ಶಿವಮೊಗ್ಗ: ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರೂ ಸಂಘಟಿತರಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಜನರ ಆರೋಗ್ಯ ಸ್ಥಿತಿ ಸುಧಾರಿತವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ. ಪುಟ್ಟಸ್ವಾಮಿ ಹೇಳಿದರು.
ಆರೋಗ್ಯ ಇಲಾಖಾ ನೌಕರರ ಸಂಘ ಹಾಗೂ ಆರೋಗ್ಯ ಇಲಾಖಾ ಲಿಪಿಕ ನೌಕರರ ಸಂಘದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಈ ನಿಟ್ಟಿನಲ್ಲಿ ಇಲಾಖೆ ವೈದ್ಯರು, ಸಿಬ್ಬಂದಿಗಳು ಅವಿರತ ಪರಿಶ್ರಮ ಪಡುತ್ತಿದ್ದಾರೆ. ಇಲಾಖೆಯಲ್ಲಿ ಹುದ್ದೆಗಳು ಸಾಕಷ್ಟು ಖಾಲಿ ಇದೆ. ಹೀಗಿದ್ದರು ಸಾರ್ವಜನಿಕರಿಗೆ ನೀಡುತ್ತಿರುವ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುತುವರ್ಜಿ ವಹಿಸಲಾಗುತ್ತಿದೆ. ವ್ಯವಸ್ಥೆಯನ್ನು ಸರಿದೂಗಿಸಿಕೊಂಡು ಹೋಗುತ್ತಿರುವುದರಿಂದ ಜನ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಚ್.ಕೆ. ರಾಮು ಸನ್ಮಾನ ಸ್ವೀಕರಿಸಿ ಮಾತನಾಡಿ, ಜವಾಬ್ದಾರಿಯುತ ಇಲಾಖೆಗಳಲ್ಲಿ ಆರೋಗ್ಯ ಇಲಾಖೆಯೂ ಒಂದಾಗಿದೆ. ಇಲಾಖೆ ಅಧಿಕಾರಿಗಳು ಹಾಗೂ ನೌಕರರರ ಸಮಸ್ಯೆ ಪರಿಹರಿಸಲು ರಾಜ್ಯ ಸಂಘ ಸ್ಪಂಧಿಸುತ್ತದೆ ಎಂದು ಹೇಳಿದರು. ಆರೋಗ್ಯ ಇಲಾಖಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾ.ಸ.ನಂಜುಂಡಸ್ವಾಮಿ ಮಾತನಾಡಿ, ಸಂಘಟನಾತ್ಮಕ ಶಕ್ತಿ ಇದ್ದರೆ ನೌಕರರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಆರ್. ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ
ಸಿ.ಎಸ್. ಷಡಾಕ್ಷರಿ, ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ| ಗುಡದಪ್ಪ ಕಸಬಿ ಹಾಗೂ ಇತರರನ್ನು ಸನ್ಮಾನಿಸಲಾಯಿತು. ಮಂಕುತಿಮ್ಮನ ಕಗ್ಗ ನಟೇಶ್ ಉಪನ್ಯಾಸ ನೀಡಿದರು.
ಡಿಎಚ್ಒ ಡಾ| ವೆಂಕಟೇಶ್, ಸಹಾಯಕ ಆಡಳಿತಾಧಿಕಾರಿ ಕೆ. ಈಶ್ವರಪ್ಪ, ವಾಸುದೇವ್, ಆರೋಗ್ಯ ಇಲಾಖೆ ಜಿಲ್ಲಾ
ಕಾರ್ಯಾಧ್ಯಕ್ಷ ವಿ. ಪ್ರಭಾಕರ್, ಮಾಜಿ ಅಧ್ಯಕ್ಷ ಏಸುದಾಸ್ ಮತ್ತಿತರರು ಇದ್ದರು. ಅನ್ನಪೂರ್ಣ ಪ್ರಾರ್ಥಿಸಿದರು. ವೈ.
ಜೆ. ಶಶಿಕುಮಾರ್ ನಿರೂಪಿಸಿದರು. ಆರ್. ರಾಘವೇಂದ್ರ ಸ್ವಾಗತಿಸಿದರು. ಅಕ್ತರ್ ವಂದಿಸಿದರು.