Advertisement

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

12:52 AM Apr 25, 2024 | Team Udayavani |

ಬೆಂಗಳೂರು: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ಮೋದಿ ಹೇಳುತ್ತಿರುವುದು ಹಸಿ ಸುಳ್ಳು. ಅದು ಅವರ ಅಜ್ಞಾನ ಮಾತ್ರವಲ್ಲ, ಸೋಲಿನ ಭೀತಿ, ಹತಾಶೆಯ ಪ್ರತೀಕ. ಈ ಆರೋಪವನ್ನು ಸಾಬೀತುಪಡಿಸಬೇಕು, ಇಲ್ಲವಾದರೆ ಪ್ರಧಾನಿ ದೇಶದ ಜನರ ಕ್ಷಮೆ ಕೋರಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ದೇಶದಲ್ಲಿ ಇಲ್ಲಿಯ ವರೆಗೆ ಯಾರೂ ಪ್ರಧಾನಿ ಪಟ್ಟವನ್ನು ಇಂತಹ ಕೀಳುಮಟ್ಟಕ್ಕೆ ಇಳಿಸಿರಲಿಲ್ಲ.

ಹಿಂದುಳಿದ ಜಾತಿ ಮತ್ತು ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್‌ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್‌ ಸರಕಾರ ಈ ಕೆಲಸ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಆಗ್ರಹಿಸಿದ್ದಾರೆ.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್ತಿನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹ¨ªೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, ಧರ್ಮದ ಆಧಾರದಲ್ಲಿ ಮತವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ಸರಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿ ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇ. 4ರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶಿಸಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಿಯವರ ಗಮನದಲ್ಲಿ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

Advertisement

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ ಶೇ. 5ಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಸರಕಾರಕ್ಕೂ ಪತ್ರ ಬರೆದಿರುವುದಾಗಿ ತಿಳಿಸಿತ್ತು. ಆದರೆ ಇಂತಹ ಯಾವ ಪತ್ರ ಕೂಡ ರಾಜ್ಯದ ಬಿಜೆಪಿ ಸರಕಾರದಿಂದ ತಮಗೆ ಬಂದಿಲ್ಲ; ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾ. 14ರಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರಕಾರದ ಈ ನಿರ್ಧಾರ ಪ್ರಧಾನಿ ಮೋದಿ ಅವರ ಗಮನಕ್ಕೆ ಬಂದಿರಲಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿ ಒಬ್ಬ ವಿಫ‌ಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಟೀಕಿಸಿದ್ದಾರೆ.

ಮೋದಿ ಹೇಳಿಕೆ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು ಈಗಲೂ ತಮ್ಮ ನಿಲುವಿಗೆ ಬದ್ಧರಾಗಿ¨ªಾರಾ ಇಲ್ಲವೇ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತಾರಾ ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

“3 ದಶಕಗಳಿಂದ ಮುಸ್ಲಿಮರು ಒಬಿಸಿಯಲ್ಲಿದ್ದಾರೆ’
ರಾಜ್ಯ ಸರಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಒಬಿಸಿ 2ಬಿ ವರ್ಗಕ್ಕೆ ಸೇರಿಸಲಾಗಿದೆ. 3 ದಶಕಗಳಿಂದ ಈ ಮೀಸಲಾತಿ ಜಾರಿಯಲ್ಲಿದೆ. ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರವಾಗಲಿ, 10 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ಸರಕಾರವಾಗಲಿ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿ ಸಹಿತ ಯಾರೂ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next