Advertisement

ಸುದ್ದಿಗಳು ಪರಾಮರ್ಶಿತ, ಪತ್ರಿಕೆಗಳೂ ಸುರಕ್ಷಿತ

12:57 PM Mar 27, 2020 | sudhir |

ಪ್ರಿಯ ಓದುಗರಲ್ಲಿ ಅರಿಕೆ…
ದಿನಪತ್ರಿಕೆಗಳು, ನಿಯತಕಾಲಿಕ ಗಳು ನಾಗರಿಕ ಜಗತ್ತಿನ ಅವಿಭಾಜ್ಯ ಅಂಗ. ಹೊಣೆಗಾರಿಕೆಯ ಪ್ರತೀಕ. ಸೇವೆಯ ದ್ಯೋತಕ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಇವತ್ತಿನ ಕೊರೊನಾ ಆಪತ್ತಿನ ತನಕ ಜನರಿಗೆ ಅಗತ್ಯ-ಅಧಿಕೃತ ಸುದ್ದಿ ಮುಟ್ಟಿಸುವಲ್ಲಿ ದಿನಪತ್ರಿಕೆ ಗಳು ಮಹತ್ವದ ಪಾತ್ರ ವಹಿಸಿವೆ. ಅರುವತ್ತರ ದಶಕದಲ್ಲಿ ಹರಡಿದ ಪ್ಲೇಗ್‌ ಮಹಾಮಾರಿ, ಮಾರಣಾಂತಿಕ ಎಬೋಲಾ ಇತ್ಯಾದಿ ಕಾಯಿಲೆಗಳಿಂದ ಹಿಡಿದು ಈ ವರೆಗೆ ಹತ್ತುಹಲವು ಸವಾಲು, ಸಂಕಷ್ಟಗಳನ್ನು ಎದುರಿಸಿ ಗೆದ್ದಿವೆ. ಈಗಲೂ ನಾವು ಅಂಥದ್ದೇ ಗಟ್ಟಿ ಸಂಕಲ್ಪ ಮಾಡಿ ಅಂತಿಮ ಗೆಲುವಿನ ಕಡೆ ದಾಪುಗಾಲಿಡುವ ತೀರ್ಮಾನ ಮಾಡಬೇಕಿದೆ.

Advertisement

ನಾಳಿನ ಒಳಿತಿಗಾಗಿ ಇಡೀ ದೇಶವೇ ರವಿವಾರ ಜನತಾ ಕರ್ಫ್ಯೂಗೆ ಓಗೊಟ್ಟಿದೆ. ಇನ್ನೂ ಹತ್ತು ದಿನಗಳ ಕಾಲ ಕಠಿನ ನಿರ್ಬಂಧ ಮುಂದುವರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ನಮ್ಮ ಜೀವರಕ್ಷಣೆ ಮತ್ತು ದೇಶದ ಹಿತರಕ್ಷಣೆಗಾಗಿ ಇದೊಂದು ತುರ್ತು ಸಂದರ್ಭವೆಂದು ಭಾವಿಸಿ ನಾವೆಲ್ಲ ಸರಕಾರದ ಆದೇಶ ಪಾಲಿಸಲೇಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವೈದ್ಯರು, ಮಿಲಿಟರಿ, ಪೊಲೀಸ್‌ ಸಮೂಹದ ಜತೆ ಮಾಧ್ಯಮದವರನ್ನೂ “ಅಗತ್ಯ ಸೇವಕ’ರೆಂದು ಘೋಷಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಈ ವ್ಯಾಖ್ಯಾನಕ್ಕೆ ಸಹಮತ ವ್ಯಕ್ತಪಡಿಸಿ ಮಾಧ್ಯಮವನ್ನು ಅಗತ್ಯ ಸೇವೆಗಳ ಪಟ್ಟಿಗೆ ಸೇರಿಸಿದ್ದಾರೆ.

ಯುದ್ಧ, ಅತಿವೃಷ್ಟಿ, ಅನಾವೃಷ್ಟಿ ಯಂಥ ವಿಷಮ ಸಂದರ್ಭಗಳಲ್ಲೂ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುವುದು ಮಾಧ್ಯಮದ ಜಾಯಮಾನ ಮತ್ತು ಕರ್ತವ್ಯ. ಆದರೆ ಕೊರೊನಾದಂತಹ ಮಾರಣಾಂತಿಕ ಕಾಯಿಲೆ ಸಂದರ್ಭದಲ್ಲಿ ಕೇವಲ ಕೆಚ್ಚು ಇದ್ದರೆ ಸಾಲದು, ಮುನ್ನೆಚ್ಚರಿಕೆಯೂ ಬೇಕೆಂಬ ಅರಿವು ನಮಗಿದೆ. ಈಗಾಗಲೇ ನಮ್ಮ ಪತ್ರಿಕಾಲಯಗಳು, ಪ್ರಿಂಟಿಂಗ್‌ ಪ್ರಸ್‌ಗಳು ಅತ್ಯಾಧುನಿಕ, ಹೈಟೆಕ್‌ ತಂತ್ರಜ್ಞಾನವನ್ನು ಬಳಕೆಗೆ ತಂದಿವೆ.

