Advertisement

ಸುಲಿಗೆಗೆ ನಿಂತ ಆಸ್ಪತ್ರೆಗಳ ವಿರುದ್ಧ ಆಕ್ರೋಶ

09:43 AM Aug 05, 2020 | Suhan S |

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ದುಪ್ಪಟ್ಟು ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಮುಗಿಬಿದ್ದ ಪಾಲಿಕೆ ಸದಸ್ಯರು, ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿವೆ ಇಂತಹ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪಕ್ಷಾತೀತವಾಗಿ ಒತ್ತಾಯಿಸಿದರು.

Advertisement

ಮಂಗಳವಾರ ಪಾಲಿಕೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪಾಲಿಕೆ ಸದಸ್ಯ ಹಾಗೂ ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ನಗರದ ಹಲವು ಖಾಸಗಿ ಆಸ್ಪತ್ರೆಗಳು ಸೋಂಕಿತರ ಚಿಕಿತ್ಸೆ ವಿಚಾರದಲ್ಲಿ ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ. 6ರಿಂದ 7ಲಕ್ಷ ರೂ. ಶುಲ್ಕ ವಿಧಿಸಲಾಗುತ್ತಿದೆ. ಸೋಂಕಿನಿಂದ ಮೃತ  ಪಟ್ಟವರ ಶವವನ್ನೂ ಹಿಂದಿರುಗಿಸುತ್ತಿಲ್ಲ. ಮಾನವೀಯತೆ ಮರೆತ ಇಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಿತ್ಯ ಜನರಿಂದ ದೂರುಗಳು ಬರುತ್ತಿವೆ. ಸರ್ಕಾರವೂ ವೆಚ್ಚ ಭರಿಸುತ್ತಿದೆ. ಸರ್ಕಾರದ ಹಣ ಹೇಗೆ ಪಡೆದುಕೊಳ್ಳಬೇಕು ಹಾಗೂ ಸಾರ್ವಜನಿಕರು ಈ ಬಗ್ಗೆ ಯಾರಿಗೆ ದೂರು ನೀಡಬೇಕು ಎನ್ನುವ ಬಗ್ಗೆ ನಿಖರವಾದ ಮಾಹಿತಿ ನೀಡಿದರೆ, ಸಾರ್ವಜನಿಕರು ನಿಟ್ಟುಸಿರು ಬಿಡಲಿದ್ದಾರೆ. ಅಲ್ಲದೆ, ಸುವರ್ಣ ಆರೋಗ್ಯ ಟ್ರಸ್ಟ್‌ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.

ದನಿಗೂಡಿಸಿದ ಮಾಜಿ ಮೇಯರ್‌ ಸಂಪತ್‌ ರಾಜ್‌, ನಗರದಲ್ಲಿ ಖಾಸಗಿ ಸಾಮಾನ್ಯ ಜನರಿಗೆ ಲಕ್ಷಾಂತರ ರೂ. ಶುಲ್ಕ ವಿಧಿಸುತ್ತಿವೆ. ಈ ನಿಟ್ಟಿನಲ್ಲಿ ಪಾಲಿಕೆಯಿಂದ ಕಠಿಣ ಸಂದೇಶ ರವಾನೆಯಾಗಬೇಕಿದೆ ಎಂದು ಒತ್ತಾಯಿಸಿದರು. ಆಡಳಿತ ಪಕ್ಷದ ಮಾಜಿ ನಾಯಕ ಎಂ. ಶಿವರಾಜು ಮಾತನಾಡಿ, ಸರ್ಕಾರ ಶಿಫಾರಸು ಮಾಡುವ ರೋಗಿಗಳನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿವೆ. ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಊಟವೂ ಸರಿಯಾಗಿಲ್ಲಎಂದು ದೂರಿದರು.

