Advertisement

40% ಕಮಿಷನ್‌ ಸರ್ಕಾರದ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ: ಸಿದ್ದರಾಮಯ್ಯ

09:36 PM Nov 06, 2022 | Team Udayavani |

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೂಗೆಯಲು ಜನರು ಈಗಾಗಲೇ ಸಂಕಲ್ಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದರು.

Advertisement

ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸರ್ವೋದಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬಿಜೆಪಿ ಇದೀಗ ಜನಸಂಕಲ್ಪ ಯಾತ್ರೆ ನಡೆಸುತ್ತಿದೆ. ಆದರೆ ಶೇ.40% ಕಮಿಷನ್‌ ಸರ್ಕಾರದ ಆಡಳಿತ ವೈಖರಿಯಿಂದ ನಾಡಿನ ಜನತೆ ರೋಸಿ ಹೋಗಿದ್ದು ಬಿಜೆಪಿಯನ್ನು ಕಿತ್ತೂಗೆಯಲು ಜನರು ಸಂಕಲ್ಪ ಮಾಡಿದ್ದಾರೆಂದು ವಾಗ್ಧಾಳಿ ನಡೆಸಿದರು.

ಇಂತಹ ಭಂಡ ಸರ್ಕಾರವನ್ನು ನಾವೆಂದೂ ನೋಡಿರಲಿಲ್ಲ. ಕಮಿಷನ್‌ ಇಲ್ಲದೆ ಯಾವ ಕೆಲಸವೂ ನಡೆಯುತ್ತಿಲ್ಲ. ಈಗಾಗಲೇ ಕಂಟ್ರಾಕ್ಟರ್‌ ಅಸೋಸಿಯೇಷನ್‌ ಪರ್ಸೆಂಟೆಜ್‌ ಬಗ್ಗೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದೆ. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಂಟ್ರಾಕ್ಟರ್‌ ಸಂತೋಷ್‌ ಪಾಟೀಲ್‌ ಕೂಡ ಆತ್ಮಹತ್ಯೆ ಪತ್ರ ಬರೆದು ಸಾವೀಗಿಡಾದ. ಈಗ ಮತ್ತೊಬ್ಬರು ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ ಎಂದರು.

ಇದರ ಬೆನ್ನಲ್ಲೇ ಇನ್ಸ್‌ಪೆಕ್ಟರ್‌ ನಂದೀಶ್‌ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ. ಆತ ಎಷ್ಟು ಹಣ ನೀಡಿದ್ದ ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಚಿವರೇ ಹೇಳಿದ್ದಾರೆ ಎಂದು ಟೀಕಿಸಿದರು.

ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ: ಕಾಂಗ್ರೆಸ್‌ ಪಕ್ಷಕ್ಕೆ ಮತ್ತೆ ಶಕ್ತಿ ಬಂದಿದೆ. ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ನಾವೆಲ್ಲರೂ ಒಟ್ಟಾಗಿ ಮತ್ತೆ ಹೋರಾಟ ನಡೆಸಿ ಕಾಂಗ್ರೆಸ್‌ ಅಧಿಕಾರಕ್ಕೆ ತಂದೇ ತರುತ್ತೇವೆಂದು ಸಂಕಲ್ಪ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷ ಆಯಿತು, ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ರೈತರ, ಬಡವರ, ದೀನ ದಲಿತರ ವಿರೋಧಿ ಕೋಮುವಾದ ಬಿಜೆಪಿಯನ್ನು ಕಿತ್ತೂಗೆಯಲು ಕಾಂಗ್ರೆಸ್‌ ಕಾರ್ಯಕರ್ತರು ಕೂಡ ಪಣ ತೊಟ್ಟಿದ್ದಾರೆ ಎಂದರು.

Advertisement

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಮಿಕರ ಮಗನಾಗಿ, ಶೋಷಿತ ವರ್ಗದ ಧ್ವನಿಯಾಗಿ ಬ್ಲಾಕ್‌ ಕಾಂಗ್ರೆಸ್‌ ಮಟ್ಟದಿಂದ ರಾಷ್ಟ್ರೀಯ ಕಾಂಗ್ರೆಸ್‌ವರೆಗೂ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ರಾಜ್ಯವಷ್ಟೇ ಅಲ್ಲ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂದರು. ರಾಜ್ಯದ 40 ಪರ್ಸೆಂಟೇಜ್‌ ಸರ್ಕಾರವನ್ನು ಕಿತ್ತೂಗೆಯುವ ನಿಟ್ಟಿನಲ್ಲಿ ಮತ್ತಷ್ಟು ಕೆಲಸ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಈ ಹಿಂದೆ ಬಿಜೆಪಿಯವರು ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ ಎಂದು ಟೀಕಿಸುತ್ತಿದ್ದರು. ಆದರೆ ಅದಕ್ಕೆ ಈಗ ಉತ್ತರ ದೊರೆತಿದೆ. ಬಿಜೆಪಿಯವರಿಗೆ ಚುನಾವಣೆ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡುವ ತಾಕತ್ತು ಇಲ್ಲವಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಕಾರ್ಮಿಕ ಸಚಿವರಾಗಿ ಉತ್ತಮ ಕೆಲಸ ಮಾಡಿದರು. ಇದೀಗ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು ಮುಂದಿನ ದಿನಗಳಲ್ಲಿ ಯುಪಿಎ ಮಾದರಿಯ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮದ್‌, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿ.ಎಸ್‌.ಉಗ್ರಪ್ಪ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ ಸೇರಿ ಮಾಜಿ ಸಚಿವರು, ಹಾಲಿ ಕಾಂಗ್ರೆಸ್‌ ಶಾಸಕರು ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರರಿಂದ ಕಾಲಹರಣ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿ ಸರ್ಕಾರ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿತ್ತು. ಜತೆಗೆ ಡಬಲ್‌ ಎಂಜಿನ್‌ ಸರ್ಕಾರ ರೈತರ ಆದಾಯ ದ್ವಿಗುಣ ಮಾಡುವ ಆಶ್ವಾಸನೆ ನೀಡಿತ್ತು. ಆದರೆ ಸೋಲಾರ್‌ ಸಬ್ಸಿಡಿ ಬಗ್ಗೆ ಭರವಸೆ ನೀಡಿತ್ತು. ಆದರೆ ಈಗ ನಾಡಿನ ಜನತೆಗೆ ನೀಡಿದ ಭರವಸೆ ಈಡೇರಿಸದೆ ಕೇವಲ ಕಾಲಹರಣ ಮಾಡುತ್ತಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next