ಮನುಷ್ಯನ ಕೈ ಸ್ಪರ್ಶವೇ ಇಲ್ಲದೆ ಪತ್ರಿಕೆಗಳು ಮುದ್ರಣಗೊಂಡು ಕೊನೆಯ ವಿತರಣ ಕೇಂದ್ರದವರೆಗೆ ತಲುಪಿಸುವ ವ್ಯವಸ್ಥೆ ಜಾರಿಯಾಗುತ್ತಿದೆ. ಕೊನೆಯ ವಿತರಣ ಕೇಂದ್ರದಿಂದ ವಿತರಕರು ಬರಿಗೈಯಲ್ಲಿ ಪತ್ರಿಕೆಯನ್ನು ಮುಟ್ಟದೆ ವಿತರಣೆ ಮಾಡುವ ವ್ಯವಸ್ಥೆಯನ್ನು ರೂಪಿಸುತ್ತಿದ್ದೇವೆ. ಆಸ್ಪತ್ರೆಯಲ್ಲಿ ವೈದ್ಯರು ಎಷ್ಟು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬಹುದೋ ಪತ್ರಿಕಾ ಸಂಸ್ಥೆಗಳೂ ಪತ್ರಿಕೆಗಳ ವಿತರಣೆಗೆ ಅಷ್ಟೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿವೆ. ವಿಶ್ವ ಆರೋಗ್ಯ ಸಂಸ್ಥೆಯೇ ಪತ್ರಿಕೆಗಳಿಂದ ಕೊರೊನಾ ಹರಡುವ ಸಾಧ್ಯತೆಗಳು ಇಲ್ಲ ಎಂದು ಸ್ಪಷ್ಟಪಡಿಸಿದೆ.

ಪತ್ರಿಕೆಗಳಿಂದ ಯಾವುದೇ ವೈರಸ್‌ ಹರಡಿದ ಒಂದೇ ಒಂದು ಉದಾಹರಣೆ ಇಲ್ಲ. ಇದೇ ಮೊದಲ ಬಾರಿ ಪತ್ರಿಕೆಗಳು ಇಂಥ ಸುಳ್ಳು ವದಂತಿಯ ಅಪಾಯವನ್ನು ಎದುರಿಸುತ್ತಿವೆ. ಖಚಿತ ಮಾಹಿತಿಯನ್ನು ಕೊರೊನಾದಂತಹ ತುರ್ತು ಸಂದರ್ಭಗಳಲ್ಲಿ ಪಡೆಯುವ ವಿಶ್ವಾಸಾರ್ಹ ಮಾಧ್ಯಮವೆಂದರೆ ಅವು ಪತ್ರಿಕೆಗಳು ಎನ್ನುವುದನ್ನು ನಾವು ಮರೆಯಬಾರದು.

Advertisement

ಅನಗತ್ಯ ಭಯ ಬಿತ್ತಿ, ಸುಳ್ಳು ಸುದ್ದಿಗಳನ್ನು ಹರಡಿ ಸೋಶಿಯಲ್‌ ಮೀಡಿಯಾಗಳು, ವಾಟ್ಸ್‌ಆ್ಯಪ್‌ ಸಂದೇಶಗಳು ಜನರ ಜೀವನವನ್ನು ದುರ್ಭರಗೊಳಿಸುತ್ತಿರುವ ಇವತ್ತಿನ ಸಂದರ್ಭಗಳಲ್ಲಿ ಖಚಿತ, ವಿಶ್ವಾಸಾರ್ಹ, ಪರಾಮರ್ಶೆ ಮಾಡಿದ ಸುದ್ದಿಗಳನ್ನು ಪಡೆಯುವ ಸುರಕ್ಷಿತ ಮಾರ್ಗ ಪತ್ರಿಕೆಗಳನ್ನು ಬಿಟ್ಟರೆ ಬೇರೆ ಯಾವುದಿದೆ? ಹೀಗಾಗಿ ಪತ್ರಕರ್ತರು,
ಮುದ್ರಣ ತಂತ್ರಜ್ಞರು, ನಿಮ್ಮ ಮನೆ ಬಾಗಿಲಿಗೆ ಮಳೆ, ಗಾಳಿ, ಚಳಿಗೆ ಜಗ್ಗದೆ ಪತ್ರಿಕೆ ಹೊತ್ತು ತರುವ ವಿತರಕ ಸೇನಾನಿಗಳು “ಅಗತ್ಯ ಸೇವೆ’ಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ.

ಪ್ರಿಯ ಓದುಗ ದೊರೆಗಳೇ, ನಾವು ಗರಿಷ್ಠ ಹೊಣೆಗಾರಿಕೆಯಿಂದ ಕೆಲಸ ನಿರ್ವಹಿಸುವ ಸಂಕಲ್ಪ ಮಾಡಿದ್ದೇವೆ. ವದಂತಿಗಳಿಗೆ ಕಿವಿಗೊಡಬೇಡಿ. ನಾವು, ನೀವು ಸೇರಿ ಯುದ್ಧ ಮತ್ತು ಶಾಂತಿಯ ಕಾಲಗಳೆರಡರಲ್ಲೂ ಮನುಕುಲದ ಹಿತ ಕಾಯುವ ಕೆಲಸ ಮಾಡೋಣ. ಕೊರೊನಾ ಮಣಿಸೋಣ, ದೇಶವನ್ನು ಗೆಲ್ಲಿಸೋಣ…
ಸುದ್ದಿ ಮಾಧ್ಯಮ ಒಂದು ಹೊಣೆಗಾರಿಕೆ, ಮುದ್ರಣ ಒಂದು ಪ್ರಮಾಣ…

– ಸಂಪಾದಕರು
ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ, ಪ್ರಜಾವಾಣಿ, ಕನ್ನಡಪ್ರಭ, ಸಂಯುಕ್ತ ಕರ್ನಾಟಕ, ವಿಶ್ವವಾಣಿ, ಹೊಸದಿಗಂತ

Advertisement

Udayavani is now on Telegram. Click here to join our channel and stay updated with the latest news.

Next