ಪ್ರತಿಕ್ರಿಯಿಸಿದ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌, ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಇದುವರೆಗೆ ಬಿಬಿಎಂಪಿ ಆಯುಕ್ತರಿಗೆ ಇರಲಿಲ್ಲ. ಜಿಲ್ಲಾಧಿಕಾರಿಗಳಿಗೆ ಮಾತ್ರ ಇತ್ತು. ಇದೀಗ ಬಿಬಿಎಂಪಿ ಆಯುಕ್ತರು ಸಹ ಕ್ರಮ ತೆಗೆದು ಕೊಳ್ಳಬಹುದಾಗಿದ್ದು, ಯಾವುದೇ ಖಾಸಗಿ ಆಸ್ಪತ್ರೆ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚು ಶುಲ್ಕ ವಿಧಿಸಿದರೆ ಹಾಗೂ ಹಾಸಿಗೆಗಳ ಬಗ್ಗೆ ಸುಳ್ಳು ಮಾಹಿತಿ ನೀಡಿದರೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Advertisement

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಗಳು ತಮ್ಮದೆ ಆದ ಸಮಸ್ಯೆಗಳನ್ನು ಹೇಳಿಕೊಂಡಿವೆ. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಅಲ್ಲದೆ, ಮೂಲಸೌಕರ್ಯ ವ್ಯವಸ್ಥೆ ಇಲ್ಲ ಎಂದು ಹೇಳಿವೆ. ಹೀಗಾಗಿ ಎಷ್ಟು ಹಾಸಿಗೆಗಳನ್ನು ಸಕ್ರಿಯವಾಗಿ ಬಳಸಲಾಗುತ್ತಿದೆ ಎಂಬುದರ ಮಾಹಿತಿ ನೀಡಿ ಎಂದು ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಆ. 5ಕ್ಕೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು ಎಂದು ಆಯುಕ್ತರು ಸಭೆಗೆ ತಿಳಿಸಿದರು.

ನಿವೇಶನ ಮಾತ್ರ ಸಕ್ರಮ : ಬಿಡಿಎ ವತಿಯಿಂದ ಸುಮಾರು ಆರು ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಂಡು ಲೇಔಟ್‌ ನಿರ್ಮಿಸಿದೆ. ಆದರೆ, 12 ವರ್ಷಕ್ಕಿಂತ ಮೊದಲೇ ಬಿಡಿಎ ಆಸ್ತಿಯಲ್ಲಿ ಅನಧಿಕೃತ ಒತ್ತುವರಿ ಮಾಡಿಕೊಂಡು ಕಟ್ಟಡ ಅಥವಾ ಮನೆ ನಿರ್ಮಿಸಿದ್ದರೆ ಅವರ ನಿವೇಶನಗಳನ್ನು ಮಾತ್ರ ಬಿಡಿಎ ಸಕ್ರಮ ಮಾಡುತ್ತಿದೆ. ಮನೆ ಅಥವಾ ಕಟ್ಟಡಕ್ಕೆ ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆಯದ ಕಾರಣ ಅದನ್ನೂ ಅನಧಿಕೃತ ಕಟ್ಟಡ ಎಂದು ಪರಿಗಣಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.

