Advertisement

ಆಪರೇಷನ್‌ ಕಮಲ ತಡೆಗೆ ಮಂತ್ರಿ ಸ್ಥಾನ ತ್ಯಾಗಕ್ಕೆ ಸೂಚನೆ?

12:36 PM May 27, 2019 | Suhan S |

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಮೈತ್ರಿ ಪಕ್ಷಗಳ ನಾಯಕರು ಹೇಗಾದರೂ ಮಾಡಿ ಮೈತ್ರಿ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಬಿಜೆಪಿಯ ‘ಆಪರೇಷನ್‌ ಕಮಲ’ಕ್ಕೆ ಬ್ರೇಕ್‌ ಹಾಕಲು ಬಂಡಾಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಿ, ಸರ್ಕಾರದ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇದೇ ಕಾರಣಕ್ಕಾಗಿ ಕೆಲವು ಹಾಲಿ ಸಚಿವರಿಗೆ ಅಗತ್ಯ ಬಿದ್ದರೆ, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧರಾಗಿರಿ ಎಂಬ ಸಂದೇಶವನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. ಪ್ರಮುಖವಾಗಿ ಹಿರಿಯ ಸಚಿವರಾಗಿ ರುವ ಆರ್‌.ವಿ. ದೇಶಪಾಂಡೆ, ಕೆ.ಜೆ.ಜಾರ್ಜ್‌ ಅವರಿಗೂ ಸರ್ಕಾರ ಉಳಿಸಿಕೊಳ್ಳಲು ಸಹಕಾರ ನೀಡುವಂತೆ ಹೈಕಮಾಂಡ್‌ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಶಿವಶಂಕರ ರೆಡ್ಡಿ, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌, ಸಕ್ಕರೆ ಸಚಿವ ಆರ್‌.ಬಿ.ತಿಮ್ಮಾಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರಿಗೂ ಪರೋಕ್ಷವಾಗಿ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧರಿರುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೂ ಪರೋಕ್ಷ ರಾಜೀನಾಮೆ ಸಂದೇಶ ರವಾನಿಸಲಾಗಿದೆ. ಅತೃಪ್ತರ ಸಂಖ್ಯೆ ಹಾಗೂ ಮಂತ್ರಿ ಸ್ಥಾನ ನೀಡುವ ಅಗತ್ಯತೆಯ ಆಧಾರದಲ್ಲಿ ಸಚಿವರಿಂದ ರಾಜೀನಾಮೆ ಕೊಡಿಸುವ ಆಲೋಚನೆಯನ್ನು ರಾಜ್ಯ ಕಾಂಗ್ರೆಸ್‌ ನಾಯಕರು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಇರುವುದರಿಂದ ಮೊದಲ ಅವಧಿಯಲ್ಲಿ ಸಚಿವ ಸ್ಥಾನ ವಂಚಿತರಾಗಿರುವ ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಆಲೋಚನೆಯನ್ನು ರಾಜ್ಯ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ. ಈಗಾಗಲೇ ರಾಜ್ಯ ನಾಯಕರ ವಿರುದ್ಧ ಬಂಡಾಯ ಸಾರಿರುವ ಹಿರಿಯ ಶಾಸಕ ರೋಷನ್‌ ಬೇಗ್‌ ಹಾಗೂ ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅತೃಪ್ತರಾಗಿ ಮುನಿಸಿಕೊಂಡಿರುವ ಎಂ.ಕೃಷ್ಣಪ್ಪ ಅವರಿಗೂ ಸಚಿವ ಸ್ಥಾನ ನೀಡಿ ಸಮಾಧಾನ ಮಾಡಬೇಕೆಂಬ ಆಲೋಚನೆ ಪಕ್ಷದ ನಾಯಕರಲ್ಲಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದರು.

Advertisement

ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್‌ ಅವರು ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬೆನ್ನಲ್ಲೇ ನಡೆದ ಈ ಭೇಟಿ ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಸಹ ಉಪಸ್ಥಿತರಿದ್ದರು.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ಶಾಸಕರ ನಡೆ, ಆಪರೇಷನ್‌ ಕಮಲದ ಪ್ರಯತ್ನ, ಅದನ್ನು ತಡೆಯಲು ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು. ಬಿಜೆಪಿಯತ್ತ ದೃಷ್ಟಿ ಹಾಯಿಸಿರುವ ಕಾಂಗ್ರೆಸ್‌ ಶಾಸಕರನ್ನು ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಬಿಜೆಪಿ ಸಂಪರ್ಕದಲ್ಲಿರುವ ಶಾಸಕರನ್ನು ಕರೆದು ಖುದ್ದು ಮಾತನಾಡುವಂತೆ ಸಿದ್ದರಾಮಯ್ಯ ಅವರಿಗೂ ಸಿಎಂ ಮನವಿ ಮಾಡಿದರು. ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾದ ಕೆಲವು ಶಾಸಕರನ್ನು ಅಲ್ಲಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ, ಮುಂದೆ ಉತ್ತಮ ಅವಕಾಶಗಳಿವೆ. ಬಿಜೆಪಿಯ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.

ಸಿದ್ದರಾಮಯ್ಯ ಅವರ ಭೇಟಿಯ ನಂತರ ಸಚಿವ ಜಮೀರ್‌ ಅಹಮದ್‌ ಅವರೊಂದಿಗೂ ಕುಮಾರಸ್ವಾಮಿ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ‘ಆಪರೇಷನ್‌ ಕಮಲ’ ಕಾರ್ಯಾಚರಣೆ ವಿಫ‌ಲಗೊಳಿಸುವ ಸಂಬಂಧ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next