Advertisement

ಸರ್ಕಾರಕ್ಕೆ ಎನ್‌ಜಿಟಿ ಡೆಡ್‌ಲೈನ್‌

12:11 PM Aug 23, 2017 | Team Udayavani |

ಬೆಂಗಳೂರು: ರಾಜಧಾನಿಯ ಬೆಳ್ಳಂದೂರು ಕೆರೆಯ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸರ್ಕಾರ ಸಲ್ಲಿಸಿರುವ ವರದಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಹಸಿರು ನ್ಯಾಯಪೀಠ,  ಕೆರೆಯ ಮಾಲಿನ್ಯ ತಡೆಗೆ ತೆಗೆದುಕೊಂಡಿರುವ ಕ್ರಮ ಹಾಗೂ ಯೋಜನೆಗಳ ವಿವರವಾದ ವರದಿಯನ್ನು 10 ದಿನದೊಳಗೆ ಸಲ್ಲಿಸುವಂತೆ ಮಂಗಳವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Advertisement

ಬೆಳ್ಳಂದೂರು ಕೆರೆ ಮಾಲಿನ್ಯ, ನೊರೆ ಸಮಸ್ಯೆ, ಬೆಂಕಿ ಕಾಣಿಸಿಕೊಂಡಿರುವ ಪ್ರಕರಣದ ಕುರಿತು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವತಂತ್ರ ಕುಮಾರ್‌ ನೇತೃತ್ವದ ಹಸಿರು ನ್ಯಾಯಪೀಠವು ಕೆರೆ ನಿರ್ವಹಣೆಗಾಗಿ ಕೊಳಚೆ ನೀರು ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ತ್ಯಾಜ್ಯ ನಿರ್ವಹಣೆಗೆ ಕೈಗೊಂಡ ಪರಿಣಾಮಕಾರಿ ಕ್ರಮಗಳ ಬಗ್ಗೆಯೂ ವಿಸ್ತ್ರತ ವಿವರ ನೀಡುವಂತೆ ಸೂಚನೆ ನೀಡಿದೆ.

ಮುಂದಿನ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿದೆ. ಬೆಳ್ಳಂದೂರು ಕೆರೆಯ ಮಾಲಿನ್ಯ ಈವರೆಗೆ ನೀಡಿರುವ ಪೀಠದ ಸೂಚನೆಗಳು ಎಷ್ಟರಮಟ್ಟಿಗೆ ಪಾಲನೆಯಾಗಿವೆ ಎಂಬುದರ ಬಗ್ಗೆ ಆ.22ರೊಳಗೆ ವರದಿ ನೀಡುವಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕಳೆದ ವಾರ ರಾಷ್ಟ್ರೀಯ ಹಸಿರು ನ್ಯಾಯಪೀಠವು ನೋಟಿಸ್‌ ನೀಡಿತ್ತು. ಆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಂಗಳವಾರ ಕೆರೆ ಸಂರಕ್ಷಣೆಯ ಕುರಿತು ಸಲ್ಲಿಸಿರುವ ವಿವರಗಳ ಬಗ್ಗೆ ಪೀಠ ಅಸಮಾಧಾನ ಸಹ ವ್ಯಕ್ತಪಡಿಸಿತು.

ಕೆರೆ ಹೂಳು ತೆರವು, ಘನ ತ್ಯಾಜ್ಯ ವಿಲೇವಾರಿ, ಕಟ್ಟಡ ಅವಶೇಷ ತ್ಯಾಜ್ಯ ತೆರವು, ಕೆರೆಯ ಸುತ್ತಮುತ್ತಲಿನ ಎಲ್ಲ ವಸತಿ ಸಮುಚ್ಚಯಗಳಲ್ಲಿನ ಹಾಲಿ ಹಾಗೂ ಹೊಸದಾಗಿ ನಿರ್ಮಾಣವಾಗಲಿರುವ ಕೊಳಚೆ ನೀರು ಸಂಸ್ಕರಣಾ ಘಟಕಗಳನ್ನು (ಸಾಮರ್ಥಯ, ತಂತ್ರಜ್ಞಾನ ಹಾಗೂ ಇತೆರ ಮಾನದಂಡಗಳು) ಮೇಲ್ದರ್ಜೆಗೇರಿಸುವುದು, ಕೆರೆಗೆ ಸೇರುವ ಕೊಳಚೆ ನೀರನ್ನು ಸಂಸ್ಕರಿಸಿ ಹರಿಸುವ ನಿಟ್ಟಿನಲ್ಲಿ ವಿಸ್ತೃತ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿತು.  

