Advertisement

ಮೈಸೂರು-ಕೊಡಗು ಲೋಕಸಭೆ: ನೀತಿ ಸಂಹಿತೆ ಜಾರಿ

07:45 AM Mar 12, 2019 | Team Udayavani |

ಮೈಸೂರು: ಹದಿನೇಳನೇ ಲೋಕಸಭೆಗೆ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿರುವುದರಿಂದ ಜಿಲ್ಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾ.19ರಂದು ಅಧಿಸೂಚನೆ ಹೊರಡಿಸಲಾಗುವುದು.

Advertisement

ಮಾ.26 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮಾ.27ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು, ಮಾ.29 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಏ.18ರಂದು ಮತದಾನ ನಡೆಯಲಿದೆ. ಮೇ 23ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 

ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4,35,554 ಮತದಾರರು, ಮೈಸೂರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 14,23,457 ಮತದಾರರು ಸೇರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ 18,59,011 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ, ಎಚ್‌.ಡಿ.ಕೋಟೆ, ನಂಜನಗೂಡು, ವರುಣಾ ಹಾಗೂ ತಿ.ನರಸೀಪುರ ವಿಧಾನಸಭಾ ಕ್ಷೇತ್ರಗಳು ಚಾಮರಾಜ ನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. 

ಮತಗಟ್ಟೆಗಳ ವಿವರ: ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಈ ಹಿಂದೆ 225 ಮತಗಳಿದ್ದು, ಹೊಸದಾಗಿ 10 ಮತಗಟ್ಟೆ ರಚಿಸಲಾಗಿದ್ದು, ಒಟ್ಟು 235 ಮತಗಟ್ಟೆಗಳಿದೆ. ಹುಣಸೂರು ಕ್ಷೇತ್ರದಲ್ಲಿ ಈ ಹಿಂದೆ 263 ಮತಗಟ್ಟೆಗಳಿದ್ದು, ಹೊಸದಾಗಿ 11 ಮತಗಟ್ಟೆಗಳನ್ನು ರಚಿಸಲಾಗಿದ್ದು, ಒಟ್ಟು 274 ಮತಗಟ್ಟೆಗಳಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಹಿಂದೆ 310 ಮತಗಟ್ಟೆಗಳಿದ್ದು, ಹೊಸದಾಗಿ 28 ಮತಗಟ್ಟೆ ಸ್ಥಾಪಿಸಲಾಗಿದ್ದು, ಒಟ್ಟು 338 ಮತಗಟ್ಟೆಗಳಿದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 223 ಮತಗಟ್ಟೆಗಳಿದ್ದು, ಹೊಸದಾಗಿ 47 ಮತಗಟ್ಟೆಗಳನ್ನು ರಚಿಸಿದ್ದು, ಒಟ್ಟು 270 ಮತಗಟ್ಟೆಗಳಾಗಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 213 ಮತಗಟ್ಟೆಗಳಿದ್ದು, ಹೊಸದಾಗಿ 32 ಮತಗಟ್ಟೆ ರಚಿಸಿದ್ದು, ಒಟ್ಟು 245 ಮತಗಟ್ಟೆಗಳಿದೆ. ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ 220 ಮತಗಟ್ಟೆಗಳಿದ್ದು, ಹೊಸದಾಗಿ 62 ಮತಗಟ್ಟೆ ರಚಿಸಲಾಗಿದ್ದು, ಒಟ್ಟು 282 ಮತಗಟ್ಟೆಗಳಾಗಿದೆ. 

Advertisement

ಅಧಿಕಾರಿಗಳ ನೇಮಕ: ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಅಗತ್ಯ ಮತಗಟ್ಟೆ ಅಧಿಕಾರಿಗಳನ್ನು ಹಾಗೂ ಮೀಸಲು ಸಿಬ್ಬಂದಿ ನೇಮಕ ಮಾಡಲು, ಕೇಂದ್ರ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್‌ ಆಗಿ ನೇಮಕ ಮಾಡಲು ಕ್ರಮವಹಿಸಲಾಗಿದೆ. 

ತಂಡಗಳ ರಚನೆ: ಮಾದರಿ ನೀತಿ ಸಂಹಿತೆ ಹಾಗೂ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್‌ ಅಧಿಕಾರಿ, ಪ್ಲೆ„ಯಿಂಗ್‌ ಸ್ಕ್ವಾಡ್‌, ಸ್ಟಾಟಿಕ್‌ ಸರ್ವೆಲೆನ್ಸ್‌ ಟೀಮ್‌, ವೀಡಿಯೋ ವೀವಿಂಗ್‌ ಟೀಮ್‌, ಸಹಾಯಕ ಚುನಾವಣಾ ಅಬ್ಸರ್ವರ್‌ಗಳ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. 

ಜಿಪಂ ಸಿಇಒ ಕೆ.ಜ್ಯೋತಿ, ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ ಸಿಂಗ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಮಾಹಿತಿಗೆ ಹೆಲ್ಪ್ಲೈನ್‌ಗೆ ಕರೆ ಮಾಡಿ: ಚುನಾವಣಾ ಆಯೋಗದ ಸೂಚನೆಯಂತೆ ಮೈಸೂರು ಜಿಲ್ಲೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಸೌಲಭ್ಯ ಕೇಂದ್ರ 1950 ಸಹಾಯವಾಣಿ ಪ್ರಾರಂಭವಾಗಿದ್ದು, ಈ ಕೇಂದ್ರವು ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ.

ಸಾರ್ವಜನಿಕರು ಈ ಉಚಿತ ದೂರವಾಣಿಗೆ ಕರೆ ಮಾಡಿ ಮತದರರ ಪಟ್ಟಿಗೆ ಸಂಬಂಧಿಸಿದಂತೆ ಅವಶ್ಯಕ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ಸಂಪರ್ಕ, ರ್‍ಯಾಂಪ್‌ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next