Advertisement

ಕಡು ಬಡವರ ಸಮಸ್ಯೆ ಪರಿಹರಿಸುತ್ತಿರುವ ಕೇಂದ್ರ ಸರಕಾರ: ನಿರ್ಮಲಾ ಸೀತಾರಾಮನ್

07:57 PM Feb 21, 2021 | Team Udayavani |

ಬೆಂಗಳೂರು: ಬಡವರಿಗೆ ತಲುಪುವಂತಹ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಜನಪ್ರಿಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಿಳಿಸಿದರು.

Advertisement

ನಗರದ ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಬಿಜೆಪಿ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ “ಆರ್ಥಿಕ ಅವಲೋಕನ, ಆತ್ಮವಿಶ್ವಾಸದ ಭಾರತಕ್ಕಾಗಿ ಆತ್ಮನಿರ್ಭರ ಬಜೆಟ್” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಜ್ವಲ, ಉಜಾಲಾ, ಸ್ವನಿಧಿ, ಮುದ್ರಾ, ಜನೌಷಧಿ, ಕಿಸಾನ್ ಸಮ್ಮಾನ್‍ನಂಥ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರಕಾರವು ಬಡವರ ಸಮಸ್ಯೆಗಳನ್ನು ನಿವಾರಿಸಲು ಆದ್ಯತೆ ಕೊಟ್ಟಿದೆ ಎಂದು ವಿವರಿಸಿದರು.

ಹಿಂದೆ ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಚಿಂತನೆ ಸಹಜವಾಗಿತ್ತು. ದೀನ್ ದಯಾಳ ಉಪಾಧ್ಯಾಯರ “ಅಂತ್ಯೋದಯ” ಚಿಂತನೆಗಳೊಂದಿಗೆ ಅದನ್ನು ತೊಡೆದುಹಾಕಲು ಕೇಂದ್ರ ಸರಕಾರವು ಶ್ರಮಿಸುತ್ತಿದೆ. ಲೈಸನ್ಸ್ ರಾಜ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದೆ. ಹಿಂದಿನ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರಕಾರವು ಸುಸ್ಥಿರ ಆಡಳಿತ ನೀಡಲು ಶ್ರಮಿಸಿತು. ಈಗಿನ ಜನಪರ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರವು ಉಜ್ವಲ ಯೋಜನೆಯಡಿ ಈಗಾಗಲೇ 8 ಕೋಟಿ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡಿದ್ದು, ಈ ಬಜೆಟ್‍ನಡಿ ಮತ್ತೆ ಒಂದು ಕೋಟಿ ಅರ್ಹ ಬಡವರಿಗೆ ಉಚಿತ ಸಿಲಿಂಡರ್ ಸಂಪರ್ಕ ನೀಡಲು ಮುಂದಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ಖರಾಬು ದುನಿಯಾದ ಕಲೆಕ್ಷನ್ ಜೋರು…2 ದಿನದಲ್ಲಿ ಪೊಗರು ಬಾಚಿಕೊಂಡಿದ್ದು ಎಷ್ಟು ಕೋಟಿ ?

1969ರಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ನಡೆದರೂ ಬಡವರಿಗೆ ಅದರಿಂದ ವಿಶೇಷ ಪ್ರಯೋಜನ ಲಭಿಸಿರಲಿಲ್ಲ. ಆಧಾರ್ ಸಂಖ್ಯೆಯನ್ನು ಮೊಬೈಲ್‍ಗೆ ಸಂಪರ್ಕಿಸಿ ಜನಧನ್ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರಿಂದ ನಿಜವಾದ ಬಡವರಿಗೆ ಈ ಯೋಜನೆಯ ಪ್ರಯೋಜನ ಲಭಿಸುತ್ತಿದೆ ಎಂದು ತಿಳಿಸಿದರು.

Advertisement

ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆದಾರರ ಮೇಲೆ ನಂಬಿಕೆ ಇಡುವ ಮತ್ತು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಚಿಂತನೆಯಡಿ ದೇಶದ ಅಭಿವೃದ್ಧಿಗೆ ಬದ್ಧತೆ ತೋರುವ ಸರಕಾರ ನಮ್ಮದು. ಉದ್ಯೋಗ ಹೆಚ್ಚಿಸುವ ಮೂಲಸೌಕರ್ಯಕ್ಕೆ ಆದ್ಯತೆ ನೀಡಿ ಸುಸ್ಥಿರ ಪ್ರಗತಿ ನಮ್ಮದಾಗಿಸಲು ಸರಕಾರ ಮುಂದಾಗಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸದೆ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ ಎಂದು ಅವರು ತಿಳಿಸಿದರು.

ದೀರ್ಘಾವಧಿ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಜವಾಬ್ದಾರಿಯುತ ಚಿಂತನೆಯ ಬಜೆಟ್ ಅನ್ನು ನೀಡಲಾಗಿದೆ ಎಂದು ಅವರು ವಿಶ್ಲೇಷಿಸಿದರು. ಬಳಿಕ ಸಂವಾದದಲ್ಲೂ ಪಾಲ್ಗೊಂಡ ಅವರು, ಸಮಸ್ಯೆಗಳಿದ್ದರೆ ಅವುಗಳನ್ನು ನನ್ನ ಗಮನಕ್ಕೆ ತನ್ನಿ. ಅವುಗಳನ್ನು ಗಮನಿಸಿ ಪರಿಹರಿಸುವೆ ಎಂದು ತಿಳಿಸಿದರು.

ಆರ್ಥಿಕ ಪ್ರಕೋಷ್ಠದ ಸಂಚಾಲಕರಾದ ಶ್ರೀ ಸಮೀರ್ ಕಾಗಲ್ಕರ್, ಪ್ರಕೋಷ್ಠದ ಸಲಹೆಗಾರರಾದ ಶ್ರೀ ವಿಶ್ವನಾಥ ಭಟ್, ಸಹ ಸಂಚಾಲಕರಾದ ಶ್ರೀ ಕರಣ್ ಜವಾಜೆ, ಆಹ್ವಾನಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next