Advertisement

ಮುಂಗಾರು: ಮುನ್ನೆಚ್ಚರಿಕಾ ಕ್ರಮಕ್ಕೆ ಸಿಎಂ ಸೂಚನೆ

07:56 PM May 08, 2019 | Team Udayavani |

ಬೆಂಗಳೂರು: ನಗರದಲ್ಲಿ ಮಂಗಳವಾರ ಸಂಭವಿಸಿದ ಮಳೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಬಿ.ಎಂ.ಪಿ, ಬಿ.ಡಿ.ಎ, ಹಾಗೂ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Advertisement

ಮಳೆ ಪರಿಣಾಮದಿಂದಾಗಿ ಬೆಂಗಳೂರಿನಲ್ಲಿ ಈಗಾಗಲೇ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ವಿದ್ಯುತ್ ಕಂಬಗಳು ಉರುಳಿವೆ. ಸಾರ್ವಜನಿಕರಿಗೆ ಹಲವು ಪ್ರದೇಶಗಳಲ್ಲಿ ತೊಂದರೆ ಉಂಟಾಗಿದೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಶಿಖಾ ಅವರು ಈ ಕುರಿತು ಮುಖ್ಯಮಂತ್ರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿ, ಬೆಂಗಳೂರು ವಿದ್ಯುತ್ ಕಂಪನಿಯ 295 ಕಂಬಗಳು ಮುರಿದಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿ 80 ಕಂಬಗಳು ಬಿದ್ದಿವೆ. ಒಟ್ಟಾರೆ 76 ಲಕ್ಷ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ತಿಳಿಸಿದರು.

ತೆರೆದ ವಿದ್ಯುತ್ ತಂತಿಗಳನ್ನು ಸರಿಸಪಡಿಸುವುದು, ಮುರಿದ ಮರದ ಕೊಂಬೆಗಳನ್ನು ತುಂಡರಿಸುವುದು ಹಾಗೂ ಪರಿವರ್ತಿತ ಕೇಂದ್ರಗಳ ದುರಸ್ಥಿ ಕಾರ್ಯವನ್ನು ಕೈಗೊಳ್ಳಾಗಿದೆ. ಪೋಲಿಸರಿಂದ 134 ಅಪಾಯದ ಸ್ಥಳಗಳನ್ನು ಗುರುತಿಸಲಾಗಿದ್ದು, ಈ ಪೈಕಿ 63 ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ವಿವರಿಸಿದರು.

ಹೊಸ ಅಥವಾ ಹಳೆಯ ಬಡಾವಣೆಗಳಲ್ಲಿ ವಿದ್ಯುತ್ ವಿಸ್ತರಣೆಗಳನ್ನು ಕೈಗೊಳ್ಳುವ ಸಂದರ್ಭಗಳಲ್ಲಿ ಬೆಸ್ಕಾಂ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಇದರಿಂದಾಗಿ ವಿದ್ಯುತ್ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಶಿಖಾ ಅವರು ತಿಳಿಸಿದರು.

Advertisement

ಬೆಂಗಳೂರಿನ ಎಲ್ಲ ಬೀದಿ ದೀಪಗಳನ್ನು ಎಲ್.ಇ.ಡಿ ಗೆ ಪರಿವರ್ತಿಸುವ ಕಾರ್ಯ ಆರಂಭವಾಗಿದೆ ಎಂದು ಅವರು ತಿಳಿಸಿದರು. ಬೆಂಗಳೂರಿನಲ್ಲಿ ಕಸ ವಿಲೇವಾರಿ, ರಸ್ತೆ ದುರಸ್ಥಿ, ಫುಟ್ ಪಾತ್ ನಿರ್ಮಾಣ, ಟೆಂಡರ್ ಶ್ಯೂರ್ ರಸ್ತೆಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದಶಿಗಳು ತಿಳಿಸಿದರು.

ಕಂದಾಯ ನಿವೇಶನಗಳಲ್ಲಿ ವಿದ್ಯುತ್ ತಂತಿಗಳ ಹತ್ತಿರ ಕಟ್ಟಡ ನಿರ್ಮಾಣವಾಗುತ್ತಿರುವುದು ಹೆಚ್ಚಿದ್ದು, ನಗರಸಭಾ ಸದಸ್ಯರುಗಳು ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಬಿ.ಬಿ.ಎಂ.ಪಿ, ಬಿ.ಡಿ.ಎ, ಬೆಸ್ಕಾಂ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಕರೆದು 10-15 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಗೋಪಾಲಯ್ಯ, ಬಿಬಿಎಂಪಿ ಮಹಾಪೌರರಾದ ಗಂಗಾಂಬಿಕಾ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿ.ಡಿ.ಎ.ಆಯುಕ್ತರಾದ ರಾಕೇಶ್ ಸಿಂಗ್, ಕಾಲೇಜು ಶಿಕ್ಷಣ ಇಲಾಖೆ ಆಯಕ್ತರಾದ ಡಾ. ಎನ್ ಮಂಜುಳಾ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next