ರಾಷ್ಟ್ರೀಯ ಪೊಲೀಸ್ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಆರಂಭಿಸುವ ಪ್ರಸ್ತಾಪವನ್ನು ಸಚಿವೆ ನಿರ್ಮಲಾ ಘೋಷಿಸಿದ್ದಾರೆ. ಪೊಲೀಸ್ ವಿಜ್ಞಾನ, ವಿಧಿವಿಜ್ಞಾನ, ಸೈಬರ್ ವಿಧಿವಿಜ್ಞಾನ ಮೊದಲಾದ ಕೋರ್ಸ್ ಗಳ ಉನ್ನತ ಅಧ್ಯಯನ ಹಾಗೂ ಹೊಸ ಸಂಶೋಧನೆಗಳಿಗೆ ಅನುಕೂಲವಾಗುವಂತೆ ರಾಷ್ಟ್ರೀಯ ಪೊಲೀಸ್ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಆರಂಭಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
2030ಕ್ಕೆ ವಿಶ್ವದ ಅತಿ ಹೆಚ್ಚು ವರ್ಕಿಂಗ್ ಏಜ್(ಉದ್ಯೋಗರ್ಹ) ಜನಸಂಖ್ಯೆ ಇರಲಿದೆ. ಇವರೆಲ್ಲರಿಗೂ ಶಿಕ್ಷಣ ನೀಡುವುದು ಮಾತ್ರವಲ್ಲ, ಶಿಕ್ಷಣ ಜತೆಗೆ ಜೀವನಕಶೌಲ್ಯವನ್ನು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಬಜೆಟ್ನಲ್ಲಿ ಏರಿಕೆ: ಕೇಂದ್ರ ಸರ್ಕಾದ ವಾರ್ಷಿಕ ಆಯವ್ಯಯದಲ್ಲಿ ಶಿಕ್ಷಣಕ್ಕೆ ಮೀಸಲಿಟ್ಟಿರುವ ಅನುದಾನದಲ್ಲಿ ಗಣನೀಯ ಏರಿಕೆಯಾಗಿದೆ. 2018-19ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 94,853 ಕೋಟಿ ರೂ. ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಅದು 99,300 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.
2018ರಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಶಿಕ್ಷಣ ಕ್ಷೇತ್ರಕ್ಕೆ ಘೋಷಿರುವ ಅನುದಾನಕ್ಕಿಂತ ಶೇ.13ರಷ್ಟು ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಜೇಟ್ಲಿಯವರು 2018ರಲ್ಲಿ 83,626 ಕೋಟಿ ರೂ. ಮೀಸಲಿಟ್ಟಿದ್ದರು. ಪ್ರಸಕ್ತ ಸಾಲಿನ ಬಜೆಟ್ನಲ್ಲಿ 99,300 ಕೋಟಿ ರೂ.ಗಳನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡುವ ಜತೆಗೆ 3 ಸಾವಿರ ಕೋಟಿ ರೂ.ಗಳನ್ನು ಕೌಶಲ್ಯಾಭಿವೃದ್ಧಿಗೆ ಮೀಸಲಿಟ್ಟಿದೆ.
ಶಿಕ್ಷಣದಲ್ಲಿ ನೇರ ವಿದೇಶಿ ಬಂಡವಾಳಕ್ಕೆ ಉತ್ತೇಜನ: ಶಿಕ್ಷಣ ಕ್ಷೇತ್ರದಲ್ಲಿ ನೇರ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವ ಮೂಲಕ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಹಾಗೂ ಹಣಕಾಸಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ನೇರ ವಿದೇಶಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತದೆ ಎಂದು ನಿರ್ಮಲಾ ತಿಳಿಸಿದ್ದಾರೆ.
ನಮ್ಮ ಶಿಕ್ಷಣ ವ್ಯವಸ್ಥೆಯು ಆರ್ಥಿಕವಾಗಿ ಇನ್ನಷ್ಟು ಸುಧಾರಣೆಯಾಗಬೇಕಿದೆ. ಪ್ರತಿಭಾವಂತ ಶಿಕ್ಷಕರನ್ನು ಆಕರ್ಷಿಸುವ ಜತೆಗೆ ಅನ್ವೇಷಣೆ ಮತ್ತು ಉತ್ಕೃಷ್ಟ ಗುಣಮಟ್ಟದ ಲ್ಯಾಬ್ ಸೌಲಭ್ಯ ಒದಗಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಅನುದಾನಕ್ಕಾಗಿ ಬಾಹ್ಯ ವಾಣಿಜ್ಯ ಸಾಲ ಮತ್ತು ನೇರ ವಿದೇಶಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುತ್ತಿದ್ದೇವೆ. ಇದರಿಂದ ಉನ್ನತ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.