Advertisement

Monsoon Rain Damage: ಮೂಲಸೌಕರ್ಯ ಪುನರ್‌ನಿರ್ಮಾಣ ಪೂರ್ಣಗೊಳಿಸಲು ಸೂಚನೆ

01:13 AM Oct 26, 2024 | Team Udayavani |

ಮಣಿಪಾಲ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತ ಗತಿಯಲ್ಲಿ ಕೈಗೊಂಡು ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಶೇ. 15ರಷ್ಟು ಹೆಚ್ಚು ಮಳೆಯಾಗಿ ರಸ್ತೆ, ಸೇತುವೆ, ವಿದ್ಯುತ್‌ ಸರಬರಾಜು ಕಂಬ, ಟ್ರಾನ್ಸ್‌ಫಾರ್ಮರ್‌ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತಿತರ ಹಾನಿಯಿಂದಾಗಿ 28,721.21 ಲಕ್ಷ ರೂ.ಗಳಷ್ಟು ಅಂದಾಜು ನಷ್ಟ ಉಂಟಾಗಿದೆ.

ಇವುಗಳ ಪುನರ್‌ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿ ಪರಿಹಾರ ಬಾಕಿ ಇರಿಸಿಕೊಳ್ಳಬಾರದು.

ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ತಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನವೆಂಬರ್‌ ಅಂತ್ಯದ ಒಳಗೆ ಕೆಲಸಗಳನ್ನು ಪೂರ್ಣಗೊಳಿಸಬೇಕು. ಶಾಲಾ, ಅಂಗನವಾಡಿ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳಲು ಅನುದಾನದ ಆವಶ್ಯಕತೆ ಇದ್ದಲ್ಲಿ ಕೂಡಲೇ ಮಾಹಿತಿ ನೀಡುವಂತೆ ತಿಳಿಸಿದರು.

Advertisement

ಈ ತಿಂಗಳ ಅಂತ್ಯದವರೆಗೂ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಿಂಗಾರು ಸಂದರ್ಭದಲ್ಲಿ ಆಸ್ತಿ-ಪಾಸ್ತಿ ಹಾನಿಯಾಗದಂತೆ, ಮನೆಹಾನಿ ಆದ ಸಂದರ್ಭದಲ್ಲಿ ಸಂತ್ರಸ್ತರನ್ನು ಕಾಳಜಿ ಕೇಂದ್ರ ಅಥವಾ ಇತರ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಎಲ್ಲ ಇಲಾಖೆಯ ಅಧಿಕಾರಿಗಳು ರಕ್ಷಣ ಸಾಮಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜತೆಗೆ ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮಳೆ ನಿಂತ ಹಿನ್ನೆಲೆ ಚರಂಡಿ, ಕಾಲುವೆ, ತೋಡುಗಳಲ್ಲಿ ಸಿಲುಕಿರುವ ಕಸ, ಕಡ್ಡಿ, ತರಗೆಲೆಗಳನ್ನು ಕೂಡಲೇ ತೆರವುಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾ.ಪಂ. ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಡ್ಯಾಂಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಲುಷಿತ ನೀರು ಶುದ್ಧ ಕುಡಿಯುವ ನೀರಿಗೆ ಸೇರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಗುಣಮಟ್ಟ ಪರಿಶೀಲಿಸಿ ಕುಡಿಯಲು ಯೋಗ್ಯವಾಗಿದ್ದಲ್ಲಿ ಮಾತ್ರ ಸೇವನೆಗೆ ಅವಕಾಶ ನೀಡಬೇಕು. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಮರಣ ಸಂಭವಿಸುವ ಸಾಧ್ಯತೆ ಇದ್ದು, ಬಾವಿ ಹಾಗೂ ನದಿ ನೀರಿಗೆ ಕೊಳಚೆ ನೀರು ಸೇರದಂತೆ ಸೂಕ್ತ ಕ್ರಮ ವಹಿಸಬೇಕು. ಸಾರ್ವಜನಿಕ ಹಾಗೂ ಸರಕಾರಿ ಬಾವಿಗಳನ್ನು ಸ್ವತ್ಛಗೊಳಿಸಲು ತತ್‌ಕ್ಷಣವೇ ಮುಂದಾಗಬೇಕು ಎಂದರು.

ಅನುದಾನದಲ್ಲಿ ಕೊರತೆ ಇಲ್ಲ
ಜಿಲ್ಲಾ ವಿಪತ್ತು ನಿರ್ವಹಣ ಕ್ರಮಕ್ಕೆ ಈಗಾಗಲೇ ಪಿ.ಡಿ. ಖಾತೆಯಲ್ಲಿ 11.39 ಕೋ.ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ. ಖಾತೆಯಲ್ಲಿ 165.70 ಲಕ್ಷ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಅನುದಾನದಲ್ಲಿ ಯಾವುದೇ ಕೊರತೆ ಇಲ್ಲ ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಕುಂದಾಪುರ ಸಹಾಯಕ ಕಮಿಷನರ್‌ ಮಹೇಶ್ಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next