ಹೊನ್ನಾಳಿ: ಕೆಡಿಪಿ ತ್ತೈಮಾಸಿಕ ಸಭೆಗೆ ಅಧಿಕಾರಿಗಳು ಎಲ್ಲಾ ಮಾಹಿತಿ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ ನನ್ನ ಗಮನಕ್ಕೆ ತರಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ತಾಪಂ ಇಒಗಳಿಗೆ ಸೂಚನೆ ನೀಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನ್ಯಾಮತಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಜಂಟಿ ಕೆಡಿಪಿ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪನೋಂದಣಾಧಿಕಾರಿ ಇದುವರೆಗೆ ಯಾವುದೇ ತಾಪಂ ಸಾಮಾನ್ಯ ಸಭೆ, ಕೆಡಿಪಿ ಸಭೆಗೆ ಬಂದಿಲ್ಲ. ತಕ್ಷಣ ಅವರಿಗೆ ನೋಟಿಸ್ ಜಾರಿ ಮಾಡಬೇಕೆಂದರು. ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅನೇಕ ಗ್ರಾಮಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತವೆ. ಇದರ ಬಗ್ಗೆ ಅ ಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸದಸ್ಯ ಡಿ.ಜಿ. ವಿಶ್ವನಾಥ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಬಾಲ್ಯವಿವಾಹ ನಡೆಯುತ್ತದೆ ಎನ್ನುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಮದುವೆ ನಿಲ್ಲಿಸಬೇಕೆಂದರು.
ಜಿಪಂ ಸದಸ್ಯೆ ದೀಪಾ ಜಗದೀಶ್ ಮಾತನಾಡಿ, ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿವೆ. ಸಿಡಿಪಿಒ ಇಂತಹ ಕಟ್ಟಡಗಳ ಮಾಹಿತಿಯನ್ನು ಶಾಸಕರ ಗಮನಕ್ಕೆ ತರಬೇಕು ಎಂದರು. ಇದಕ್ಕೆ ಉತ್ತರಿಸಿದ ಸಿಡಿಪಿಒ ಮಹಾಂತೇಶ್ ಪೂಜಾರ್, ಕಟ್ಟಡಗಳ ಮಾಹಿತಿಯನ್ನು ಮೇಲಾಧಿ ಕಾರಿಗಳಿಗೆ ನೀಡರುವುದಾಗಿ ತಿಳಿಸಿದರು.
ತಾಪಂ ಸದಸ್ಯ ಸಿದ್ದಲಿಂಗಪ್ಪ ಮಾತನಾಡಿ, ಶಿಕ್ಷಕರಿಲ್ಲದ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡುವ ಕೆಲಸ ತ್ವರಿತವಾಗಿ ಆಗಬೇಕೆಂದರು.ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಲ್ಲಿಕಾರ್ಜುನ ಅವರು ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದೆ ತಾತ್ಸಾರ ಮಾಡುತ್ತಾರೆ ಎಂದು ತಾಪಂ ಮತ್ತು ಜಿಪಂನ ಹಲವಾರು ಸದಸ್ಯರು ದೂರಿದರು. ಸಣ್ಣ ನೀರಾವರಿ ಇಲಾಖೆಯಿಂದ ನಡೆಯುವ ಏತ ನೀರಾವರಿ, ಚೆಕ್ ಡ್ಯಾಂಗಳ ನಿರ್ಮಾಣ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳಿಗೆ 500 ಕೋಟಿ ರೂ. ಅನುದಾನದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ಸಭೆಯ ಗಮನಕ್ಕೆ ತಂದರು.
ಸಭೆಯಲ್ಲ ಜಿಪಂ ಸದಸ್ಯೆ ಉಮಾ ರಮೇಶ್, ಜಿ. ವೀರಶೇಖರಪ್ಪ, ಸುರೇಂದ್ರ ನಾಯ್ಕ, ಹೊನ್ನಾಳಿ ತಾಪಂ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ನ್ಯಾಮತಿ ತಾಪಂ ಉಪಾಧ್ಯಕ್ಷ ಮರಿಕನ್ನಪ್ಪ, ಸದಸ್ಯರಾದ ಪೀರ್ಯಾ ನಾಯ್ಕ, ಅಬೀದಅಲಿ ಖಾನ್, ವಿಜಯಕುಮಾರ್, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ತಹಶೀಲ್ದಾರ್ಗಳಾದ ಬಸನಗೌಡ ಕೋಟುರು, ತನುಜಾ, ತಾಪಂ ಇಒಗಳಾದ ಗಂಗಾಧರಮೂರ್ತಿ ಮತ್ತು ರಾಮಭೋವಿ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.