Advertisement

ಗ್ರಾಪಂ ನೌಕರರೂ ಸೇನಾನಿಗಳು : ಕಂದಾಯ ಇಲಾಖೆ ಸಿಬಂದಿಯ ಸೌಲಭ್ಯಗಳು ವಿಸ್ತರಣೆ

01:21 AM May 27, 2021 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಿಬಂದಿಯನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ ಕಂದಾಯ ಇಲಾಖೆ ಸಿಬಂದಿಗೆ ನೀಡುತ್ತಿರುವ ಸೌಲಭ್ಯಗಳನ್ನೇ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

Advertisement

ಬುಧವಾರ ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ಅವರು ಸಂವಾದ ನಡೆಸಿದರು.

ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯತ್‌ ಅಧ್ಯಕ್ಷರ ಮನವಿಗೆ ಸ್ಪಂದಿಸಿ ಅವರು ಈ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಸಿಎಂ, ಕೊರೊನಾ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.

50 ಸಾವಿರ ರೂ. ಬಿಡುಗಡೆ
ಕಳೆದ ವಾರ ಘೋಷಿಸಿದ ಪ್ಯಾಕೇಜ್‌ನಲ್ಲಿ ಎಲ್ಲ ಗ್ರಾ.ಪಂ.ಗಳಿಗೂ ಎಸ್‌ಡಿಆರ್‌ಎಫ್ ನಿಧಿಯಿಂದ ತಲಾ 50,000 ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನ ಹಾಗೂ ಗ್ರಾ.ಪಂ.ನ ಸ್ವಂತ ಸಂಪನ್ಮೂಲವನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದರು.
ಕೋವಿಡ್‌ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸ ಬೇಕು ಎಂದು ತಿಳಿಸಿದರು.

ಅಧ್ಯಕ್ಷರಿಗೆ ಅಭಿನಂದನೆ
ಬಳ್ಳಾರಿ ಜಿಲ್ಲೆಯ ಅಲಬೂರು ಗ್ರಾ.ಪಂ. ಅಧ್ಯಕ್ಷ ಶಿವಾನಂದಪ್ಪ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಕ್ರಿಯ ಪ್ರಕರಣಗಳನ್ನು 36ರಿಂದ 1ಕ್ಕೆ ಇಳಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಶಾಂತಿ ಸಭೆಗಳನ್ನು ನಡೆಸಿ, ಜಾತ್ರೆ ಇತ್ಯಾದಿ ನಡೆಸದಂತೆ ಗ್ರಾಮಸ್ಥರ ಮನವೊಲಿಸಿರುವುದಾಗಿ ಶಿವಾನಂದಪ್ಪ ಮಾಹಿತಿ ನೀಡಿದರು.

Advertisement

ಮೈಸೂರು ಜಿಲ್ಲೆ ವರುಣಾ ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ಮಾತನಾಡಿ, ಮನೆ ಮನೆಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮನವರಿಕೆ ಮಾಡಿ ಕೊಡಲಾಗಿದೆ ಎಂದರು.

ಶಿವಮೊಗ್ಗ ಜಿಲ್ಲೆಯ ಅರಕೇರಿ ಗ್ರಾ.ಪಂ. ಅಧ್ಯಕ್ಷ ಭಾಸ್ಕರ್‌ ಮಾತನಾಡಿ, ಗ್ರಾಮದಲ್ಲಿ ಸೋಂಕಿತರ ಪತ್ತೆಯಾದಾಗ, ಅವರ ಮನೆಗೇ ಔಷಧ, ಆಹಾರ ವಸ್ತುಗಳನ್ನು ಒದಗಿಸಲಾಗಿದೆ ಎಂದರು.

ಗ್ರಾಮೀಣ ಮನೆಗಳು ಸಣ್ಣದಾಗಿರುವ ಕುಟುಂಬ ಗಳಲ್ಲಿ ಸೋಂಕು ಕಾಣಿಸಿಕೊಂಡರೆ ಸೋಂಕಿತರನ್ನು ಕಡ್ಡಾಯವಾಗಿ ಕೇರ್‌ ಸೆಂಟರ್‌ಗಳಿಗೆ ದಾಖಲಿಸುವಂತೆ ಸಿಎಂ ಎಲ್ಲ ಗ್ರಾ.ಪಂ.ಗಳ ಅಧ್ಯಕ್ಷರಿಗೆ ಸೂಚಿಸಿದರು.

ಗ್ರಾ.ಪಂ.ಗಳಲ್ಲಿ ಹೆಲ್ಪ್ ಡೆಸ್ಕ್
ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್‌ ಗಳಲ್ಲಿ ಹೆಲ್ಪ್ಡೆಸ್ಕ್ ಮತ್ತು ಹಾಗೂ ಹೆಲ್ಪ್ಲೈನ್‌ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆ ಗಳ ಜತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಮತ್ತು ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಗೊಳಗಾಗಿದ್ದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರೂ ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ಮಕ್ಕಳ ರಕ್ಷಣಾ ಸಮಿತಿಗಳಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಟಾಸ್ಕ್ಫೋರ್ಸ್‌ ಪಾತ್ರ ಮುಖ್ಯ
ಕೋವಿಡ್‌ 19 ಮೊದಲ ಅಲೆಯನ್ನು ಯಶಸ್ವಿಯಾಗಿ ನಿಯಂತ್ರಿಸುವಲ್ಲಿ ಗ್ರಾ.ಪಂ. ಟಾಸ್ಕ್ ಫೋರ್ಸ್‌ ಗಳು ಮಹತ್ವದ ಪಾತ್ರ ವಹಿಸಿವೆ. ಇದೀಗ ಎರಡನೇ ಅಲೆಯನ್ನೂ ನಿಯಂತ್ರಿಸುವಲ್ಲಿ ಈ ಟಾಸ್ಕ್ಫೋರ್ಸ್‌ ಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ವೀಡಿಯೋ ಸಂವಾದದ ಸಂದರ್ಭ ಮಾತನಾಡಿದ ಅವರು, ಸೋಂಕಿತರನ್ನು ಕೇರ್‌ ಸೆಂಟರ್‌ ಗಳಿಗೆ ದಾಖಲಿಸುವಲ್ಲಿ ಟಾಸ್ಕ್ ಫೋರ್ಸ್‌ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದರು. ಕಂಟೈನ್‌ ಮೆಂಟ್‌ ಝೊàನ್‌ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ನರೇಗಾ ಕಾಮಗಾರಿ ನಡೆಸುತ್ತಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next