Advertisement

6ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶ

11:14 PM May 31, 2019 | Team Udayavani |

ಬೆಂಗಳೂರು: ಕೇರಳ ಹಾಗೂ ಕರ್ನಾಟಕಕ್ಕೆ ಒಂದೇ ದಿನ (ಜೂನ್‌ 6) ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ.6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ.

Advertisement

ಈ ಬಾರಿ ವಾಡಿಕೆಯಷ್ಟು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.97ರಷ್ಟು ಮುಂಗಾರು ಮಳೆಯಾಗುವ ಸಾಧ್ಯತೆಯಿದೆ. ಜೂನ್‌ ಆರಂಭದಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ನೈರುತ್ಯ ಮುಂಗಾರು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.8ರಷ್ಟು ಕಡಿಮೆಯಾಗಬಹುದು ಎಂದು ವರದಿಯಲ್ಲಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್‌ ಗವಾಸ್ಕರ್‌, ಹಿಂದೆಯೂ ಹಲವು ಬಾರಿ ಕರ್ನಾಟಕ ಮತ್ತು ಕೇರಳದ ಕರಾವಳಿಗೆ ಒಂದೇ ದಿನ ಮುಂಗಾರು ಪ್ರವೇಶಿಸಿದ ಉದಾಹರಣೆಗಳಿದ್ದು, ಈ ಬಾರಿಯೂ ಮರುಕಳಿಸುವ ಸಾಧ್ಯತೆಯಿದೆ ಎಂದು ಹೇಳಿದರು.

ಕೆಲವೆಡೆ ಭಾರೀ ಮಳೆ: ಮುಂದಿನ ಎರಡು ದಿನಗಳು ರಾಜ್ಯದ ದಕ್ಷಿಣ ಒಳನಾಡು ಸೇರಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಭಾಗಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಹಾಸನ, ತುಮಕೂರು, ಕೊಡಗು, ಮೈಸೂರು, ರಾಮನಗರ ಸೇರಿದಂತೆ ಕೆಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.

Advertisement

ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಉಷ್ಣಾಂಶ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರಲಿದೆ. ಕೆಲವೆಡೆ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next