ವಾರಿಯರ್ಸ್‌ಗೆ ಆಸ್ಪತ್ರೆ : ಶಿವಾಜಿನಗರದ ಬ್ರಾಡ್‌ವೇ ಬಿಬಿಎಂಪಿ ಆಸ್ಪತ್ರೆಯಲ್ಲಿ ಶೇ. 50ರಷ್ಟು ಹಾಸಿಗೆಯನ್ನು ಕೋವಿಡ್ ವಾರಿಯರ್ಸ್‌ ಚಿಕಿತ್ಸೆಗೆ ಮೀಸಲಿಡಲಿದ್ದೇವೆ ಎಂದು ಆಯುಕ್ತರು ತಿಳಿಸಿದರು. ಬಿಬಿಎಂಪಿ ಹಾಗೂ ಇನ್ಫೋಸಿಸ್‌ ಪ್ರತಿಷ್ಠಾನದ ಸಹಯೋಗದಲ್ಲಿ ಶಿವಾಜಿನಗರದ ಬ್ರಾಡ್‌ವೇ ಬಿಬಿಎಂಪಿ ಆಸ್ಪತ್ರೆಯನ್ನು 30 ಕೋಟಿ ವೆಚ್ಚದಲ್ಲಿ 30 ವೆಂಟಿಲೇಟರ್‌ ಸೇರಿದಂತೆ 200 ಹಾಸಿಗೆಯ ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಸೇರಿದಂತೆ ಫ್ರಂಟ್‌ ಲೈ ನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸೂಕ್ತ ಚಿಕಿತ್ಸೆಗಾಗಿ ಬಿಬಿಎಂಪಿ ಬ್ರಾಡ್‌ವೇ ಆಸ್ಪತ್ರೆಯಲ್ಲಿ ಶೇ. 50ರಷ್ಟು ಹಾಸಿಗೆ ಮೀಸಲಿಡುವ ಕುರಿತು ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಶೇ. 50 ಅನುದಾನ ಬಿಡುಗಡೆ : ನಗರದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿ ವಾರ್ಡ್‌ಗೆ 20 ಲಕ್ಷ ಅನುದಾನ ಮೀಸಲಿಟ್ಟಿದ್ದು, ಪಾಲಿಕೆಯ ಆರ್ಥಿಕ ಪರಿಸ್ಥಿತಿ ಸದ್ಯ ಸುಧಾರಿಸಬೇಕಿದೆ. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿಲ್ಲ. ಹೀಗಾಗಿ, ಶೇ. 50ರಷ್ಟು ಮೊದಲ ಹಂತದಲ್ಲಿ 10 ಲಕ್ಷ ರೂ. ಬಿಡುಗಡೆ ಮಾಡಲಾಗುವುದು. ನಂತರ ಉಳಿದ ಅನುದಾನ ಬಿಡುಗಡೆ ಮಾಡಲಾಗುವುದು. ಇನ್ನು ಪಾಲಿಕೆ ಸದಸ್ಯರ ವೈದ್ಯಕೀಯ ಪರಿಹಾರ ನಿಧಿಗೆ ವಾರ್ಡ್‌ವಾರು ಹತ್ತು ಲಕ್ಷ ರೂ. ಮೀಸಲಿಟ್ಟಿದ್ದು, ಸದ್ಯಕ್ಕೆ ಶೇ. 15ರಷ್ಟು ಅಂದರೆ, 1.5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಆಯುಕ್ತರು ಮಾಹಿತಿ ನೀಡಿದರು.

ಪ್ರಮುಖ ನಿರ್ಣಯಗಳು :

1. ಮಾಗಡಿ ರಸ್ತೆಯಲ್ಲಿರುವ ನಮ್ಮ ಮೆಟ್ರೋ ನಿಲ್ದಾಣಕ್ಕೆ ಡಾ.ರಾಜ್‌ಕುಮಾರ್‌ ಮೆಟ್ರೋ ನಿಲ್ದಾಣ ಎಂದು ನಾಮಕರಣ

2. ಅರಮನೆ ನಗರ ಸರ್ಕಲ್‌ ಮಾರಮ್ಮ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ನಿರ್ಮಾಣ

3. ಮತ್ತಿಕೆರೆ ದಿನಾರಪಾಳ್ಯದಲ್ಲಿರುವ ಅಟಲ್‌ಜಿ ಉದ್ಯಾನದಲ್ಲಿ ದಿ. ಅಟಲ್‌ ಬಿಹಾರಿ ವಾಜಪೇಯಿ ಪ್ರತಿಮೆ ನಿರ್ಮಾಣ

Advertisement

Udayavani is now on Telegram. Click here to join our channel and stay updated with the latest news.

Next