Advertisement

ಪ್ಲಾಸ್ಟಿಕ್‌ ನಿಷೇಧಕ್ಕೆ ಅಕ್ಟೋಬರ್‌ ಗಡುವು

09:48 AM Sep 08, 2019 | Team Udayavani |

ಹುಬ್ಬಳ್ಳಿ: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಸಂಪೂರ್ಣ ನಿಷೇಧಿಸುವ ಕುರಿತು ಅಕ್ಟೋಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಿದ್ದು, ಇದರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹೆಚ್ಚು ನಿಗಾ ವಹಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಘಟಕದ ಚೇರ್ಮನ್‌ ನ್ಯಾ| ಸುಭಾಷ ಅಡಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ಉತ್ಪಾದಿಸುವುದಷ್ಟೇ ಬಳಸುವುದೂ ಕಾನೂನು ಉಲ್ಲಂಘನೆಯಾಗಿದೆ. ವೈದ್ಯಕೀಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧೆಡೆ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಸೂಚಿಸಲಾಗಿದೆ. ಎಲ್ಲ ಕಡೆಗಳಲ್ಲೂ ಪ್ಲಾಸ್ಟಿಕ್‌ ನಿಷೇಧಕ್ಕೆ ಅಕ್ಟೋಬರ್‌ ಗಡುವು ನೀಡಲಾಗಿದೆ. ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಅನಿವಾರ್ಯವಾಗಲಿದೆ. ಕ್ರಮೇಣ ಪ್ಲಾಸ್ಟಿಕ್‌ ವಾಟರ್‌ ಬಾಟಲ್ ಬಳಕೆ ಕೂಡ ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಬಳಕೆದಾರರ ಮೇಲೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಟ್ಟಡ ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. ಬೇಕಾಬಿಟ್ಟಿಯಾಗಿ ಕಟ್ಟಡ ತ್ಯಾಜ್ಯ ಸಾಗಿಸುವಂತಿಲ್ಲ. ಪರವಾನಗಿ ಪಡೆದ ವಾಹನಗಳಲ್ಲಿ ಮಾತ್ರ ನಿಗದಿತ ಸ್ಥಳದಲ್ಲಿ ಸುರಿಯಬೇಕು. ಇದಕ್ಕಾಗಿ ಪಾಲಿಕೆ 12 ಸ್ಥಳಗಳನ್ನು ಗುರುತಿಸಿರುವುದಾಗಿ ಸಭೆಯಲ್ಲಿ ತಿಳಿಸಿದ್ದು, ಕೂಡಲೇ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಣೆ ಹೊರಡಿಸುವಂತೆ ಸೂಚಿಸಲಾಗಿದೆ. ಕಟ್ಟಡ ತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಿಯಮಗಳನ್ನು ಉಲ್ಲಂಘಿಸಿದವರ ಮೇಲೆ ದೊಡ್ಡ ಮೊತ್ತದ ದಂಡ ಹಾಕಬಹುದಾಗಿದೆ ಎಂದರು.

ಸಂಗ್ರಹಿಸಿದ ಕಟ್ಟಡ ತ್ಯಾಜ್ಯದಲ್ಲಿ ಮಣ್ಣನ್ನು ಹೊರತುಪಡಿಸಿ ಇತರೆ ಎಲ್ಲ ವಸ್ತುಗಳನ್ನು ಮರುಬಳಸಬೇಕು. ಇದರಲ್ಲಿ ಲೋಕೋಪಯೋಗಿ ಇಲಾಖೆ ಶೇ.20 ರಸ್ತೆ ನಿರ್ಮಾಣಕ್ಕೆ ಮಾತ್ರ ಎಂ ಸ್ಯಾಂಡ್‌ ಮಾದರಿಯಲ್ಲಿ ಬಳಸಬೇಕು ಎಂಬ ನಿಯಮವಿದೆ. ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ತ್ಯಾಜ್ಯ ಸಂಸ್ಕರಣ ಆರಂಭಿಸಲು ಸೂಚಿಸಲಾಗಿದೆ. 20 ಟನ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಟ್ಟಡ ತ್ಯಾಜ್ಯ ದೊರೆಯುತ್ತಿದ್ದರೆ ಅದರ ನಿರ್ವಹಣೆ ಕುರಿತು ಯೋಜನೆ ತಯಾರಿಸಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಸಿ ಪರವಾನಗಿ ಪಡೆಯವುದು ಕಡ್ಡಾಯ. ಇದನ್ನು ಉಲ್ಲಂಘಿಸಿದರೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ದಂಡ ಹಾಕಬಹುದು ಎಂದು ವಿವರಿಸಿದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿಜಯಕುಮಾರ ಖಡಕಬಾವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next