ಬೆಂಗಳೂರು: ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೂಲಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ ಎಂದು ತಿಳಿಸಿದ್ದಾರೆ.
ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಕೋವಿಡ್ ನಂತರವೂ ಭಾರತ ತನ್ನ ಆರ್ಥಿಕತೆಯ ವೇಗದಿಂದಾಗಿ ಜಗತ್ತಿನ ಗಮನ ಸೆಳೆದಿದೆ. ರೈಲ್ವೆ ಇಲಾಖೆಯಲ್ಲಿ ಹೆಚ್ಚಿನ ಹಣ ಹೂಡಿಕೆ, ಯುವ ಉದ್ಯಮಿಗಳು, ಕೃಷಿ ಸ್ಟಾರ್ಟಪ್ಗಳಿಗೆ ಉತ್ತೇಜನ, ಪ್ರವಾಸೋದ್ಯಮಕ್ಕೆ ಒತ್ತು ಕೊಟ್ಟಿದ್ದು, ಒಂದು ಜಿಲ್ಲೆ- ಒಂದು ಉತ್ಪನ್ನಕ್ಕೆ ಪ್ರೋತ್ಸಾಹ ಕೊಟ್ಟ ಆಯವ್ಯಯ ಪತ್ರ ಇದಾಗಿದೆ ಎಂದು ತಿಳಿಸಿದ್ದಾರೆ.
Related Articles
ಮಧ್ಯಮ ವರ್ಗದವರಿಗೆ ನೀಡಿರುವ ತೆರಿಗೆ ವಿನಾಯಿತಿ ಬಗ್ಗೆ ಅವರು ಸಂತಸ ಸೂಚಿಸಿದ್ದಾರೆ. ದೇಶವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾಲಘಟ್ಟದಲ್ಲಿದೆ. ದೇಶವನ್ನು ಸ್ವಾತಂತ್ರ್ಯೋತ್ಸವದ ಶತಮಾನೋತ್ಸವದತ್ತ ಸದೃಢವಾಗಿ ಒಯ್ಯುವ ನಿಟ್ಟಿನಲ್ಲಿ ಇದೊಂದು ನೀಲನಕ್ಷೆಯಂತಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.