Advertisement

ಜನರಿಗೆ ಆರೋಗ್ಯ ರಕ್ಷಣೆ, ಚಿಕಿತ್ಸೆಗಳ ಅರಿವು ಅಗತ್ಯ

09:33 PM Aug 29, 2019 | Team Udayavani |

ಹಾಸನ: ಆರೋಗ್ಯ ಸಂರಕ್ಷಣೆ ಹಾಗೂ ವೈದ್ಯಕೀಯ ಚಿಕಿತ್ಸಾ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅಭಿಪ್ರಾಯಪಟ್ಟರು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌) ಸಭಾಂಗಣದಲ್ಲಿ ಗುರುವಾರದಿಂದ ಆರಂಭವಾದ ಮೂರು ದಿನಗಳ ವೈದ್ಯಕೀಯ ವಸ್ತು ಪ್ರದರ್ಶನ ಕ್ಲಿನಿಲಾಜಿಕ್‌ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಸ್ತು ಪ್ರದರ್ಶನವು ಬಹಳ ಚೆನ್ನಾಗಿ ರೂಪುಗೊಂಡಿದ್ದು, ಸಾರ್ವಜನಿಕರಿಗೆ ಮಾಹಿತಿ ತಲುಪಲು ಸಹಕಾರಿಯಾಗಿದೆ ಎಂದರು.

Advertisement

ಅಪಘಾತ ಮತ್ತಿತರ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ವೈದ್ಯರ ಬಳಿ ಕರೆದೊಯ್ದು ಚಿಕಿತ್ಸೆ ಕೊಡಿಸಲು ವಿಳಂಬ ಮಾಡಬಾರದು. ಮಾಹಿತಿ ಕೊರತೆಯಿಂದ ಬಹಳಷ್ಟು ಸಮಯ ವೈದ್ಯರ ಬಳಿ ಹೋಗಲು ತಡ ಮಾಡುವುದರಿಂದ ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಲು ತೊಂದರೆಯಾಗುವ ಸಾಧ್ಯತೆ ಹೆಚ್ಚು ಇರುತ್ತದೆ. ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ಮಾಡುವ ಬಗ್ಗೆ ಮಾಹಿತಿ ಇರಬೇಕು. ಆದರೆ ಮಾಹಿತಿ ಕೊರತೆಯಿಂದ ಸಾವುಗಳು ಸಂಭವಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರದ ಸೌಲಭ್ಯ ಸದ್ಬಳಕೆಯಾಗಲಿ: ಸರ್ಕಾರದ ವಿವಿಧ ಯೋಜನೆಗಳಡಿ ದೊರಕುವ ಆರೋಗ್ಯ ಸೇವಾ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಲು ಅರಿವು ಮೂಡಿಸಬೇಕು. ಮಾಹಿತಿ ಕೊರತೆಯಿಂದ ಬಳಲುವ ಅನೇಕ ರೋಗಿಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ಅನುಕೂವಾಗಲಿದ್ದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಆರೋಗ್ಯದ ಅರಿವು ಮೂಡಿಸಿ: ಸಾರ್ವಜನಿಕರಿಗೆ ಪ್ರಥಮ ಚಿಕಿತ್ಸೆ, ಆರೋಗ್ಯ ಸಂರಕ್ಷಣಾ ವಿಧಾನಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಬೇಕು ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿಯೂ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಆರೋಗ್ಯ ಕಾಳಜಿ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್‌ ಮಾತನಾಡಿ, ಆರೋಗ್ಯದ ಜೊತೆಗೆ ಶಿಕ್ಷಣವನ್ನೂ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರಥಮ ಚಿಕಿತ್ಸೆಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಈಗಾಗಲೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿಯಿದೆ ಎಂದರು. ಎಸ್‌ಡಿಎಂ ಆರ್ಯುವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ಎನ್‌.ರಾವ್‌ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಪೌಷ್ಟಿಕ ಆಹಾರ ಸೇವನೆ ಉತ್ತಮವಾಗಿದೆ ಎಂದು ಹೇಳಿದರು.

ಶಾಲಾ ಮಕ್ಕಳು ವೀಕ್ಷಿಸಲಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಮಾಜ ಸೇವಕ ಡಾ.ಗುರುರಾಜ್‌ ಹೆಬ್ಟಾರ್‌ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಈ ವಸ್ತು ಪ್ರದರ್ಶನವನ್ನು ವೀಕ್ಷಿಸುವಂತಾಗಬೇಕು ಎಂದರು.

Advertisement

ವೈದ್ಯಕೀಯ ಅಧೀಕ್ಷಕ‌ ಡಾ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಹಿಮ್ಸ್‌ ಆಡಳಿತಾಧಿಕಾರಿ ಕಲ್ಪಶ್ರೀ, ಹಿಮ್ಸ್‌ ನ ನಿವಾಸಿ ವೈದ್ಯಾಧಿಕಾರಿ ಡಾ. ಪ್ರಸನ್ನ ಕುಮಾರ್‌, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಿ.ಎನ್‌, ಶಿವಪ್ರಸಾದ್‌ ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸೊಸೈಟಿಯ ಅಧ್ಯಕ್ಷ ಎಚ್‌.ಪಿ. ಮೋಹನ್‌, ಅನನ್ಯ ಟ್ರಸ್ಟ್‌ ನ ಸಂಸ್ಥಾಪಕಿ ಕೆ.ಟಿ. ಜಯಶ್ರೀ ಸಮಾಜ ಸೇವಕರಾದ ಅಮ್ಜದ್‌ ಖಾನ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನುರಿತ ವೈದ್ಯರಿಂದ ತರಬೇತಿ: ರೋಗಿಗಳ ಹಾಗೂ ವೈದ್ಯರ ಬಾಂಧವ್ಯ ಉತ್ತಮವಾಗಿದ್ದಾಗ ಮಾತ್ರ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಹಿಮ್ಸ್‌ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್‌ ಹೇಳಿದರು. ಸಂಸ್ಥೆಯು ಅನೇಕ ಆರೋಗ್ಯ ಸಂರಕ್ಷಣಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನುರಿತ ವೈದ್ಯರಿಂದ ತರಬೇತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಾರ್ವಜನಿಕರಲ್ಲಿ ತಿಳಿವಳಿಕೆ ಕೊರತೆ, ಮೂಢನಂಬಿಕೆಯಿಂದ ಆರೋಗ್ಯ ನಿರ್ಲಕ್ಷಿಸುತ್ತಾರೆ ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಈ ವಸ್ತು ಪ್ರದರ್ಶನ ಸಹಕಾರಿಯಾಗಿದೆ.
-ಸಾವಿತ್ರಿ, ಐಎಂಎ ಹಾಸನ ಶಾಖೆ ಉಪಾಧ್ಯಕ್ಷೆ

Advertisement

Udayavani is now on Telegram. Click here to join our channel and stay updated with the latest news.

Next