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಿಇಒ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಆದಿತ್ಯ ಸೋಂಧಿ ಅವರು ಒಟ್ಟಿಗೆ ಚರ್ಚಿಸಿ ಸಮಗ್ರವಾದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಪೀಠ ಹೇಳಿದೆ. ಹಿರಿಯ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಿ ನ್ಯಾಯಪೀಠಕ್ಕೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.  

Advertisement

ನಗರದಲ್ಲಿ ಇತ್ತೀಚೆಗೆ ಭಾರಿ ಮಳೆ ಸುರಿದ ವೇಳೆ ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡು ಸ್ಥಳೀಯರು ತೊಂದರೆ ಅನುಭವಿಸುವಂತಾಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಸ್ವತಂತ್ರಕುಮಾರ್‌ ನೇತೃತ್ವದ ಪೀಠವು ಆ.22ರ ವಿಚಾರಣೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿತ್ತು.    

ಈ ಕ್ಷಣವೇ ಆಯುಕ್ತರನ್ನು ಕಳುಹಿಸಿ ಪರಿಶೀಲನೆ ನಡೆಸಬಹುದೆ?  
ಕೆರೆ ಅಂಗಳದಲ್ಲಿನ ಘನ ತ್ಯಾಜ್ಯ, ಕಟ್ಟಡ ಅವಶೇಷ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂಬುದಾಗಿ ವಿಚಾರಣೆ ವೇಳೆ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಅವರು ಪ್ರಮಾಣ ಪತ್ರ ಸಲ್ಲಿಸಿದರು. ಆಗ ನ್ಯಾಯಪೀಠವು, ಕೆರೆ ಅಂಗಳ, ಬಫ‌ರ್‌ ಪ್ರದೇಶ, ಸುತ್ತಮುತ್ತಲ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಯಾಗಿದೆಯೇ ಎಂಬುದನ್ನು ಅಧಿಕೃತವಾಗಿ ದೃಢೀಕರಿಸುತ್ತೀರಾ ಎಂದು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪಾಧಿಕಾರದ ಸಿಇಒ ಅವರನ್ನು ಪ್ರಶ್ನಿಸಿತು.

ಈ ಕ್ಷಣವೇ ಆಯುಕ್ತರನ್ನು ಕೆರೆ ಪರಿಶೀಲನೆಗೆ ಕಳುಹಿಸಬಹುದೇ ಎಂದು ಕೇಳಿತು. ಆದರೆ, ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಅವರ ಹೇಳಿಕೆಯನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಿಇಒ ನಿರಾಕರಿಸಿದ್ದರಿಂದ ರಾಜ್ಯ ಸರ್ಕಾರದ ವಾದಕ್ಕೆ ಹಿನ್ನೆಡೆವುಂಟಾದಂತಾಯಿತು. ವಿಚಾರಣೆ ಸಂದರ್ಭದಲ್ಲಿ  ಹೆಚ್ಚುವರಿ ಅಡ್ವೋಕೇಟ್‌ ಜನರಲ್‌  ಆದಿತ್ಯ ಸೋಂಧಿ, ಕೆರೆಗೆ ಹರಿಯುತ್ತಿರುವ 480 ದಶಲಕ್ಷ ಲೀಟರ್‌ ಕೊಳಚೆ ನೀರಿನಲ್ಲಿ 308 ದಶಲಕ್ಷ ಲೀಟರ್‌ ಮಾತ್ರ ಸಂಸ್ಕರಣೆಯಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

Advertisement

Udayavani is now on Telegram. Click here to join our channel and stay updated with the latest news.

Next