Advertisement
ಕಾಂಗ್ರೆಸ್ನಲ್ಲಿ ದಟ್ಟವಾಗಿ ಕಾಣಿಸಿ ಕೊಳ್ಳುತ್ತಿರುವ “ಜನರೇಷನ್ ಗ್ಯಾಪ್’ಗೆ ಮತ್ತಷ್ಟು ಹಿರಿಯರು ನಿರ್ಗಮನದ ಹಾದಿಯಲ್ಲಿರುವುದು ಸ್ಪಷ್ಟವಾಗುತ್ತಿದೆ.ಪಕ್ಷದಲ್ಲಿ ಎಸ್.ಎಂ.ಕೃಷ್ಣ ಅವರಷ್ಟೇ ಹಿರಿಯರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್, ಮುಂದಿನ ಚುನಾವಣೆಯಲ್ಲಿ ನಾನು ಯಾವ ಪಕ್ಷದಲ್ಲಿರುತ್ತೇನೋ ಗೊತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ನಲ್ಲಿ ತಾವು ಸಹ ಹೆಚ್ಚು ದಿನ ಉಳಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
Related Articles
Advertisement
ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾಗಿರುವ ಜಾಫರ್ ಷರೀಫ್, ಹಿಂದೆ ಯುಪಿಎ ಸರ್ಕಾರ ಇದ್ದಾಗ ರಾಜ್ಯಪಾಲರ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ನೆಹರು ಕುಟುಂಬದ ಜತೆ ಆತ್ಮೀಯ ಸಂಬಂಧ ಹೊಂದಿದ್ದ ತಮ್ಮನ್ನು ಪಕ್ಷ ಈಗ ಮೂಲೆಗುಂಪು ಮಾಡಿರುವುದು ಜಾಫರ್ ಷರೀಫ್ ಅವರನ್ನು ಕೆರಳಿಸಿದೆ. ಕಾಂಗ್ರೆಸ್ ತೊರೆಯುವ ಇಂಗಿತವನ್ನು ಜಾಫರ್ ಷರೀಫ್ ವ್ಯಕ್ತಪಡಿಸಿದ್ದು, ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಜೊತೆ ಜಾಫರ ಷರೀಫ್ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜಾಫರ್ ಷರೀಫ್ ಅವರು ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಅವರು ಕಾಂಗ್ರೆಸ್ನಲ್ಲಿಯೇ ಉಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಈಗ ಎಸ್.ಎಂ.ಕೃಷ್ಣ ಅವರ ನಡೆಯನ್ನು ಗಮನಿಸಿರುವ ಅವರು, ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಕೇಂದ್ರ ಸಚಿವರಾಗಿದ್ದ ಕೆಪಿಸಿಸಿ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ಹಾಗೂ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಅವರೂ ಪಕ್ಷದಲ್ಲಿ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಜನಾರ್ದನ ಪೂಜಾರಿ ಅವರಂತೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ನಡವಳಿಕೆಯನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಮತ್ತೂಬ್ಬ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಅವರೂ ಪಕ್ಷ ತಮ್ಮನ್ನು ಕಡೆಗಣಿಸಿದ್ದರ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ತಾವೇ ಮುಂದಾಳುತ್ವ ವಹಿಸಿ ಪಕ್ಷಕ್ಕೆ ಕರೆತಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಗಳನ್ನು ವಿರೋಧಿಸುತ್ತಿದ್ದಾರೆ.
ಇವರೊಂದಿಗೆ ಸಚಿವ ಸ್ಥಾನದಿಂದ ತಮ್ಮನ್ನು ಕೆಳಗಿಳಿಸಿದ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಚಿವರಾದ ಅಂಬರೀಶ್, ಖಮರುಲ್ ಇಸ್ಲಾಂ, ಸಚಿವ ಸ್ಥಾನ ಸಿಗದೆ ಬೇಸರಗೊಂಡಿರುವ ಮಾಲಿಕಯ್ಯ ಗುತ್ತೆದಾರ್, ಡಾ.ಎ.ಬಿ.ಮಾಲಕರೆಡ್ಡಿ ಕೂಡ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅಷ್ಟೇ ಏಕೆ, ಮುಖ್ಯಮಂತ್ರಿಯ ಪರಮಾಪ್ತರಾದ ಸಿ.ಎಂ.ಇಬ್ರಾಹಿಂ ಸಹ ನಿರ್ಲಕ್ಷ್ಯದ ಬಗ್ಗೆ ಅಪಸ್ವರ ಎತ್ತಿ ಜೆಡಿಎಸ್ ಜತೆ ಸಂಪರ್ಕದಲ್ಲಿದ್ದಾರೆ.
ಇದುವರೆಗೆ ಕಾಂಗ್ರೆಸ್ನಲ್ಲಿ ಅಸಮಾಧಾನಗೊಂಡಿದ್ದರೂ ಮೌನವಾಗಿದ್ದ ಅನೇಕ ನಾಯಕರು ಎಸ್.ಎಂ.ಕೃಷ್ಣ ರಾಜೀನಾಮೆ ಬಳಿಕ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಕಲು ಆರಂಭಿಸಿದ್ದು, ಇದು ಕೃಷ್ಣ ರಾಜೀನಾಮೆಯಿಂದ ಆಘಾತಗೊಂಡಿರುವ ಪಕ್ಷಕ್ಕೆ ಬಿಸಿ ತುಪ್ಪವಾಗಿ ಪರಿಗಣಿಸಿದೆ.