Advertisement

Congress ಬಲಪಡಿಸುವುದೇ ನನ್ನ ಗುರಿ: ವಿನಯ್ ಕುಲಕರ್ಣಿ

07:51 PM Mar 23, 2024 | Team Udayavani |

ಧಾರವಾಡ : ಕಾಂಗ್ರೆಸ್ ಹೈಕಮಾಂಡ್ ನೀಡುವ ಯಾವುದೇ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪಕ್ಷವನ್ನು ಇನ್ನಷ್ಟು ಗಟ್ಟಿಯಾಗಿ ಬೆಳೆಸುವುದೇ ನನ್ನ ಗುರಿ ಎಂದು ಶಾಸಕ ಹಾಗೂ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಹೇಳಿದರು.

Advertisement

ಉದಯವಾಣಿಯೊಂದಿಗೆ ಮಾತನಾಡಿದ ಅವರು, ನಾನು ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಕಟ್ಟಾಳುವಾಗಿ ಕೆಲಸ ಮಾಡುತ್ತ ಬಂದಿದ್ದೇನೆ. ಕೇವಲ ಪಕ್ಷ ಅಧಿಕಾರದಲ್ಲಿ ಇದ್ದಾಗ ಪಕ್ಷವನ್ನು ಬೆಳೆಸುವುದು ಅಷ್ಟೇಯಲ್ಲ, ಪಕ್ಷವನ್ನು ಅಧಿಕಾರಕ್ಕೆ ತರಲು ಕೂಡ ನಾನು ಶಕ್ತಿ ಮೀರಿ ಶ್ರಮಿಸಿದ್ದೇನೆ. ಇದೀಗ ಇನ್ನಷ್ಟು ಹೆಚ್ಚಿನ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನನಗೆ ನೀಡಿದೆ. ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಪಕ್ಷಕ್ಕೆ ಹೆಚ್ಚಿನ ಬಲ ತುಂಬುತ್ತೇನೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಆದರೆ 2023ರ ವಿಧಾನಸಭಾ ಚುನಾವಣೆಗೂ ಮುನ್ನ ನಾನು ಕಿತ್ತೂರು ಕರ್ನಾಟಕ ಭಾಗದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ ಪಕ್ಷದ ಸಂಘಟನೆ ಮಾಡಿದ್ದೇನೆ. ಅದರಲ್ಲೂ ವಿಶೇಷವಾಗಿ ಯುವಕರನ್ನು ಮತ್ತೆ ಕಾಂಗ್ರೆಸ್‌ನತ್ತ ಸೆಳೆಯುವ ಪ್ರಯತ್ನ ಮಾಡಿದ್ದೇ, ಅದರ ಪ್ರತಿಫಲ ನಮಗೆ ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕಿತು ಎಂದರು.

ಲೋಕಸಭೆಯಲ್ಲೂ ಸಾಧನೆ : ಅಭಿವೃದ್ಧಿಯ ಜೊತೆಗೆ ರಾಜ್ಯ ಸರ್ಕಾರ ನೀಡಿದ ಯೋಜನೆಗಳನ್ನು ಜನರಿಗೆ ತಿಳಿಸಿ ಜನರನ್ನು ಕಾಂಗ್ರೆಸ್‌ನತ್ತ ಕರೆತರುವ ಪ್ರಯತ್ನ ಮಾಡುತ್ತೇನೆ. ಇದೀಗ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಪಕ್ಷ ನನಗೆ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದೆ. ಈಗಲೂ ನಾನು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇನೆ ಎಂದು ವಿನಯ್ ವಿಶ್ವಾಸ ವ್ಯಕ್ತ ಪಡಿಸಿದರು.

ಭಿನ್ನಮತ ಶಮನ : ಲೋಕಸಭೆ ಟಿಕೇಟ್ ಹಂಚಿಕೆ ವೇಳೆ ಒಂದಿಷ್ಟು ಗೊಂದಲಗಳು ಸಹಜ. ಆದರೆ ಅವೆಲ್ಲವನ್ನು ಪಕ್ಷದ ರಾಜ್ಯ ಮುಖಂಡರು ಮತ್ತು ಹೈಕಮಾಂಡ್ ಸರಿಪಡಿಸುತ್ತದೆ. ಕೆಲವೇ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತೆಯೇ, ಲೋಕಸಭೆ ಚುನಾವಣೆಯಲ್ಲೂ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ತೋರಿಸುತ್ತೇವೆ ಎಂದು ವಿನಯ್ ಹೇಳಿದರು.

Advertisement

ಸಂಘಟನಾತ್ಮಕವಾಗಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಿದ್ದು, ನಮ್ಮ ಮೇಲೆ ಪಕ್ಷ ಇಟ್ಟಿರುವ ವಿಶ್ವಾಸ ಉಳಿಸಿಕೊಂಡು, ಪ್ರತಿಯೊಬ್ಬರನ್ನು ಜೊತೆಯಲ್ಲೆ ಕರೆದುಕೊಂಡು ಮುನ್ನಡೆಯುತ್ತೇನೆ. ಕಾರ್ಯಾಧ್ಯಕ್ಷ ಸ್ಥಾನ ನೀಡಿದ ಎಲ್ಲ ಮುಖಂಡರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ.
-ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next