Advertisement

Dussehra: ಅರಮನೆಯಲ್ಲಿ ಶಾಸ್ತ್ರೋಕ್ತ ಸಿಂಹಾಸನ ಜೋಡಣೆ

11:55 AM Oct 10, 2023 | Team Udayavani |

ಮೈಸೂರು: ನಾಡಹಬ್ಬ ದಸರಾ ಪ್ರಮುಖ ಆಕರ್ಷಣೆಗಳಲ್ಲಿ ಖಾಸಗಿ ದರ್ಬಾರ್‌ ಒಂದಾಗಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರಾಜಮಾನರಾಗಿ ಖಾಸಗಿ ದರ್ಬಾರ್‌ ನಡೆಸುವ ಸಿಂಹಾಸನವನ್ನು ಸೋಮವಾರ ಅಂಬಾವಿಲಾಸ ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ಜೋಡಣೆ ಮಾಡಿ ಪೂಜೆ ಸಲ್ಲಿಸಲಾಯಿತು.

Advertisement

ದರ್ಬಾರು: ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗ ಹೊರತಂದು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ವಾಡಿಕೆ. ಖಾಸಗಿ ದರ್ಬಾರ್‌ ರಾಜಮನೆತನದ ಪ್ರಮುಖ ಧಾರ್ಮಿಕ ಕಾರ್ಯವಾಗಿದ್ದು, ದರ್ಬಾರ್‌ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರಾಜಮಾನರಾಗಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ. ಅ15ರಿಂದ ಅ.24ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್‌ ನಡೆಯಲಿದೆ. ಈ ಹಿನ್ನೆಲೆ ದಸರಾ ಆರಂಭಕ್ಕೆ ಕೇವಲ 6 ದಿನಗಳಷ್ಟೇ ಬಾಕಿ ಇರುವುದರಿಂದ ಶಾಸ್ತ್ರೋಕ್ತವಾಗಿ ವಿಧಿ ವಿಧಾನದಂತೆ ಸಿಂಹಾಸನ ಜೋಡಿಸಿ ದರ್ಬಾರ್‌ಗೆ ಸಿದ್ಧತೆ ಮಾಡಲಾಯಿತು.

ಧಾರ್ಮಿಕ ವಿಧಿ ವಿಧಾನ: ಇದುವರೆಗೆ ಅರಮನೆ ಸುಪರ್ಧಿಯಲ್ಲಿದ್ದ ಸಿಂಹಾಸನವನ್ನು ಪ್ರಮೋದಾದೇವಿ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದರು. ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್‌ ರೂಂನಿಂದ ಹೊರತೆಗೆದು ಅರಮನೆ ಪಂಚಾಂಗದಂತೆ ಬೆಳಗ್ಗೆ 10.05ರಿಂದ 10.35ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಮಾಡಲಾಯಿತು. ಇದಕ್ಕಾಗಿ ಬೆಳಗ್ಗೆ 7ರಿಂದಲೇ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಅರಮನೆ ಪುರೋಹಿತರ ನೇತೃತ್ವದಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಶ್ರೀ ಚಾಮುಂಡಿ ಪೂಜೆ ನೆರವೇರಿಸಿ, ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಅಂತಿಮವಾಗಿ ಶಾಂತಿ ಪೂಜೆ ಮಾಡಲಾಯಿತು. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹಾಗೂ ಜಿಲ್ಲಾಡ ಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ನಡೆಯಿತು.

ನಂತರ ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿಸಲಾಯಿತು. ಜೋಡಣಾ ಕಾರ್ಯ: ಅರಮನೆ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್‌ ರೂಮ್‌ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗ ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್‌ ಹಾಲ್‌ಗೆ ತರಲಾಯಿತು. ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಈ ಸಿಂಹಾಸನ ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಬೆಳಗ್ಗೆ ಶಾಂತಿ ಹೋಮದೊಂದಿಗೆ ಪೂಜಾ ಕಾರ್ಯಕ್ರಮ ಆರಂಭ ಮಾಡಿ ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣೆ ಸಂಪನ್ನಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಪಾದಪೂಜೆ ನೆರವೇರಿಸಿದರು.

ಹಲವು ಗಣ್ಯರು ಭಾಗಿ: ಅರಮನೆಯಲ್ಲಿ ನೆರವೇರುತ್ತಿದ್ದ ಸಿಂಹಾಸನಾ ಜೋಡಣೆ ಯಿಂದಾಗಿ ಸಾರ್ವಜನಿಕರಿಗೆ ಅರಮನೆಗೆ ಪ್ರವೇಶ ನಿಷೇಧಿಸಲಾಗಿತ್ತು. ಸಿಂಹಾಸನದ ಜೋಡಣೆ ವೇಳೆ ಪ್ರಮೋದಾ ದೇವಿ ಒಡೆಯರ್‌, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌. ಸುಬ್ರಹ್ಮಣ್ಯ, ಇನ್ನಿತರೆ ಅಧಿಕಾರಿಗಳು ಇದ್ದರು.

Advertisement

ಅರಮನೆ ಸಿಂಹಾಸನದ ಬಿಡಿ ಭಾಗಗಳು: ಸಿಂಹಾಸನವನ್ನು 8, ಬೆಳ್ಳಿಯ ಭದ್ರಾಸನವನ್ನು 6 ಬಿಡಿಭಾಗಗಳಾಗಿ ವಿಂಗಡಿಸಲಾಗಿರುತ್ತದೆ. ಸಿಂಹಾಸನದ ಬಿಡಿಭಾಗ, ಭದ್ರಾಸನ ಜೋಡಿಸಿದ ಬಳಿಕ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜತೆ ನಗಗಳು, 1 ಜತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸಲಾಯಿತು. ಇದರ ಬಿಡಿ ಭಾಗ ಜೋಡಿಸಿ ಅದಕ್ಕೆ ಸಿಂಹದ ಮುಖ ಅಳವಡಿಸಿದಾಗ ಸಿಂಹಾಸನ ಜೋಡಣೆ ಪೂರ್ಣಗೊಳ್ಳುತ್ತದೆ. ಸಿಂಹವನ್ನು ಅ.15ರಂದು ಜೋಡಿಸಿ ಪೂರ್ಣಗೊಂಡ ಸಿಂಹಾಸನವನ್ನು ದರ್ಬಾರ್‌ ಸಭಾಂಗಣದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. 15ರಿಂದ ಅ.24ರವರೆಗೆ ಯದುವೀರ್‌ ಸಿಂಹಾಸನವೇರಿ ದರ್ಬಾರ್‌ ನಡೆಸಲಿದ್ದಾರೆ.

ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ: ನವರಾತ್ರಿ ಮೊದಲ ದಿನವಾದ ಅ.15ರಂದು ಚಿನ್ನದ ಸಿಂಹಾಸನಕ್ಕೆ ಸಿಂಹ ಜೋಡಣೆ ಕಾರ್ಯ ನಡೆದ ನಂತರ ಖಾಸಗಿ ದರ್ಬಾರ್‌ ನಡೆಯುತ್ತದೆ. ಅಂದು ಮಧ್ಯಾಹ್ನದವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.23ರ ಮಧ್ಯಾಹ್ನದವರೆಗೆ ಹಾಗೂ ವಿಜಯದಶಮಿ ದಿನವಾದ ಅ.24ರ ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next