ರಿ ಸರ್ಕಾರಕ್ಕೆ ಅಗತ್ಯ ಸಂಖ್ಯಾಬಲವಿಲ್ಲ ಎಂಬುದನ್ನು ಬಿಂಬಿಸುವ ಪ್ರಯತ್ನಕ್ಕೆ ಸಜ್ಜಾಗಿದ್ದರೂ ಕೊನೆಯ ಕ್ಷಣದಲ್ಲಾದ ಬೆಳವಣಿಗೆ, “ಆಪರೇಷನ್‌ ಕಮಲ’ ಪ್ರಯತ್ನದ ಅವಾಂತರ, ಗೊಂದಲದಿಂದಾಗಿ ಸಾಧ್ಯವಾಗಲಿಲ್ಲ.

ಈ ನಡುವೆ ಕಾಂಗ್ರೆಸ್‌ನ ಕೆಲ ಅತೃಪ್ತ ಶಾಸಕರೊಂದಿಗೆ ಮುಂಬೈನ ಹೋಟೆಲ್‌ನಲ್ಲಿ ವಾಸ್ತವ ಹೂಡಿದ್ದರೆನ್ನಲಾದ ಡಾ.ಉಮೇಶ್‌ ಜಾಧವ್‌ ಅವರು ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಹಾಗಾಗಿ ಇತರೆ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ಮೂಡಿದೆ.

ಗೆಲುವು ಅನಿವಾರ್ಯ: ಕಾಂಗ್ರೆಸ್‌, ಜೆಡಿಎಸ್‌ನ ಕೆಲ ಅತೃಪ್ತ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆಂದು ಕೆಲ ನಾಯಕರು ಹೇಳುತ್ತಾರೆ. ಆದರೆ ಯಾವುದೇ ಅತೃಪ್ತ ಶಾಸಕರು ರಾಜೀನಾಮೆ ನೀಡಿದರೂ “ಆಪರೇಷನ್‌ ಕಮಲ’ಕ್ಕೆ ಒಳಗಾಗಿದ್ದಾರೆ ಎಂದು ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಆರೋಪ ಮಾಡುವುದು ಸಹಜ.

Advertisement

ಇದರಿಂದ ಪಕ್ಷಕ್ಕೆ ಮತ್ತೆ “ಆಪರೇಷನ್‌ ಕಮಲ’ದ ಅಪಖ್ಯಾತಿ ಸುತ್ತಿಕೊಳ್ಳುತ್ತದೆ. ಆದರೆ ಕುಂದಗೋಳ, ಚಿಂಚೋಳಿ ಉಪಚುನಾವಣೆಯಲ್ಲಿ ಗೆದ್ದರೆ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳವಾಗಲಿದೆ. ಹಾಗಾಗಿ ಗೆಲ್ಲಲೇ ಬೇಕೆಂಬ ಹಠಕ್ಕೆ ಬಿದ್ದವರಂತೆ ಯಡಿಯೂರಪ್ಪ ಹಾಗೂ ಇತರೆ ನಾಯಕರು ಕುಂದಗೋಳ, ಚಿಂಚೋಳಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಒಂದೊಮ್ಮೆ ಎರಡು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಸೋಲಾದರೆ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಗೆ ಜನಾದೇಶವಿಲ್ಲ ಎಂಬ ವಿಚಾರದ ಮೇಲೆ ಬಿಜೆಪಿಯು ಆಡಳಿತಾರೂಢ ಪಕ್ಷಗಳ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ. ಇದರಿಂದ ಕಾಂಗ್ರೆಸ್‌, ಜೆಡಿಎಸ್‌ನ ಅತೃಪ್ತ ಶಾಸಕರು ಗೊಂದಲಕ್ಕೆ ಒಳಗಾದರೆ ಅವರ ವಿಶ್ವಾಸ ಗಳಿಸಿ ಲಾಭ ಪಡೆಯುವ ಲೆಕ್ಕಾಚಾರವೂ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ರಾಜಕೀಯದಲ್ಲಿ ಕ್ಷಿಪ್ರ ಬದಲಾವಣೆ ಲೆಕ್ಕಾಚಾರ: ಅತೃಪ್ತರ ಪೈಕಿ ಕಾಂಗ್ರೆಸ್‌ನ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿರುವುದರಿಂದ ಅವರು ಪಕ್ಷ ತೊರೆಯುವುದು ಖಚಿತ. ಉಳಿದ ಅತೃಪ್ತರು ಲೋಕಸಭೆ ಹಾಗೂ ಎರಡು ವಿಧಾನಸಭಾ ಉಪಚುನಾವಣೆ ಫ‌ಲಿತಾಂಶ ಎದುರು ನೋಡುತ್ತಿದ್ದಾರೆ. ಫ‌ಲಿತಾಂಶ ಏನೇ ಇದ್ದರೂ ಹತ್ತಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಖ್ಯ ಇಟ್ಟಕೊಂಡಿದ್ದು, ರಾಜಕೀಯದಲ್ಲಿ ಕ್ಷಿಪ್ರ ಬದಲಾವಣೆಗಳಾಗುವ ನಿರೀಕ್ಷೆಯಿದೆ.

ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ರಚನೆ ಅವಕಾಶ ಸಿಗುವ ವಿಶ್ವಾಸ ಮೂಡಿ ಅತೃಪ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹಾಗಾಗಿ ಫ‌ಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌, ಜೆಡಿಎಸ್‌ನ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಶುರುವಾದರೂ ಆಶ್ಚರ್ಯವಿಲ್ಲ. ರಾಜಕೀಯ ಬೆಳವಣಿಗೆ ಆಧರಿಸಿ ಪಕ್ಷ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.

* ಎಂ. ಕೀರ್ತಿಪ್ರಸಾದ್‌

Advertisement

Udayavani is now on Telegram. Click here to join our channel and stay updated with the latest news.

Next