Advertisement

ಮಹಾನಗರ ಪಾಲಿಕೆಯಲ್ಲಿ ಆಪರೇಷನ್‌ ಹಸ್ತ

12:06 PM Apr 06, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಈಗಾಗಲೇ ವಿವಿಧ ಪಕ್ಷಗಳ ಪ್ರಮುಖ ನಾಯಕರ ಪಕ್ಷಾಂತರ ಪ್ರಾರಂಭವಾಗಿದ್ದು,
ಇದೀಗ ಪಾಲಿಕೆ ಸದಸ್ಯರನ್ನೂ ಸೆಳೆಯುವ ಕಸರತ್ತುಗಳು ಶುರುವಾಗಿವೆ.
ಬೆಂಗಳೂರು ದಕ್ಷಿಣ ಹಾಗೂ ಕೇಂದ್ರ ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ಪಾಲಿಕೆ ಸದಸ್ಯರಿಗೆ ಗಾಳ ಹಾಕಿರುವ ಕಾಂಗ್ರೆಸ್‌ ಮುಖಂಡರು, ಈಗಾಗಲೇ ಸದಸ್ಯರ ಜತೆ
ಒಂದು ಸುತ್ತಿನ ಮಾತುಕತೆ ಮುಗಿಸಿದ್ದಾರೆ.

Advertisement

ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಜತೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಲೇ ಬೇಕೆಂದು ಪಣತೊಟ್ಟಿರುವ ನಾಯಕರು ತಳಮಟ್ಟದ ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಯೋಜನೆ ರೂಪಿಸಿದ್ದಾರೆ.

ಅದರಂತೆ ಮೂರು ಕ್ಷೇತ್ರಗಳಲ್ಲಿನ ಬಿಜೆಪಿ ಪಾಲಿಕೆ ಸದಸ್ಯರೊಂದಿಗೆ ಮಾತುಕತೆ ನಡೆಸಿರುವ ಕಾಂಗ್ರೆಸ್‌ ನಾಯಕರು, ಪಕ್ಷಕ್ಕೆ ಬಂದರೆ ಸೂಕ್ತ
ಸ್ಥಾನಮಾನ ಕೊಡುವ ಭರವಸೆ ನೀಡಿದ್ದಾರೆ. ಜತೆಗೆ ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ನೀಡಿ, ಗೆಲ್ಲಿಸಿಕೊಂಡು ಬರುವ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಕೆಲ ಬಿಜೆಪಿ ಪಾಲಿಕೆ ಸದಸ್ಯರನ್ನು ಪಕ್ಷಕ್ಕೆ ಸೆಳೆಯುವ ಮಾತುಕತೆ ನಡೆದಿತ್ತಾದರೂ ಸಾಧ್ಯವಾಗಿರಲಿಲ್ಲ. ಪ್ರಸ್ತುತ ಮೊದಲ ಮಾತುಕತೆಯಲ್ಲಿ ಬಹುತೇಕ ಬಿಜೆಪಿ ಸದಸ್ಯರು
ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪ್ರಮುಖವಾಗಿ ಬಿಜೆಪಿ ಪಾಲಿಕೆ ಸದಸ್ಯರು ಹೆಚ್ಚಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳ 10 ಪಾಲಿಕೆ ಸದಸ್ಯರನ್ನು ಸೆಳೆಯುವ ಪ್ರಯತ್ನ
ನಡೆಯುತ್ತಿದೆ. ಆ ಪೈಕಿ ನಾಲ್ಕೈದು ಮಂದಿ ಆಹ್ವಾನವನ್ನು ತಿರಸ್ಕರಿಸಿದ್ದು, 6 ಸದಸ್ಯರು ನಮ್ಮೊಂದಿಗೆ ಬರುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಅಂತಿಮ ಮಾತುಕತೆ ನಡೆಸಿ ಅವರನ್ನು ಪಕ್ಷಕ್ಕೆ ಕರೆತರುವುದಾಗಿ ಕಾಂಗ್ರೆಸ್‌ ನಾಯಕರೊಬ್ಬರು ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next