Advertisement

ಬಿಜೆಪಿ ಸಾಮಾನ್ಯ ಕಾರ್ಯಕರ್ತನ ಗುರುತಿಸುವ ಪಕ್ಷ

03:59 PM Feb 27, 2021 | Team Udayavani |

ಚಳ್ಳಕೆರೆ: ವಿರೋಧ ಪಕ್ಷಗಳ ಸುಳ್ಳು ಆರೋಪದ ನಡುವೆಯೂ ಸಹ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ದಾಖಲಿಸುವ ಹಾದಿಯಲ್ಲಿ ಕಾರ್ಯಕರ್ತರ ಪಡೆ ಕಾರ್ಯನಿರ್ವಹಿಸಬೇಕು ಎಂದು ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.

Advertisement

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ 2ನೇ ಕಾರ್ಯಕಾರಿ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಗೆಲುವು ಸಾಧಿ ಸಬೇಕಾದರೆ ಆ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಬೇಕಿದೆ. ಜನರು ಬಯಸುವಂತಹ ಆಡಳಿತವನ್ನು ನೀಡಬೇಕಿದೆ. ಅರಿವು ಮೂಡಿಸುವ ಕಾರ್ಯದಲ್ಲಿ ಕಾರ್ಯಕರ್ತರು ಮುಖಂಡರು ಕಾರ್ಯನಿರ್ವಹಿಸುವಂತೆ ಉತ್ತಮ ಆಡಳಿತಕ್ಕಾಗಿ ಚುನಾಯಿತ ಪಕ್ಷದ ಎಲ್ಲಾ ಸದಸ್ಯರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ತುಳಸಿಮುನಿರಾಜು ಮಾತನಾಡಿ, ಬಿಜೆಪಿ ಜನಪ್ರಿಯ ಕಾರ್ಯಕ್ರಮಗಳು ಎಲ್ಲಾ ಮತದಾರರ ಅಂತರಂಗದಲ್ಲಿ ಭದ್ರವಾಗಿ ನೆಲೆಯೂರಿವೆ. ಕಳೆದ ಹಲವಾರು ದಶಕಗಳಿಂದ ಬಿಜೆಪಿ ಸಮಾಜದ ಎಲ್ಲಾ ವರ್ಗಗಳ ಹಿತವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸದಾಕಾಲ ಜನಪರ ಯೋಜನೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತದಲ್ಲಿ ರಾಷ್ಟ್ರದಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿ ಸಿದೆ ಎಂದರು.

ರಾಜ್ಯ ಕಾರ್ಯದರ್ಶಿ ಕೆ.ಎಸ್‌.ನವೀನ್‌ ಮಾತನಾಡಿ, ಹದಿನೈದು ದಿನಗಳ ಒಳಗೆ ಜಿಲ್ಲಾ, ತಾಪಂ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ ಎಂದರು.

ಹಿರಿಯ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಸಾಧಿ ಸಿದ ಗೆಲುವು ಜಿಲ್ಲಾ ಹಾಗೂ ತಾಪಂ ಚುನಾವಣೆಗೆ ರಹದಾರಿಯಾಗಿದೆ. ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಕಾರ್ಯಕರ್ತರಿಗೆ ಟಿಕೇಟ್‌ ನೀಡಬೇಕೆಂದು ನಾನು ಪಕ್ಷವನ್ನು ಒತ್ತಾಯಿಸುತ್ತೇನೆ ಎಂದರು. ಹೊಸದುರ್ಗ ಶಾಸಕ ಗೂಳಿಹಟ್ಟಿಶೇಖರ್‌ ಮಾತನಾಡಿದರು. ಜಿಲ್ಲಾಧ್ಯಕ್ಷ ಎ.ಮುರಳಿ ಯಾದವ್‌ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪಾಲಯ್ಯ, ಸುರೇಶ್‌, ರಾಜೇಶ್‌, ಸೂರನಹಳ್ಳಿ ಶ್ರೀನಿವಾಸ್‌, ಶಂಕರಣ್ಣ, ವಿಭಾಗೀಯ ಉಸ್ತುವಾರಿ ಜಿ.ಎಂ.ಸುರೇಶ್‌, ನಗರಸಭಾ ಸದಸ್ಯರಾದ ಎಸ್‌.ಜಯಣ್ಣ, ಇಂದುಮತಿ ಜಗದೀಶ್‌, ಸಿ.ಎಸ್‌.ಪ್ರಸಾದ್‌, ಡಿ.ಎಂ.ತಿಪ್ಪೇಸ್ವಾಮಿ, ಮೋಹನ್‌, ಶಿವಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next