ವಿಜಯಪುರ: ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯ, ಸ್ವಾಸ್ಥ್ಯ ಸಮಾಜದ ಪ್ರತಿಬಿಂಬವಾಗಿದ್ದು, ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಹಿರಿಯ ಸಿವಿಲ್ ನ್ಯಾಯಾ ಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ಹೇಳಿದರು.
ಗುರುವಾರ ಜಿಲ್ಲಾ ಬಾಲಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಪೋಷಣ ಅಭಿಯಾನ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಮೇಲ್ವಿಚಾರಕಿಯರು, ಆಯ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ಪೋಷಣ ಮಾಸಾಚರಣೆ ಕುರಿತ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಮಹಿಳೆಯರಲ್ಲಿ ರಕ್ತ ಹೀನತೆ, ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಬೇಕಾದ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಸಾಂಕ್ರಾಮಿಕ ರೋಗವಾಗಿರುವ, ಕೋವಿಡ್ನಿಂದ ರಕ್ಷಣೆ ಹೊಂದಲು, ಎಲ್ಲರೂ ಪೌಷ್ಟಿಕ ಆಹಾರ ಸೇವಿಸಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಕೋವಿಡ್ ವಿರುದ್ಧ ಹೋರಾಟದಲ್ಲಿ ಜಯಶೀಲರಾಗಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಆಸ್ತಿ ಪಾಲುದಾರಿಕೆಯಲ್ಲಿ ಹೆಣ್ಣಿಗೆ ಸಮಾನ ಹಕ್ಕಿದ್ದು, ಈ ಕುರಿತು ಗ್ರಾಮೀಣ ಮಹಿಳೆಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಕುಟುಂಬದಲ್ಲಿನ ಜನನ-ಮರಣ ಸಂದರ್ಭದಲ್ಲಿಅಗತ್ಯವಾಗಿ ಜನನ-ಮರಣ ಪತ್ರ ಪಡೆಯಬೇಕು. ಇದ ರಿಂದ ಕಾನೂನಾತ್ಮಕವಾಗಿ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಪಡೆಯಲು ಸುಲಭವಾಗಲಿದೆ ಎಂದರು. ವಿಜಯಪುರ ಗ್ರಾಮೀಣ ಭಾಗದ ಶಿಶು ಅಭಿವೃದ್ಧಿ ಅಧಿಕಾರಿ ಗೀತಾ ಗುತ್ತರಗಿಮಠ ಮಾತನಾಡಿ, ಈ ಸಾಲಿನ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಮೂಲ ಧ್ಯೇಯ ಪೌಷ್ಟಿಕ ಸಸ್ಯವನ ನಿರ್ಮಾಣ ಮಾಡುವುದಾಗಿದೆ. ಸಾಧ್ಯವಿರುವ ಅಂಗನವಾಡಿ, ಸರ್ಕಾರಿ ಶಾಲೆ, ಗ್ರಾಪಂ ಆವರಣಗಳಲ್ಲಿ ಪೌಷ್ಟಿಕ ಸಸ್ಯವನ ನಿರ್ಮಾಣವಾಗಬೇಕು. ಈ ಕುರಿತು ವ್ಯಾಪಕ ಜಾಗೃತಿ ಮೂಡಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಕೆ.ಕೆ. ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಸಿ.ಕೆ. ಸುರೇಶ, ಅನೀಲ ಉಕ್ಕಲಿ ಇದ್ದರು.