ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗಿರುವ ಬಿಜೆಪಿ ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡವಾಳ ಸಚ್ಚಿದಾನಂದ ಮೂರ್ತಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಸಚಿವರಾದ ನಾರಾಯಣ ಗೌಡ, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾನ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸಚ್ಚಿದಾನಂದ ಮೂರ್ತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
Related Articles
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು, ಮಂಡ್ಯ ಜಿಲ್ಲೆಯಲ್ಲಿ ನಾವು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದಲ್ಲಿ ನಮ್ಮ ಪಕ್ಷ ಅಕಾರದಲ್ಲಿದ್ದು, ನಮ್ಮ ಸರ್ಕಾರವೇ ಇದೆ ಎಂದು ಹೇಳಿದರು.
ಇಡೀ ಭಾರತದಲ್ಲಿ ಒಳ್ಳೆಯ ಪಕ್ಷ ಅಂದರೆ ಅದು ಬಿಜೆಪಿ. ಅದಕ್ಕಾಗಿ ನಾನು ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದೇನೆ. ಮದ್ದೂರು ಸ್ವಾಮಿ ಸೇರಿದಂತೆ ಹಲವರು ನನ್ನ ಜೊತೆ ಬಿಜೆಪಿಗೆ ಬಂದಿದ್ದಾರೆ ಎಂದು ಹೇಳಿದರು.
ಒಂದೂವರೆ ವರ್ಷದಿಂದ ಸಚ್ಚಿದಾನಂದನಿಗೆ ನಾವು ಗಾಳ ಹಾಕುತ್ತಿದ್ದೀವಿ. ಆದರೆ ಕೊನೆಗೂ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಯೋಗೇಶಣ್ಣ ನೀವು ನಮ್ಮ ಜಿಲ್ಲೆಯವರು ಅಲ್ಲ. ಆದರೆ ನಿಮ್ಮ ನೇತೃತ್ವದಲ್ಲಿ ಹಿಂದೆ ನಾವು ಬಿಜೆಪಿ ಸೇರಿದ್ದೇವೆ ಎಂದರು.
ಮಂಡ್ಯ ಬೇರೆ ಬೇರೆ ಭದ್ರ ಕೋಟೆಯಾಗಿತ್ತು. ಇವತ್ತು ನಮ್ಮ ಜಿಲ್ಲೆಗೆ ದೊಡ್ಡ ಶಕ್ತಿ ಬಂದಂತಾಗಿದೆ. ಮಂಡ್ಯದಲ್ಲಿ ಬಿಜೆಪಿ ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದು ಖುಷಿ ತಂದಿದೆ ಎಂದು ಹೇಳಿದರು.
ಮಂಡ್ಯದಲ್ಲಿ ಮುಂದೆ ಏಳು ಸೀಟುಗಳನ್ನ ಗೆಲ್ಲುತ್ತೇವೆ. ನಾನು ಇಡೀ ಜಿಲ್ಲೆಯಲ್ಲಿ ಸೇವಕನಾಗಿ ಕಲಸ ಮಾಡುತ್ತೇನೆ. ನಾವು ಯಾರು ಕಾಂಗ್ರೆಸ್, ಜೆಡಿಎಸ್ ಗೆ ಭಯಪಡುವ ಅವಶ್ಯಕತೆ ಇಲ್ಲ. ನೀವೆಲ್ಲರೂ ನಮ್ಮ ಜೊತೆ ಬಂದಿದ್ದು ನನಗೆ ಸಂತೋಷವಾಗಿದೆ ಎಂದರು.
ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ತರಲು ಈ ಪ್ರಯತ್ನ ಆಗಿದೆ. ಸಚ್ಚಿದಾನಂದ ಸೇರಿದಂತೆ ಹಲವರ ಸೇರ್ಪಡೆಯಿಂದ ಮಂಡ್ಯ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಹಾಗೂ ಹೊಸ ಸಂಚಲನ ಮೂಡಿಸಿದೆ ಎಂದರು.
ಮಂಡ್ಯದಲ್ಲೀಗ ಪಕ್ಷದಿಂದ ಒಬ್ಬರು ಶಾಸಕರಿದ್ದಾರೆ. ಮುುಂದೆ 7 ಶಾಸಕರು ಬಿಜೆಪಿಯಿಂದ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.