Advertisement

MUDA: ಸಿದ್ದರಾಮಯ್ಯ ಬೆನ್ನಿಗೆ ನಿಂತ ರಾಜ್ಯ ಕಾಂಗ್ರೆಸ್‌ ಪಡೆ, ವರದಿ ಕೇಳಿದ ಹೈಕಮಾಂಡ್‌!

12:54 AM Sep 25, 2024 | Team Udayavani |

ಬೆಂಗಳೂರು: ಹೈಕೋರ್ಟ್‌ ತೀರ್ಪು ಹೊರಬಿದ್ದದ್ದೇ ತಡ. ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದು, ಕಾಂಗ್ರೆಸ್‌ ಶಾಸಕರು, ಸಚಿವರು ಮಾತ್ರ ಸಿಎಂ ಬೆನ್ನಿಗೆ ಇದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಕೇಳುವ ನೈತಿಕತೆಯೂ ಪ್ರತಿಪಕ್ಷಗಳಿ ಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Advertisement

ತೀರ್ಪು ಹೊರಬೀಳುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಸಿಎಂ ನಿವಾಸದತ್ತ ದೌಡಾಯಿಸಿದ ಶಾಸಕ, ಸಚಿವರು ಸಿದ್ದರಾಮಯ್ಯ ಪರವಾಗಿ ತಾವೆಲ್ಲ ಇದ್ದೇವೆ ಎಂಬ ಸಂದೇಶ ನೀಡುವ ಪ್ರಯತ್ನ ಮಾಡಿದರು. ಅದರಲ್ಲೂ ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರಾದ ಎಚ್‌.ಕೆ. ಪಾಟೀಲ್‌, ಶಿವರಾಜ ತಂಗಡಗಿ, ಶಾಸಕರಾದ ಆರ್‌.ವಿ. ದೇಶಪಾಂಡೆ, ಅಶೋಕ್‌ ಪಟ್ಟಣ್‌, ಪ್ರಕಾಶ್‌ ರಾಥೋಡ್‌, ಐವನ್‌ ಡಿ’ಸೋಜಾ ಸೇರಿ ಅನೇಕರು ಸಿಎಂ ಪತ್ರಿಕಾಗೋಷ್ಠಿಯಲ್ಲಿ ಜತೆಗಿರುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವುದಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು.

ಮುಡಾ: ತೀರ್ಪು ಸಹಿತ ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌
ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ “ಬ್ಯುಸಿ’ ಆಗಿರುವುದರ ನಡುವೆಯೂ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ನಾಯಕರಿಂದ ತೀರ್ಪು ಸಹಿತ ವರದಿ ಕೇಳಿದೆ ಎನ್ನಲಾಗಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ ಕಲಂ 17ಎ ಅಡಿ ಹೈಕೋರ್ಟ್‌ ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದೆ. ಆ ಮೂಲಕ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದೆ. ಇದರ ಪ್ರತಿಯನ್ನು ಸಲ್ಲಿಸುವಂತೆ ರಾಜ್ಯ ನಾಯಕರಿಗೆ ಹೈಕಮಾಂಡ್‌ ಸೂಚಿಸಿದೆ. ಅಷ್ಟೇ ಅಲ್ಲ ಈ ಸಂಬಂಧ ವರದಿಯನ್ನೂ ನೀಡುವಂತೆ ಹೇಳಿದೆ. ಇದನ್ನು ಕಾನೂನು ತಜ್ಞರೊಂದಿಗೆ ಪರಿಶೀಲನೆ ನಡೆಸಲು ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಮೇಲ್ಮನವಿ ಸಲ್ಲಿಕೆಗೆ ಸಿಎಂ ನಿರ್ಧರಿಸಿದ್ದಾರೆ. ಈ ಮಧ್ಯೆ ಹೈಕಮಾಂಡ್‌ ಕೂಡ ಉದ್ದೇಶಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಹೋರಾಟಗಳ ಆಯ್ಕೆ ಬಗ್ಗೆ ಪರಾಮರ್ಶೆ ನಡೆಸಲಿದೆ. ಇದಕ್ಕಾಗಿ ತೀರ್ಪಿನ ಪ್ರತಿ ಕೇಳಿದೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next